ರಾಮನಗರ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮಹತ್ವದ ಸಭೆ!
ರಾಮನಗರ, ಅಕ್ಟೋಬರ್ 22 : ರಾಮನಗರ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆಯಲ್ಲಿ ಜಯಗಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ತಂತ್ರ ರೂಪಿಸಿವೆ. ಎರಡೂ ಪಕ್ಷಗಳ ಕಾರ್ಯಕರ್ತರ ಸಭೆ ರಾಜ್ಯ ನಾಯಕರ ಸಮ್ಮುಖದಲ್ಲಿ ನಡೆದಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಬಸವನಪುರ ಬಳಿಯ ಹಿಲ್ ವ್ಯೂ ರೆಸಾರ್ಟ್ನಲ್ಲಿಕಾರ್ಯಕರ್ತರ ಸಭೆ ನಡೆಯಿತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಮನಗರ ನಗರಸಭೆ ವ್ಯಾಪ್ತಿಯ 31 ವಾರ್ಡ್ಗಳ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಉಪ ಚುನಾವಣೆಗೆ ಅನಿತಾ ಕುಮಾರಸ್ವಾಮಿ ಅವರು ಸೋಮವಾರದಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ. 7 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.
2013ರ ವಿಧಾನಸಭೆ ಚುನಾವಣೆಯಲ್ಲಿ ನಗರ ವ್ಯಾಪ್ತಿಯಲ್ಲಿ ಜೆಡಿಎಸ್ಗೆ ಕಡಿಮೆ ಮತಗಳು ಬಂದಿದ್ದವು. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಉಪ ಚುನಾವಣೆಯಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಬೇಕು ಎಂದು ಚರ್ಚೆ ನಡೆಯಿತು... ಸಭೆಯಲ್ಲಿನ ಮುಖ್ಯಾಂಶಗಳು ಇಲ್ಲಿವೆ....

ಯಾವುದೇ ಅಸಮಾಧಾನವಿಲ್ಲ
ಸಭೆಯಲ್ಲಿ ಮಾತನಾಡಿದ ಉಪ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರು, 'ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಎಲ್ಲವೂ ಸರಿ ಹೋಗಿದೆ. ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಜಂಟಿಯಾಗಿ ಪ್ರಚಾರ ನಡೆಸಲಿದ್ದಾರೆ' ಎಂದು ಹೇಳಿದರು.

ಮತಗಳು ಚದುರದಂತೆ ಗಮನಹರಿಸಿ
ಅನಿತಾ ಕುಮಾರಸ್ವಾಮಿ ಅವರು ಮುಸ್ಲಿಂ ಸಮುದಾಯದ ಮುಖಂಡರ ಜೊತೆ ಚರ್ಚೆ ನಡೆಸಿದರು. ಮತಗಳು ಚದುರದಂತೆ ಗಮನ ಹರಿಸಿ ಎಂದು ಮನವಿ ಮಾಡಿದರು. ಚುನಾವಣೆ ನಂತರ ತಮ್ಮ ಮಾತುಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಕೆಲವು ಕಾರ್ಯಕರ್ತರು ಅಳಲು ತೋಡಿಕೊಂಡರು. ಎಲ್ಲರನ್ನೂ ಸಮಾಧಾನಪಡಿಸಿದ ಅನಿತಾ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಹೀಗೆ ಆಗದಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಪಕ್ಷ ಸಂಘಟನೆ ಬಗ್ಗೆ ಚರ್ಚೆ
ಮಾಧ್ಯಮಗಳ ಜೊತೆ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, 'ಉಪ ಚುನಾವಣೆ ತಯಾರಿ ಮತ್ತು ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಸೋಮವಾರದಿಂದ ಅಧಿಕೃತವಾಗಿ ಪ್ರಚಾರವನ್ನು ಆರಂಭಿಸುತ್ತೇವೆ. ಮುಖ್ಯಮಂತ್ರಿಗಳು ಸಹ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಹೇಳಿದರು.

7 ಮಂದಿ ಕಣದಲ್ಲಿ
ರಾಮನಗರ ಉಪ ಚುನಾವಣಾ ಕಣದಲ್ಲಿ 7 ಅಭ್ಯರ್ಥಿಗಳು ಉಳಿದಿದ್ದಾರೆ. ಶನಿವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ತುಳಸಪ್ಪ ದಾಸರ ಹಾಗೂ ಆರ್.ವರದರಾಜಗೌಡ ಅವರು ತಮ್ಮ ನಾಮಪತ್ರಗಳನ್ನು ವಾಪಸ್ ಪಡೆದರು. ಒಟ್ಟು 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸೂಚಕರಿಲ್ಲದ ಕಾರಣ ಡಾ.ಕೆ.ಪದ್ಮರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಕಣದಲ್ಲಿರುವ ಅಭ್ಯರ್ಥಿಗಳು
* ಅನಿತಾ ಕುಮಾರಸ್ವಾಮಿ (ಜೆಡಿಎಸ್)
* ಎಲ್.ಚಂದ್ರಶೇಖರ್ (ಬಿಜೆಪಿ)
* ಎಚ್.ಡಿ.ರೇವಣ್ಣ (ಪೂರ್ವಾಂಚಲ ಮಹಾಪಂಚಾಯರ್ ಪಾರ್ಟಿ)
* ಬಿ.ಪಿ.ಸುರೇಂದ್ರ (ಪಕ್ಷೇತರ)
* ಮುನಿಯಾ ಭೋವಿ (ಪಕ್ಷೇತರ)
* ಕುಮಾರನಾಯ್ಕ (ಪಕ್ಷೇತರ)
* ಡಿ.ಎಂ.ಮಾದೇಗೌಡ (ಪಕ್ಷೇತರ)












Click it and Unblock the Notifications