ಡಿಕೆಶಿ ಬಂಧನ ವಿರೋಧಿಸಿ ಕನಕಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ
ರಾಮನಗರ, ಸೆಪ್ಟೆಂಬರ್ 8: ಮಾಜಿ ಸಚಿವ- ಕಾಂಗ್ರೆಸ್ ನ ಪ್ರಭಾವಿ ನಾಯಕ ಡಿ. ಕೆ. ಶಿವಕುಮಾರ್ ರನ್ನು ಇ. ಡಿ. (ಜಾರಿ ನಿರ್ದೇಶನಾಲಯ) ಬಂಧಿಸಿರುವುದನ್ನು ವಿರೋಧಿಸಿ ಕನಕಪುರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಜಂಟಿಯಾಗಿ ನಡೆಸುತ್ತಿರುವ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟಿದೆ.
ಸುಖಾಸುಮ್ಮನೆ ಆರೋಪ, ಆಕ್ಷೇಪ ಎತ್ತಬೇಡಿ ಎಂದ ಸುರೇಶ ಅಂಗಡಿ
ತಮ್ಮ ನಾಯಕನ ಬಂಧನವನ್ನು ಖಂಡಿಸಿ, ಕನಕಪುರದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸತತ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ಐದು ದಿನಗಳು ರಸ್ತೆ ತಡೆ, ಪಂಜಿನ ಮೆರವಣಿಗೆ, ಪ್ರಧಾನಿ ನರೇಂದ್ರ ಮೋದಿ - ಅಮಿತ್ ಶಾ ಅವರ ಅಣುಕು ಶವಯಾತ್ರೆ, ಅಣುಕು ತಿಥಿ ಕಾರ್ಯ ಮಾಡಿ ಮತ್ತು ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹೊತ್ತಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಐದನೇ ದಿನವಾದ ಭಾನುವಾರ ನಗರಸಭೆ ಮುಂದೆ ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ರಸ್ತೆ ಬಂದ್ ಮಾಡದೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು- ಹಲಗೂರು ಹೆದ್ದಾರಿ ಪಕ್ಕದಲ್ಲೇ ಟೆಂಟ್ ಹಾಕಿ ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರ ಸರಕಾರದ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಅಮಿತ್ ಶಾ ಹಾಗೂ ಮೋದಿ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.