ಕೋವಿಡ್ 3ನೇ ಅಲೆ ಭೀತಿ: ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿದ ರಾಮನಗರ ಜಿಲ್ಲಾಡಳಿತ
ರಾಮನಗರ, ಆಗಸ್ಟ್ 11: ಕೊರೊನಾ ಮೂರನೇ ಅಲೆಯ ಆರ್ಭಟಕ್ಕೆ ಎಚ್ಚೆತ್ತುಕೊಂಡಿರುವ ರಾಮನಗರ ಜಿಲ್ಲಾಡಳಿತ, ಜಿಲ್ಲಾ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ವೀಕೆಂಡ್ ನಿರ್ಬಂಧ ವಿಧಿಸಿದೆ. ಹಾಗೆಯೇ ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಶ್ರಾವಣ ಶನಿವಾರದ ಆಚರಣೆಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
"ವಾರಾಂತ್ಯ ಹಾಗೂ ಸಾರ್ವತ್ರಿಕ ರಜೆ ದಿನಗಳಂದು ಹೊರ ಜಿಲ್ಲೆಗಳು ಅದರಲ್ಲೂ ಬೆಂಗಳೂರಿನ ಪ್ರವಾಸಿಗರು ಗುಂಪು ಗುಂಪಾಗಿ ಆಗಮಿಸುತ್ತಿದ್ದು, ಇದರಿಂದಾಗಿ ಕೋವಿಡ್- 19 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರಿಂದಾಗಿ ಕೋವಿಡ್- 19 ಮೂರನೇ ಅಲೆಯನ್ನು ನಿಯಂತ್ರಣಕ್ಕೆ ತರುವುದು ಕಷ್ಟ ಸಾಧ್ಯವಾಗಿರುತ್ತದೆ. ರಾಮನಗರ ಜಿಲ್ಲೆಯಾದ್ಯಂತ ಕೋವಿಡ್- 19 ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕೋವಿಡ್- 19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸದರಿ ಆದೇಶ ಹೊರಡಿಸಲಾಗಿದೆ,'' ಎಂದು ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.
ವಾರಾಂತ್ಯದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಜಿಲ್ಲಾ ವ್ಯಾಪ್ತಿಯ ರಾಮನಗರ ತಾಲ್ಲೂಕಿನ ಶ್ರೀರಾಮದೇವರ ಬೆಟ್ಟ, ರೇವಣಸಿದ್ದೇಶ್ವರ ಬೆಟ್ಟ, ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ, ಮಾಗಡಿ ತಾಲ್ಲೂಕಿನ ಮಂಚನಬೆಲೆ ಜಲಾಶಯ, ಸವನದುರ್ಗ ಬೆಟ್ಟ ಮತ್ತು ಕನಕಪುರ ತಾಲ್ಲೂಕಿನ ಸಂಗಮ, ಮೇಕೆದಾಟು ಮತ್ತು ಚುಂಚಿ ಜಲಪಾತ ಪ್ರವಾಸಿ ತಾಣಗಳಲ್ಲಿ ಸಾರ್ವತ್ರಿಕ ರಜೆ ದಿನಗಳು ಹಾಗೂ ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಪ್ರವಾಸಿಗರು/ ಸಾರ್ವಜನಿಕರು ಆಗಮಿಸುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ, ರಾತ್ರಿ ಕರ್ಫ್ಯೂ ಮಾರ್ಗಸೂಚಿ ಬಿಡುಗಡೆ
"ಸರ್ಕಾರವು ಕೋವಿಡ್- 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸುವ ಆದೇಶ/ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. ಯಾವುದೇ ವ್ಯಕ್ತಿ ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಭಾರತೀಯ ದಂಡ ಸಂಹಿತೆಯ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು,'' ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಶ್ರಾವಣ ಪೂಜೆಗಳಿಗೆ ಭಕ್ತಾಧಿಗಳಿಗೆ ನಿರ್ಬಂಧ
ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಿಗೆ ಶ್ರಾವಣ ಮಾಸದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಸಾರ್ವಜನಿಕರು ಮತ್ತು ಭಕ್ತಾಧಿಗಳು ಹೆಚ್ಚು ಸಂಖ್ಯೆಯಲ್ಲಿ ಆಗಮಿಸುವುದರಿಂದ ಕೋವಿಡ್- 19 ಮೂರನೇ ಅಲೆ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಶ್ರಾವಣ ಮಾಸದ ಶನಿವಾರ ಮತ್ತು ಭಾನುವಾರಗಳಂದು ದೇವಾಲಯಗಳಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲಾ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಾದ ರಾಮನಗರ ತಾಲ್ಲೂಕಿನ ರೇವಣಸಿದ್ದೇಶ್ವರ ದೇವಸ್ಥಾನ, ಚನ್ನಪಟ್ಟಣ ತಾಲ್ಲೂಕಿನ ಅಪ್ರಮೇಯ ದೇವಸ್ಥಾನ, ಕೆಂಗಲ್ ಆಂಜನೇಯ ದೇವಸ್ಥಾನ, ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇವಸ್ಥಾನ, ಮಾಗಡಿ ತಾಲ್ಲೂಕಿನ ಶ್ರೀರಂಗನಾಥಸ್ವಾಮಿ ದೇವಸ್ಥಾನ, ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಗಳಲ್ಲಿ ಶ್ರಾವಣ ಮಾಸ ಮತ್ತು ಹುಣ್ಣಿಮೆ ದಿನಗಳಂದು ಜನರ ಪ್ರವೇಶವನ್ನು ರಾಮನಗರ ಜಿಲ್ಲಾಡಳಿತ ನಿರ್ಬಂಧಿಸಿದೆ.
ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮ ಮಾತ್ರ
ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯಿದೆ 2005 ಕಲಂ 12 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಮನಗರ ಜಿಲ್ಲೆಯಾದ್ಯಂತ ಕೋವಿಡ್-19 ಮೂರನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್ ಕುಮಾರ್ ಆದೇಶಿಸಿದ್ದಾರೆ.
Recommended Video
ಉತ್ಸವಗಳು ಮತ್ತು ಜಾತ್ರೆಗಳ ನಿಷೇಧ
ರಾಮನಗರ ಜಿಲ್ಲೆಯ ಎಲ್ಲಾ ದೇವಸ್ಥಾನಗಳಲ್ಲಿ ದೈನಂದಿನ ಪೂಜಾ ಕಾರ್ಯಗಳನ್ನು ಹೊರತುಪಡಿಸಿ, ವಿಶೇಷ ದಿನಗಳಂದು (ಅಮವಾಸೆ, ಹುಣ್ಣಿಮೆ) ನಡೆಯುವ ಆಚರಣೆ, ಸೇವೆಗಳು, ಉತ್ಸವಗಳು ಮತ್ತು ಜಾತ್ರೆಗಳನ್ನು ನಿಷೇಧಿಸಿದೆ. ಆಗಸ್ಟ್ 08, 2021ರಿಂದ ಪ್ರಾರಂಭವಾಗುವ ಶ್ರಾವಣ ಮಾಸದ ಎಲ್ಲಾ ಶನಿವಾರ ಮತ್ತು ಭಾನುವಾರಗಳಂದು ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಜಿಲ್ಲಾ ವ್ಯಾಪ್ತಿಯ ಎಲ್ಲಾ ಮುಜರಾಯಿ ಮತ್ತು ಖಾಸಗಿ ದೇವಾಲಯಗಳಿಗೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಪ್ರವೇಶವನ್ನು ನಿಷೇಧಿಸಿದೆ.