ರಾಮನಗರ ಉಪ ಚುನಾವಣೆ : ಜೆಡಿಎಸ್ ಗೆಲುವಿಗೆ ಬಂಡಾಯದ ಭಯ!
ರಾಮನಗರ, ಅಕ್ಟೋಬರ್ 13 : ರಾಮನಗರ ಉಪ ಚುನಾವಣೆ ಕದನ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದರೂ ಬಂಡಾಯದ ಭಯ ಗೆಲುವಿಗೆ ತಡೆ ಹಾಕಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಬೇಡಿಕೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಇಕ್ಬಾಲ್ ಹುಸೇನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ.
ರಾಮನಗರ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 15ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಅನಿತಾ ಕುಮಾರಸ್ವಾಮಿ ಅವರ ಎದುರಾಳಿಯಾಗಿ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್ ಮತ್ತು ಎಲ್.ಚಂದ್ರಶೇಖರ್ ಹೆಸರು ಕೇಳಿಬರುತ್ತಿದೆ. ಅಕ್ಟೋಬರ್ 14ರಂದು ಪಕ್ಷ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ....

ಜೆಡಿಎಸ್ ಪರ ಪ್ರಚಾರ ಮಾಡಲ್ಲ
ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ.ಲಿಂಗಪ್ಪ ಅವರು ಜೆಡಿಎಸ್ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಸಿದ್ದಾರೆ. 'ನಾನು ಬೇಕಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಆದರೆ, ಜೆಡಿಎಸ್ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಹಲವು ಕಾರ್ಯಕರ್ತರೂ ಹೀಗೆ ಹೇಳುತ್ತಿದ್ದಾರೆ. ಪಕ್ಷ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ. ಅಭ್ಯರ್ಥಿಯನ್ನು ಕಣಕ್ಕಿಳಿಸಿ' ಎಂದು ಒತ್ತಾಯಿಸಿದ್ದಾರೆ.

ಇಕ್ಬಾಲ್ ಹುಸೇನ್ ನಡೆ ಏನು?
ಎಚ್.ಎ.ಇಕ್ಬಾಲ್ ಹುಸೇನ್ 2018ರ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿದ್ದರು. 69990 ಮತಗಳನ್ನು ಪಡೆದಿದ್ದರು. 'ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು. ನನಗೆ ಮತ ನೀಡಿದ ಜನರಿಗೆ ನಾನು ಏನು ಹೇಳಲಿ. ನಾಮಪತ್ರ ಸಿದ್ಧವಾಗಿದೆ. ಪಕ್ಷ ನಿರ್ಧಾರವನ್ನು ಬದಲಾಯಿಸದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ' ಎಂದು ಅವರು ಘೋಷಣೆ ಮಾಡಿದ್ದಾರೆ.

ಅನಿತಾ ಕುಮಾರಸ್ವಾಮಿ ಹೇಳುವುದೇನು?
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಉಪ ಚುನಾವಣೆ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ, 'ಅಕ್ಟೋಬರ್ 15ರಂದು ನಾಮಪತ್ರ ಸಲ್ಲಿಸುತ್ತೇನೆ, ಗೆಲುವು ಖಚಿತ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್ ಸ್ಪರ್ಧೆ ಮಾಡುವುದಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಸಮಸ್ಯೆ ಬಗೆಹರಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಸಿದ್ದಾರೆ.

ಡಿ.ಕೆ.ಶಿವಕುಮಾರ್ ಸೂಚನೆ
ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಪ್ರಭಾವದ ಜೊತೆ ಡಿಕೆಶಿ ಸಹೋದರರ ಪ್ರಭಾವವೂ ಸಾಕಷ್ಟಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಬಾರದು ಪಕ್ಷ ತೆಗೆದುಕೊಂಡ ನಿರ್ಧಾರವನ್ನು ಗೌರವಿಸಬೇಕು ಎಂದು ಇಕ್ಬಾಲ್ ಹುಸೇನ್ ಅವರಿಗೆ ಸೂಚನೆ ನೀಡಿದ್ದಾರೆ. ಮುಂದೇನಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಂಡಾಯದ ಲಾಭ ಯಾರಿಗೆ?
ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್ ಮತ್ತು ಎಲ್.ಚಂದ್ರಶೇಖರ್ ನಡುವೆ ಬಿಜೆಪಿ ಟಿಕೆಟ್ಗೆ ಪೈಪೋಟಿ ನಡೆದಿದೆ.
ಕಾಂಗ್ರೆಸ್ ಬಂಡಾಯದ ಲಾಭವನ್ನು ಬಿಜೆಪಿ ಪಡೆದುಕೊಂಡು ಉಪ ಚುನಾವಣೆಯಲ್ಲಿ ಜಯಗಳಿಸಲಿದೆಯೇ? ಎಂದು ಕಾದು ನೋಡಬೇಕು.












Click it and Unblock the Notifications