ರಸ್ತೆ ಇಲ್ಲ, ಚರಂಡಿ ಇಲ್ಲ; ಗ್ರಾ.ಪಂ ಚುನಾವಣಾ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ
ರಾಮನಗರ, ಡಿಸೆಂಬರ್ 17: ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಗ್ರಾಮ ಪಂಚಾಯತಿಯ ವಿರುದ್ಧ ಆಕ್ರೋಶಗೊಂಡಿರುವ ಗ್ರಾಮಸ್ಥರು, ಈ ಬಾರಿ ಗ್ರಾ.ಪಂ ಚುನಾವಣೆಯ ಮತದಾನ ಬಹಿಷ್ಕರಿಸಿರುವ ಘಟನೆ ರಾಮನಗರ ತಾಲ್ಲೂಕಿನ ಪೇಟೆ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಪೇಟೆ ಕುರುಬರಹಳ್ಳಿ ಗ್ರಾಮದ ಜೋಗಯ್ಯರ ಬೀದಿಯಲ್ಲಿ 45 ವರ್ಷಗಳು ಕಳೆದರೂ ಇದುವರೆಗೂ ರಸ್ತೆ ಹಾಗೂ ಚರಂಡಿ ನಿರ್ಮಾಣವಾಗಿಲ್ಲ. ಇನ್ನು ಮಳೆಗಾಲದಲ್ಲಿ ರಸ್ತೆಯಲ್ಲಿ ತಿರುಗಾಡದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಗ್ರಾಮಸ್ಥರು ಹೇಳಿದರು.
ರಾಮನಗರ: ಗ್ರಾ.ಪಂ ಚುನಾವಣೆ ಬಹಿಷ್ಕರಿಸಿದ ಸೌಲಭ್ಯ ವಂಚಿತ ಗ್ರಾಮಸ್ಥರು
ಮಳೆಗಾಲದಲ್ಲಿ ಸಾಕಷ್ಟು ಜನ ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಕೂಡ ಸಾಕಷ್ಟು ಇವೆ. ಹೀಗಾಗಿ ಗ್ರಾಮಸ್ಥರೆಲ್ಲ ಸೇರಿಕೊಂಡು ಈ ಬಾರಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ.
ಪೇಟೆ ಕುರುಬರಹಳ್ಳಿ ಗ್ರಾಮದ ಜೋಗಯ್ಯರ ಬೀದಿಯಲ್ಲಿ ಸುಮಾರು 50 ರಿಂದ 70 ಮನೆಗಳು ಇವೆ. ಸಾಕಷ್ಟು ಜನ ವ್ಯವಸಾಯ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಗ್ರಾಮದಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ಇದುವರೆಗೂ ನಿರ್ಮಾಣವಾಗಿಲ್ಲ. ಹೀಗಾಗಿ ರಸ್ತೆಯ ಮೇಲೆಯೆ ಕಲುಷಿತ ನೀರು ಹರಿಯುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭಯ ಗ್ರಾಮಸ್ಥರನ್ನು ಕಾಡುತ್ತಿದೆ.
ಈ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಮತದಾನ ಬಹಿಷ್ಕಾರ ಮಾಡಿದ್ದಾರೆ.