ರಾಮನಗರ; ಹದಗೆಟ್ಟ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ದಿಢೀರ್ ಪ್ರತಿಭಟನೆ
ರಾಮನಗರ, ಆಗಸ್ಟ್ 17: ಕಳೆದ ರಾತ್ರಿ ಸುರಿದ ಮಳೆಗೆ ಇತ್ತೀಚೆಗೆ ರಸ್ತೆಗೆ ಹಾಕಿದ್ದ ಡಾಂಬರು ಕಿತ್ತು ಹೋಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಇಂದು ರಾಮನಗರದಲ್ಲಿ ವಾಹನ ಸವಾರರು ದಿಢೀರ್ ಪ್ರತಿಭಟನೆ ನಡೆಸಿದರು.
ರಾಮನಗರದ ಮಾಗಡಿ ರಸ್ತೆಯ ಶರತ್ ಮೆಮೋರಿಯಲ್ ಶಾಲೆ ಮುಂಭಾಗದಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಡಾಂಬರು ಹಾಕಿ ರಸ್ತೆ ಸರಿಪಡಿಸಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಮಳೆಗೆ ಡಾಂಬರು ಕಿತ್ತು ಹೋಗಿ ಗುಂಡಿ ಬಿದ್ದಿದೆ. ಹೀಗಾಗಿ ಇಲ್ಲಿ ಪ್ರತಿನಿತ್ಯ ಸಂಚಾರ ಮಾಡುವ ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಕುರಿತು ನಗರಸಭೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ದೂರು ಕೊಟ್ಟಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಕೋಪಗೊಂಡ ಜನರು ರಸ್ತೆ ತಡೆದು ಪ್ರತಿಭಟನೆ ನಡೆಸಿ, ಕೂಡಲೇ ನಗರಸಭೆ ಆಯುಕ್ತರು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದಿದ್ದರು.

ಪ್ರತಿಭಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ನಗರಸಭೆ ಆಯುಕ್ತೆ ಶುಭಾ, ತಕ್ಷಣವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಬಳಿಕ ಪ್ರತಿಭಟನಾನಿರತ ವಾಹನ ಸವಾರರು ಹಾಗೂ ಸಾರ್ವಜನಿಕರು ಪ್ರತಿಭಟನೆ ಹಿಂಪಡೆದರು.











Click it and Unblock the Notifications