'ಚನ್ನಪಟ್ಟಣದಲ್ಲಿ ಗೆಲ್ಲಲು ಸಾಮಾನ್ಯ ಕಾರ್ಯಕರ್ತ ಸಾಕು'
ರಾಮನಗರ, ಡಿಸೆಂಬರ್ 05 : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ರಾಮನಗರದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸುವುದೇ ನಮ್ಮ ಗುರಿ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಚನ್ನಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್, 'ಯಾವುದೇ ಕ್ಷೇತ್ರದಲ್ಲಿ ಯಾರೊಂದಿಗೂ ಮೈತ್ರಿ, ರಾಜಿ ಮಾಡಿಕೊಳ್ಳುವುದಿಲ್ಲ. ಹೊಂದಾಣಿಕೆ ಮಾಡಿಕೊಳ್ಳುತ್ತೇವೆ' ಎಂಬುದು ಸುಳ್ಳು ಎಂದರು.
'ಪಕ್ಷಕ್ಕೆ ದ್ರೋಹ ಬಗೆಯುವುದು ತಾಯಿಗೆ ಮೋಸ ಮಾಡಿದಂತೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅನುದಾನ ಪಡೆದು, ಈಗ ಪಕ್ಷವನ್ನು ತೆರೆದು ನಡೆದಿದ್ದಾರೆ'. ಎಂದು ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ ವಿರುದ್ಧ ವಾಗ್ದಾಳಿ ನಡೆಸಿದರು.
'ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಲು ದೊಡ್ಡ ನಾಯಕರು ಬೇಕಾಗಿಲ್ಲ. ಸಾಮಾನ್ಯ ಕಾರ್ಯಕರ್ತರು ಸಾಕು. ನಾವು ನಿವೇಲ್ಲರೂ ಒಟ್ಟಾಗಿ ಕೆಲಸ ಮಾಡಿ, ಅಭ್ಯರ್ಥಿಯ ಗೆಲುವಿಗೆ ಶ್ರಮಿಸೋಣ' ಎಂದು ಕರೆ ನೀಡಿದರು.
ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಯೋಗೇಶ್ವರ ಅವರನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂದು ತಂತ್ರ ರೂಪಿಸುತ್ತಿದ್ದಾರೆ.

ದ್ವೇಷದ ರಾಜಕೀಯ ಮಾಡಲ್ಲ
‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಸಿ.ಪಿ.ಯೋಗೇಶ್ವರ ಅವರನ್ನು ದುರ್ಬಲರನ್ನಾಗಿ ಮಾಡಬಹುದಿತ್ತು. ಆದರೆ, ನಾನು ವೈಯಕ್ತಿಕ ವಿಚಾರವೇ ಬೇರೆ ಎಂದುಕೊಂಡು ದ್ವೇಷದ ರಾಜಕಾರಣ ಮಾಡಲಿಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವರು ಹೇಳಿದವರಿಗೆ ಟಿಕೆಟ್ ನೀಡಿದೆವು' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

600 ಕೋಟಿ ಅನುದಾನ
‘ಚನ್ನಪಟ್ಟಣ ಕ್ಷೇತ್ರಕ್ಕೆ ನೀರಾವರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 600 ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಡೆದುಕೊಂಡರು. ಈಗ ಪಕ್ಷ ತೊರೆದು ಅವರು ನಡೆದು ಬಂದ ಹಾದಿಯಲ್ಲಿ ಸಾಗಿದ್ದಾರೆ' ಎಂದು ಸಿ.ಪಿ.ಯೋಗೇಶ್ವರ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ವೇದಿಕೆ ಹಂಚಿಕೊಂಡ ಬಗ್ಗೆ ಸ್ಪಷ್ಟನೆ
‘ಚನ್ನಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಅನಿತಾ ಕುಮಾರಸ್ವಾಮಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಅವರು ಮಹಿಳೆ, ಜನಪ್ರತಿನಿಧಿಯಾಗಿದ್ದವರು. ಮಹಿಳೆಗೆ ನೀಡಬೇಕಾದ ಗೌರವನ್ನು ನೀಡಿದ್ದೇನೆ ಅಷ್ಟೇ' ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದರು.

ಯಾವ ಪಕ್ಷದೊಂದಿಗೂ ಹೊಂದಾಣಿಕೆ ಇಲ್ಲ
‘ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬೇರೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂಬ ವಿಚಾರ ಸುಳ್ಳು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾವು, ನೀವೆಲ್ಲರೂ ಶ್ರಮಿಸೋಣ' ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.












Click it and Unblock the Notifications