ರಾಷ್ಟ್ರಪತಿ ಸ್ವಾಗತಕ್ಕೆ ಅಮೃತಾ ಕಾಲೇಜ್ ಕ್ಯಾಂಪಸ್ ಸಜ್ಜು!
ರಾಮನಗರ, ಡಿಸೆಂಬರ್ 29 : ಅಮೃತಾ ವಿದ್ಯಾಸಂಸ್ಥೆ ಪ್ರಾರಂಭವಾಗಿ 111 ವರ್ಷ ಕಳೆಯುತ್ತಿರುವ ಹಿನ್ನೆಲೆ ವಾರ್ಷಿಕೋತ್ಸವ ಸಮಾರಂಭಕ್ಕೆ ಭಾರತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿ ಕಾರ್ಯಕ್ರಮವನ್ನ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾಂಪಸ್ ನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಮನಗರ ಜಿಲ್ಲೆ ಬಿಡದಿಯ ತಿಮ್ಮೇಗೌಡನದೊಡ್ಡಿ ಗ್ರಾಮದ ಬಳಿಯಿರುವ ಅಮೃತಾ ಇಂಜಿನಿಯರಿಂಗ್ ಕಾಲೇಜಿನ ನೂತನ ಕ್ಯಾಂಪಸ್ ಲೋಕಾರ್ಪಣೆ ಮಾಡುವುದಕ್ಕೆ ಭಾರತದ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಡಿ. 30 ರಂದು ಆಗಮಿಸಲಿದ್ದಾರೆ.
ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಸ್ಥೆ 1906 ರಲ್ಲಿ ಪ್ರಾರಂಭವಾಗಿದ್ದು ಇಂದಿಗೆ 111 ವರ್ಷ ಪೂರೈಸುತ್ತಿರುವ ಹಿನ್ನೆಲೆ ಅದ್ದೂರಿ ವಾರ್ಷಿಕೋತ್ಸವ ಸಮಾರಂಭವನ್ನು ಸಹ ರಾಷ್ಟ್ರಪತಿಗಳು ಉದ್ಘಾಟನೆ ಮಾಡಲಿದ್ದಾರೆ. ಡಿಸೆಂಬರ್ 30 ರಂದು ಮಧ್ಯಹ್ನ 3 ಗಂಟೆಗೆ ರಾಮನಾಥ್ ಕೋವಿಂದ್ ಆಗಮಿಸಿ ಎರಡು ಕಾರ್ಯಕ್ರಮ ಉದ್ಘಾಟಿಸಿ ಒಂದು ಗಂಟೆಗಳ ಕಾಲ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನು ರಾಷ್ಟ್ರಪತಿಗಳ ಆಗಮನಕ್ಕೆ ಕಾಲೇಜು ಆವರಣ ಸಕಲರೀತಿಯಲ್ಲೂ ಸಿದ್ಧವಾಗುತ್ತಿದ್ದು ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರಪತಿಗಳ ಆಗಮನಕ್ಕೆ ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ರಾಷ್ಟ್ರಪತಿಗಳ ಜೊತೆ ರಾಜ್ಯಪಾಲರಾದ ವಜುಭಾಯಿ ವಾಲಾ, ಕೇಂದ್ರ ಸಚಿವರಾದ ಅನಂತಕುಮಾರ್, ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಶಾಸಕ ಹೆಚ್.ಸಿ.ಬಾಲಕೃಷ್ಣ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ರಾಷ್ಟ್ರಪತಿಗಳ ಸಮಾರಂಭಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದ್ದು ಸುಮಾರು 2,500ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಹಾಗೇ ರಾಷ್ಟ್ರಪತಿಗಳ ಆಗಮನದಿಂದಾಗಿ ಕಾಲೇಜು ಆವರಣದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವೀರಣ್ಣ ಚರಂತಿ ಮಠ್ ತಿಳಿಸಿದ್ದಾರೆ.