ರಾಮನಗರ ಉಪ ಚುನಾವಣೆ : ಜೆಡಿಎಸ್ ಪಟ್ಟಿಗೆ 2 ಹೆಸರು ಸೇರ್ಪಡೆ!
ರಾಮನಗರ, ಅಕ್ಟೋಬರ್ 08 : ರಾಮನಗರ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಜೆಡಿಎಸ್ ಪಕ್ಷಕ್ಕೆ ಕಗ್ಗಂಟಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.
ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾದ ರಾಮನಗರ ಕ್ಷೇತ್ರಕ್ಕೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲಿವೆ.
ರಾಮನಗರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ತವರು ಜಿಲ್ಲೆ. ಆದರೂ ಅವರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಅನಿತಾ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗಬೇಕು ಎಂದು ಒತ್ತಡ ಹಾಕುತ್ತಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣದ ಆರೋಪ ಎದುರಿಸಬೇಕಾಗುತ್ತದೆ. ಆದ್ದರಿಂದ, ಎಚ್.ಡಿ.ದೇವೇಗೌಡರು ಯಾರಿಗೆ ಟಿಕೆಟ್ ನೀಡಬೇಕು ಎಂದು ಚಿಂತನೆ ನಡೆಸುತ್ತಿದ್ದಾರೆ.

ದೇವೇಗೌಡರ ಚಿಂತನೆ ಏನು?
ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಎಚ್.ಡಿ.ರೇವಣ್ಣ ಅವರು ಹೊಳೆನರಸೀಪುರಿಂದ ಆಯ್ಕೆಯಾಗಿದ್ದಾರೆ. ದೇವೇಗೌಡರು ಹಾಸನದಿಂದ ಸಂಸದರಾಗಿದ್ದಾರೆ. ಈಗ ಅನಿತಾ ಕುಮಾರಸ್ವಾಮಿ ಅವರಿಗೆ ರಾಮನಗರದಲ್ಲಿ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಅಸಮಾಧಾನಗೊಳ್ಳಬಹುದು. ಕುಟುಂಬ ರಾಜಕಾರಣದ ಆರೋಪ ಬರಬಹುದು ಎಂದು ದೇವೇಗೌಡರು ಚಿಂತನೆ ನಡೆಸುತ್ತಿದ್ದಾರೆ.

ಯಾರಿಗೆ ಟಿಕೆಟ್?
ರಾಮನಗರ ಕ್ಷೇತ್ರದ ಚುನಾವಣೆಗೆ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ, ಹಿರಿಯ ನಾಯಕ ಪಿ.ಜಿ.ಆರ್.ಸಿಂಧ್ಯಾ ಅವರ ಹೆಸರು ಕೇಳಿಬರುತ್ತಿದೆ. ಅನಿತಾ ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಿ.ಜಿ.ಆರ್.ಸಿಂಧ್ಯಾ ಅವರ ಅವರ ನಡುವೆ ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕು.

ಸಿಂಧ್ಯಾಗೆ ಸೋಲು
ಜೆಡಿಎಸ್ ಪಕ್ಷದ ಹಿರಿಯ ನಾಯಕ ಪಿ.ಜಿ.ಆರ್.ಸಿಂಧ್ಯಾ ಅವರು 2013ರ ಚುನಾವಣೆಯಲ್ಲಿ ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸೋಲು ಕಂಡಿದ್ದರು. ನಂತರ ಕೆಲವು ವರ್ಷಗಳ ಕಾಲ ರಾಜಕೀಯದಿಂದ ದೂರವಾಗಿದ್ದರು. 2018ರ ಚುನಾವಣೆ ವೇಳೆ ಪುನಃ ಸಕ್ರಿಯರಾಗಿದ್ದರು. ಬಸವಕಲ್ಯಾಣ ಕ್ಷೇತ್ರದಿಂದ ಕಣಕ್ಕಿಳಿದು 31,414 ಮತಗಳನ್ನು ಪಡೆದು ಸೋತಿದ್ದರು.

ಮಧು ಬಂಗಾರಪ್ಪ
ಸೊರಬ ಕ್ಷೇತ್ರದ ಮಾಜಿ ಶಾಸಕ, ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾಗಿರುವ ಮಧು ಬಂಗಾರಪ್ಪ ಅವರು ರಾಮನಗರದಿಂದ ಕಣಕ್ಕಿಳಿಯಲಿದ್ದಾರೆಯೇ?. ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸುವ ಕುರಿತು ಚರ್ಚೆ ನಡೆಯುತ್ತಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸೊರಬ ಕ್ಷೇತ್ರದಲ್ಲಿ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ 72091 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.












Click it and Unblock the Notifications