'ನಿರ್ಗತಿಕ ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಊಟ ಹಾಕಿಸಲಿ'
ಬೆಂಗಳೂರು. ಫೆ. 10: ನಿರ್ಗತಿಕರಾಗಿರುವ ಕಾಂಗ್ರೆಸ್ ನಾಯಕರಿಗೆ ಬೇಕಿದ್ದರೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಊಟ ಹಾಕಿಸಲಿ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಆರ್ಎಸ್ಎಸ್ ಕಾರ್ಯಕರ್ತರಿಗೆ ಊಟ ಹಾಕಿಸುವುದಾಗಿ ಹೇಳಿಕೆ ಕೊಟ್ಟಿದ್ದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ 112ನೇ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣಲ್ಲಿ ಕೆಂಗಲ್ ಪ್ರತಿಮೆ ಬಳಿ, ದಿ. ಹನುಮಂತಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದ್ದಾರೆ.
ರಾಮನಗರ ಭಾಗದಲ್ಲಿ ಹಿಂದೂ ಚಟುವಟಿಕೆಗಳು ಹೆಚ್ಚಾಗುತ್ತಿರುವುದರಿಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೆದರಿದ್ದಾರೆ. ಅವರಿಗೆ ಈಗ ಉಳಿದುಕೊಂಡಿರುವುದು ಬರೀ ಕನಕಪುರ ಕ್ಷೇತ್ರ ಮಾತ್ರ, ಮೊದಲು ಅವರು ಆ ಕ್ಷೇತ್ರವನ್ನು ಉಳಿಸಿಕೊಳ್ಳಲಿ. ಆರ್ ಎಸ್ ಎಸ್ ಕಾರ್ಯಕರ್ತರಿಗೆ ಊಟ ಹಾಕಿಸುವುದಾಗಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಅಹಂಕಾರದ ಪರಮಾವಧಿ. ಈಗ ಕಾಂಗ್ರೆಸ್ ನಾಯಕರು ನಿರ್ಗತಿಕರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಊಟ ಹಾಕಿಸುವುದೇ ಆಗಿದ್ದರೆ ನಿರ್ಗತಿಕರಾಗಿರುವ ಕಾಂಗ್ರೆಸ್ ನಾಯಕರಿಗೆ ಹಾಕಿಸಲಿ ಎಂದು ಆರ್. ಅಶೋಕ್ ಸವಾಲು ಹಾಕಿದ್ದಾರೆ.
ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಗೆ ಆರ್. ಅಶೋಕ್ ಸಮರ್ಥನೆ: ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ಕಂದಾಯ ಸಚಿವ ಆರ್. ಅಶೋಕ್ ಸಮರ್ಥನೆ ಮಾಡಿಕೊಂಡಿದ್ದಾರೆ. ಕಪಾಲಬೆಟ್ಟದ ಸುತ್ತಮುತ್ತಲ ಪ್ರದೇಶಗಳಲ್ಲಿ ಮತಾಂತರ ಚಟುವಟಿಕೆಗಳು ತೀವ್ರಗೊಂಡಿರೋದು ನಿಜ.
ಒಂದೇ ಕೋಮಿಗೆ ಭೂಮಿ ಹಂಚಲಾಗುತ್ತಿದೆ. ಅಲ್ಲದೆ ಸರ್ಕಾರಿ ಭೂಮಿ ಲಪಟಾಯಿಸುವ ಹುನ್ನಾರವೂ ನಡೆದಿದೆ. ನಾವೆಲ್ಲ ಮುನೇಶ್ವರನ ಆರಾಧಕರು. ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಕೂಡ ಮುನೇಶ್ವರನ ಭಕ್ತರೇ. ಹಾಗಾಗಿ ಮುನೇಶ್ವರ ಬೆಟ್ಟವನ್ನು ಉಳಿಸಿಕೊಳ್ಳುತ್ತೇವೆ ಎಂದು ಆರ್. ಅಶೋಕ್ ಹೇಳಿಕೆ ಕೊಟ್ಟಿದ್ದಾರೆ.