ರಾಮನಗರದಲ್ಲಿ ಕಾವೇರಿ ಕಿಚ್ಚು: ಡಿಸಿ ಕಚೇರಿಗೆ ಮುತ್ತಿಗೆ, ಪೊಲೀಸರ ವಿರುದ್ಧ ಆಕ್ರೋಶ
ರಾಮನಗರ, ಸೆಪ್ಟೆಂಬರ್ 22: ರೇಷ್ಮೆನಾಡು ರಾಮನಗರದಲ್ಲೂ ಕಾವೇರಿ ಪ್ರತಿಭಟನೆ ಕಿಚ್ಚು ಹೆಚ್ಚಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿ ಕರವೇ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಾವೇರಿ ಪ್ರಾಧಿಕಾರದ ಪ್ರತಿಕೃತಿ ದಹನಕ್ಕೆ ಪೊಲೀಸರು ಅಡ್ಡಿಪಡಿಸಿ, ಪ್ರತಿಭಟನಾಕಾರರು ತಂದಿದ್ದ ಕಾವೇರಿ ಪ್ರಾಧಿಕಾರದ ಪ್ರತಿಕೃತಿಯನ್ನು ಬಲವಂತವಾಗಿ ಕಿತ್ತುಕೊಂಡ ಘಟನೆ ನಡೆದಿದೆ.
ಕರವೇ ಕಾರ್ಯಕರ್ತರು ನಗರದ ಐಜೂರು ವೃತದಲ್ಲಿ ಪ್ರತಿಭಟನೆ ನಡೆಸಿ ಕಾವೇರಿ ನದಿ ನೀರಿ ನಿರ್ವಹಣಾ ಪ್ರಾಧಿಕಾರದ ಭೂತ ದಹನಕ್ಕೆ ಮುಂದಾದರು. ಈ ಸಮಯದಲ್ಲಿ ಮಧ್ಯೆ ಪ್ರವೇಶ ಮಾಡಿದ ಐಜೂರು ಪೊಲೀಸ್ ಠಾಣೆ ಪಿಎಸ್ಐ ಸಯ್ಯದ್ ತನ್ವೀರ್ ಹುಸೇನ್ ಪ್ರತಿಕೃತಿ ದಹನಕ್ಕೆ ಅವಕಾಶಕೊಡದೆ ಬಲವಂತವಾಗಿ ಪ್ರತಿಕೃತಿಯನ್ನು ಪ್ರತಿಭಟನಾಕಾರರಿಂದ ಕಿತ್ತುಕೊಂಡರು.

ಪಿಎಸ್ಐ ನಡೆಯಿಂದ ಆಕ್ರೋಶಗೊಂಡ ಕರವೇ ಕಾರ್ಯಕರ್ತರು ಪ್ರತಿಭಟನೆಯ ಹಕ್ಕನ್ನು ಕಸಿಯುತ್ತಿರುವ ಪೋಲಿಸರಿಗೆ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ವಿಚಾರದಲ್ಲಿ ನಾಡಿಗೆ ಪದೇ ಪದೇ ಅನ್ಯಾಯವಾಗುತ್ತಿರುವ ಸಮಯದಲ್ಲಿ ಹೋರಾಟಗಾರ ಬೆಂಬಲವಾಗಿ ನಿಲ್ಲಬೇಕಾದ ಸರ್ಕಾರ ಪೊಲೀಸರ ಬಲ ಬಳಸಿ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂದು ಹೋರಾಟಗಾರರು ಆರೋಪಿಸಿದರು.
ಡಿಸಿ ಕಚೇರಿ ಮುತ್ತಿಗೆ
ನಗರದ ಹಳೆ ಬೆಂಗಳೂರು ಮೈಸೂರು ಹೆದ್ದಾರಿಯ ಐಜೂರು ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಕಾವೇರಿ ಎಂದೆಂದು ನಮ್ಮದ ನಮ್ಮದು ಎಂದು ಘೋಷಣೆ ಕೂಗಿ, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಂದೂ ಕಾಣದಷ್ಟು ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ವಾಡಿಕೆಯಂತೆ ಮಳೆ ಆಗಿಲ್ಲ. ಈಗಾಗಲೇ 236 ತಾಲೂಕುಗಳ ಪೈಕಿ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ.
ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ಪರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ಚರ್ಯಕರವಾಗಿದೆ, ಆಘಾತಕಾರಿಯಾಗಿದೆ.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಬಾರದು. ಮತ್ತೆ ತಮಿಳುನಾಡಿಗೆ ನೀರು ಬಿಡಕೂಡದು, ಒಂದೊಮ್ಮೆ ಸರ್ಕಾರ ಅಂಥ ದುಸ್ಸಾಹಸಕ್ಕೆ ಕೈಹಾಕಿದರೆ ರಾಜ್ಯದ ಜನರು ದಂಗೆ ಏಳುವ ಸ್ಥಿತಿ ನಿರ್ಮಾಣವಾಗುತ್ತದೆ. ಕರ್ನಾಟಕ ರಕ್ಷಣಾ ವೇದಿಕೆ ಉಗ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳುತ್ತದೆ ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.












Click it and Unblock the Notifications