ಸುಮಲತಾ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಸಿ.ಪಿ. ಯೋಗೇಶ್ವರ್ ಹೇಳಿದ್ದೇನು?, ಇಲ್ಲಿದೆ ವಿವರ
ರಾಮನಗರ, ಜನವರಿ, 13: ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ರಾಜಕೀಯ ವಲಯದಲ್ಲಿ ಗುಸುಗುಸು ಮಾತುಗಳು ಕೇಳಿಬರುತ್ತಿದ್ದರು. ಹಾಗೆಯೇ ಈ ಬಗ್ಗೆ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಸ.ಪಿ.ಯೋಗೇಶ್ವರ್, ಮಂಡ್ಯ ಸಂಸದೆ ಸುಮಲತಾ ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ಸಂಕ್ರಾಂತಿ ಹಬ್ಬದ ನಂತರ ಅವರು ಒಂದು ನಿರ್ಧಾರಕ್ಕೆ ಬರುತ್ತಾರೆ. ಜನವರಿ 16 - 17ರ ನಂತರ ಎಲ್ಲವೂ ಸ್ಪಷ್ಟವಾಗಲಿದೆ ಎಂದಿದ್ದಾರೆ.
ತಮ್ಮ ಹುಟ್ಟೂರು ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ತಮ್ಮ ತಂದೆ ಪುಟ್ಟಮಾದೇಗೌಡ ಹೆಸರಿನಲ್ಲಿ ಸ್ವೆಟರ್ ವಿತರಣೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಸ್ವತಂತ್ರವಾದ ಸರ್ಕಾರ ತರುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಹಲವು ಬಾರಿ ಪಕ್ಷಕ್ಕೆ ಸುಮಲತಾ ಅವರನ್ನು ಆಹ್ವಾನ ಮಾಡಿದ್ದೇನೆ. ಸಂಕ್ರಾಂತಿ ನಂತರ ವರಿಷ್ಠರೊಂದಿಗೆ ಮಾತನಾಡಿ ತಮ್ಮ ನಿರ್ಧಾರ ಪ್ರಕಟಿಸುತ್ತಾರೆ ಎಂದು ತಿಳಿಸಿದರು. ಇನ್ನು ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂಬ ಸುಮಲತಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ, ಆದರೆ ಮುಂದಿನ ಬಾರಿ ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷದೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದಿಲ್ಲ ಎಂದು ನಮ್ಮ ರಾಷ್ಟ್ರೀಯ ನಾಯಕರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.
Karnataka Assembly Election 2023: ಮಂಡ್ಯ ಜಿಲ್ಲೆಯಲ್ಲಿನ ಟಿಕೆಟ್ ಆಕಾಂಕ್ಷಿಗಳು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ
ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪಿದೆ. ಸಿಎಂ ಸ್ಥಾನಕ್ಕಾಗಿ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರು ಕಿತ್ತಾಡುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಬೇಕು ಎಂದು ಹಠ ತೊಟ್ಟಿದ್ದಾರೆ. ಅವರ ರಾಜಕೀಯ ಹಿಡನ್ ಆಜೆಂಡಕ್ಕಾಗಿ ಒಬ್ಬರ ಕಾಲು ಮತ್ತೋಬ್ಬರು ಎಳೆಯುತ್ತಿದ್ದಾರೆ. ಇಬ್ಬರೂ ನಾಯಕರು ಜೊತೆಯಲ್ಲಿದ್ದರೂ ಸಹ ಒಳಗೆ ಗುಂಪುಗಾರಿಕೆ ಇದೆ. ಹಾಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿ.ಪಿ.ಯೋಗೇಶ್ವರ್ ಭವಿಷ್ಯ ನುಡಿದರು.
ಉಚಿತ ವಿದ್ಯುತ್ ಬಗ್ಗೆ CPY ಅಭಿಪ್ರವಾಯವೇನು?
ಇನ್ನು ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪ್ರಣಾಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರಿಗೆ ರಿಯಾಯಿತಿಯಲ್ಲಿ ಹಾಗೂ ಉಚಿತ ವಿದ್ಯುತ್ ನೀಡುತ್ತಿದೆ. ಪುಕ್ಸಟ್ಟೆ ಯಾವುದೇ ಉಚಿತ ಸೌಲಭ್ಯ ನೀಡಿದರೂ ಅದು ದೇಶದ ಪ್ರಗತಿಗೆ ಮಾರಕ. ಆರ್ಥಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಲಿದೆ. ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಅವರು ಉಚಿತ ವಿದ್ಯುತ್ ನೀಡುವುದು ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಸಿಪಿವೈ ಹೇಳಿದ್ದೇನು?
ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅವರು ರಾಜ್ಯಮಟ್ಟದ ನಾಯಕರು, ರಾಜ್ಯದ 224 ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಿಂದ ಬೇಕಾದರೂ ಕೂಡ ಸ್ಪರ್ಧೆ ಮಾಡಬಹುದು. ಹಿಂದೆ ಕುಮಾರಸ್ವಾಮಿ ಸಹ ಸಾತನೂರು, ಚಿಕ್ಕಬಳ್ಳಾಪುರ, ರಾಮನಗರ, ಈಗ ಚನ್ನಪಟ್ಟಣದಲ್ಲಿಯೂ ಸ್ಪರ್ಧೆ ಮಾಡುತ್ತಿದ್ದಾರೆ. ಕೆಲವು ನಾಯಕರಿಗೆ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಗೆಲ್ಲುವ ಆತ್ಮವಿಶ್ವಾಸ ಇರುತ್ತದೆ. ಅವರ ಮಗನಿಗೆ ವರುಣಾ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಿಂದ ಸ್ವರ್ಧೆ ಮಾಡುತ್ತಿದುವುದು ಸ್ವಾಭಾವಿಕ ಎಂದು ತಿಳಿಸಿದರು
ನರೇಂದ್ರ ಮೋದಿ ಅಂತಾರಾಷ್ಟ್ರೀಯ ನಾಯಕ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೆ ಕಾಂಗ್ರೆಸ್ - ಜೆಡಿಎಸ್ ನಾಯಕರ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ಕಂಡು ಭಯವಿದೆ. ಹಾಗಾಗಿ ಮೋದಿಯವರ ರಾಜ್ಯ ಭೇಟಿ ರಾಜಕೀಯವಾಗಿ ವಿರೋಧ ಪಕ್ಷಗಳಲ್ಲಿ ಆತಂಕ ಮೂಡಿಸಿದೆ. ನಮಗೆ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸ್ವತಂತ್ರ್ಯ ಸರ್ಕಾರ ತರುವ ನಿಟ್ಟಿನಲ್ಲಿ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಾರೆ. ಅಲ್ಲದೇ ಇನ್ನೂ ಹಲವು ನಾಯಕರು ರಾಜ್ಯ ಪ್ರವಾಸ ಮಾಡುತ್ತಾರೆ ಎಂದು ವಿರೋಧ ಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.