ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಕನಕಪುರದಲ್ಲಿ ಪ್ರತಿಭಟನೆ
ರಾಮನಗರ, ಅಕ್ಟೋಬರ್ 5: ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಡಿಕೆಶಿ ಸ್ವಕ್ಷೇತ್ರ ಕನಕಪುರದಲ್ಲಿ ದಾಳಿ ಖಂಡಿಸಿ ಪ್ರತಿಭಟನೆ ನಡೆದಿದೆ.
ಡಿಕೆಶಿ ಹುಟ್ಟೂರು ದೊಡ್ಡ ಆಲಹಳ್ಳಿ ಗ್ರಾಮದ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಕನಕಪುರ ತಾಲೂಕಿನ ನಲ್ಲಹಳ್ಳಿ ಗ್ರಾಮದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಡಿಕೆಶಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.
"ನನ್ನ ಮಗನನ್ನು ಕಂಡರೆ ಸರ್ಕಾರಕ್ಕೆ ತುಂಬಾ ಪ್ರೀತಿ"
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಕನಕಪುರದ ನಿವಾಸದ ಮೇಲೆ ಇಂದು ಬೆಳಿಗ್ಗೆ ಸಿಬಿಐ ದಾಳಿ ನಡೆದಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸ, ಡಿ. ಕೆ. ಸುರೇಶ್ ನಿವಾಸದ ಮೇಲೆಯೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಿಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಸದ್ಯಕ್ಕೆ ದೊಡ್ಡ ಆಲಹಳ್ಳಿ ಗ್ರಾಮದ ಡಿಕೆಶಿ ಮನೆಯಲ್ಲಿ ನಾಲ್ಕು ಗಂಟೆಗಳ ಕಾಲ ಸಿಬಿಐ ತಂಡ ತಪಾಸಣೆ ಅಂತ್ಯಗೊಳಿಸಿ ಹೊರಟಿದ್ದು, ಅಧಿಕಾರಿಗಳು ಮನೆಯಿಂದ ಹೊರಡುವ ಸಂದರ್ಭ ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.