ರಾಮನಗರ ಉಪ ಚುನಾವಣೆ : ಜೆಡಿಎಸ್, ಬಿಜೆಪಿ ಬಲಾಬಲವೇನು?
ರಾಮನಗರ, ಅಕ್ಟೋಬರ್ 30 : ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರಿದೆ. ಉಪ ಚುನಾವಣೆಯಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರಗಳು ಆರಂಭವಾಗಿವೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ರಾಮನಗರ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿದ್ದಾರೆ.
ರಾಮನಗರದಲ್ಲಿ ಈ ಹಿಂದೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಎದುರಾಳಿಗಳು. ಆದರೆ, ಈ ಬಾರಿ ಕಾಂಗ್ರೆಸ್ ಜೆಡಿಎಸ್ಗೆ ಬೆಂಬಲ ನೀಡಿದ್ದರಿಂದ, ಜೆಡಿಎಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಎದುರಾಗಿದೆ.
ಸಚಿವ ಡಿ.ಕೆ.ಶಿವಕುಮಾರ್ ಸಹೋದರ, ಸಂಸದ ಡಿ.ಕೆ.ಸುರೇಶ್ ಅವರು ಅನಿತಾ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಎಲ್.ಚಂದ್ರಶೇಖರ್ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ....

3ನೇ ಉಪ ಚುನಾವಣೆ
ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಇದು 3ನೇ ಉಪ ಚುನಾವಣೆ. 1997ರಲ್ಲಿ ಎಚ್.ಡಿ.ದೇವೇಗೌಡ, 2009ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ಉಪ ಚುನಾವಣೆ ಎದುರಾಗಿತ್ತು. ಈಗ ಪುನಃ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದಾಗಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಈ ಬಾರಿಯ ಚುನಾವಣೆಯಲ್ಲಿ ಎದುರಾಳಿಗಳು.

ಅನಿತಾ ಕುಮಾರಸ್ವಾಮಿ ಅಭ್ಯರ್ಥಿ
ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರೇ ಬಲ. ಕುಮಾರಸ್ವಾಮಿ ಅವರು ಪಕ್ಕದ ಚನ್ನಪಟ್ಟಣ ಕ್ಷೇತ್ರದ ಶಾಸಕರು. ಕಾಂಗ್ರೆಸ್ ಸಹ ಅನಿತಾ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿರುವುದು ಅವರಿಗೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ. ಎಷ್ಟು ಅಂತರದಲ್ಲಿ ಗೆಲವು ಸಾಧಿಸಲಿದ್ದಾರೆ? ಎಂದು ಕಾರ್ಯಕರ್ತರು ಲೆಕ್ಕಾಚಾರ ಹಾಕುತ್ತಿದ್ದಾರೆ.

ಎಲ್.ಚಂದ್ರಶೇಖರ್ ಅಭ್ಯರ್ಥಿ
ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿ. ಬಿಜೆಪಿ ಸೇರಿದ 5 ದಿನದಲ್ಲಿಯೇ ಅವರನ್ನು ಪಕ್ಷ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ ಪ್ರಭಾವ, ತಂದೆ ಸಿ.ಎಂ.ಲಿಂಗಪ್ಪ ವರ್ಚಸ್ಸು ಚಂದ್ರಶೇಖರ್ ಅವರ ಬಲವಾಗಿದೆ.

ಬಿಜೆಪಿ ಸಾಧನೆ ಅಷ್ಟಕಷ್ಟೆ
ರಾಮನಗರ ಕ್ಷೇತ್ರದ ಚುನಾವಣೆ ಎಂದರೆ ಅದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಹೋರಾಟ. ಆದರೆ, ಈ ಬಾರಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದ ಚಿತ್ರಣ ಬದಲಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಸಾಕಷ್ಟು ಪ್ರಭಾವ ಹೊಂದಿಲ್ಲ.
2013ರ ಚುನಾವಣೆಯಲ್ಲಿ ಬಿಜೆಪಿಯ ಶಿವಮಾದು 1776 ಮತಗಳನ್ನು ಮಾತ್ರ ಗಳಿಸಿದ್ದರು. 2018ರ ಚುನಾವಣೆಯಲ್ಲಿ ಲೀವಾವತಿ ಅವರು 4871 ಮತಗಳನ್ನು ಗಳಿಸಿದ್ದರು. ಈ ಉಪ ಚುನಾವಣೆಯಲ್ಲಿ ಏನಾಗಲಿದೆ? ಕಾದು ನೋಡಬೇಕು.

ಡಿ.ಕೆ.ಸುರೇಶ್ ಪ್ರಚಾರ
ರಾಮನಗರದಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಅನಿತಾ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ವರ್ಚಸ್ಸು, ಡಿ.ಕೆ.ಶಿವಕುಮಾರ್ ಪ್ರಭಾವದ ಅಲೆಯಲ್ಲಿ ಬಿಜೆಪಿ ಎಷ್ಟು ಮತಗಳಿಸಲಿದೆ? ಎಂದು ಕಾದು ನೋಡಬೇಕು.












Click it and Unblock the Notifications