ನೆರೆ ಸಂತ್ರಸ್ತರೆಡೆಗೆ ನಿರ್ಲಕ್ಷ್ಯ; ಪರಿಹಾರಕ್ಕೆ ರೈತ ಸಂಘದ ಪ್ರತಿಭಟನೆ
ರಾಮನಗರ, ಆಗಸ್ಟ್ 26: ಇಲ್ಲಿ ನೆರೆ ಬಂದು ರೈತರು ಸಂಕಷ್ಟದಲ್ಲಿದ್ದರೆ, ಯಡಿಯೂರಪ್ಪ ಅಧಿಕಾರಕ್ಕಾಗಿ ದಿಲ್ಲಿ ಪ್ರವಾಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘ ಪ್ರತಿಭಟನೆ ನಡೆಸಿದೆ.
ರಾಜ್ಯದ 17 ಜಿಲ್ಲೆಗಳಲ್ಲಿ ನೆರೆ ಬಂದು ಮನೆ, ಪ್ರಾಣ ಕಳೆದುಕೊಂಡು ಜನರು ಸಂಕಷ್ಟದಲ್ಲಿ ನರಳುತ್ತಿದ್ದಾರೆ. ಆದರೆ ಸಿಎಂ ಹಾಗೂ ನೂತನ ಸಚಿವರು ದೆಹಲಿಯಿಂದ ಬೆಂಗಳೂರು, ಬೆಂಗಳೂರಿನಿಂದ ದೆಹಲಿ ಎಂದು ಅಧಿಕಾರದ ಆಸೆಯಲ್ಲಿ ಪ್ರವಾಸದಲ್ಲಿದ್ದಾರೆ ಎಂದು ರಾಜ್ಯ ರೈತ ಸಂಘದ ಕಾರ್ಯಕರ್ತರು ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ನೆರೆ ಬಂದು ಲಕ್ಷಾಂತರ ರೂಪಾಯಿ ನಷ್ಟವಾಗಿದೆ, ಇಷ್ಟಾದರೂ ಕೇಂದ್ರ ಸರಕಾರ ಒಂದು ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

"ರಾಜ್ಯದ ಸಿಎಂ ಎನಿಸಿಕೊಂಡವರು ಕಾಟಾಚಾರಕ್ಕೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಬಂದಿದ್ದಾರೆ. ನೂತನ ಸಚಿವರು ನೆಪಮಾತ್ರಕ್ಕೆ ಭೇಟಿ ನೀಡಿದ್ದಾರೆ. ಭೇಟಿ ನೀಡಿದರೆ ಸಮಸ್ಯೆ ಪರಿಹಾರ ಕಾಣುವುದಿಲ್ಲ, ಸ್ಥಳದಲ್ಲೇ ಇದ್ದು ಅಲ್ಲಿನ ಸಮಸ್ಯೆಗಳನ್ನು ಆಲಿಸಿದರೆ ಪರಿಹಾರ ನೀಡಲು ಸಾಧ್ಯ" ಎಂದು ಆಗ್ರಹಿಸಿದರು.
ಇನ್ನಾದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತು ಪರಿಹಾರದ ಹಣ ಬಿಡುಗಡೆ ಮಾಡಿ ನೆರೆ ಸಂತ್ರಸ್ತರಿಗೆ ಸ್ಪಂದಿಸದೇ ಇದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತ ಸಂಘದ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.












Click it and Unblock the Notifications