Ramanagara: ಉಡಾಫೆ ಬಿಡಿ ವಾರದೊಳಗೆ ಬೆಳೆ ಸಮೀಕ್ಷೆ ಮುಗಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು

ರಾಮನಗರ ನವೆಂಬರ್ 16: ಬೆಳೆ ಪರಿಹಾರ ಆನ್ಲೈನ್ ಮೂಲಕವೇ ರೈತರಿಗೆ ತಲುಪಲಿದ್ದು, ಅವರ ಮಾಹಿತಿ ಬಿಟ್ಟುಹೋದರೆ ಮ್ಯಾನ್ಯುವಲ್ ಆಗಿ ಅವರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ. ಹೀಗಾಗಿ ಅಧಿಕಾರಿಗಳು ಉಡಾಫೆ ಬಿಟ್ಟು ಶೇ.100 ರಷ್ಟು ಎಲ್ಲಾ ರೈತರ ಬೆಳೆ ಸಮೀಕ್ಷೆಯ ಮಾಹಿತಿಯನ್ನು ಒಂದು ವಾರದಲ್ಲಿ 'ಫ್ರೂಟ್ಸ್' ತಂತ್ರಾಂಶದಲ್ಲಿ ನಮೂದಿಸಿ ಅವರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ರಾಮನಗರದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, "ರಾಜ್ಯ ಈ ವರ್ಷ ಇತಿಹಾಸ ಕಾಣದ ಬರಕ್ಕೆ ತುತ್ತಾಗಿದೆ. ಮಳೆ ಇಲ್ಲದ ಕಾರಣ ರೈತರು ಪರಿತಪಿಸುವಂತಾಗಿದೆ. ಬೆಳೆ ಕೈಸೇರದೆ ಸಂಕಷ್ಟಕ್ಕೀಡಾಗಿದ್ದಾರೆ ಇಂತಹ ಸಂದರ್ಭದಲ್ಲಿ ನಾವು ರೈತರ ಪರ ನಿಲ್ಲಬೇಕಾಗಿದೆ. ಹೀಗಾಗಿ ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಲು ಬೆಳೆ ಸಮೀಕ್ಷೆ ಅಗತ್ಯ" ಎಂದರು.

Ramanagara: Krishna Byre Gowda warned to complete the crop survey within a week

ರಾಮನಗರದಲ್ಲಿ 242 ಗ್ರಾಮ ಆಡಳಿತ ಅಧಿಕಾರಿಗಳ ವೃತ್ತ ಇದೆ. ಆದರೆ, ಈವರೆಗೆ ಸಂಪೂರ್ಣ ಬೆಳೆ ಸಮೀಕ್ಷೆ ಆಗಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅನೇಕ ರೈತರಿಗೆ ಅನ್ಯಾಯವಾಗುತ್ತದೆ ಎಂದು ಕಿಡಿಕಾರಿದ ಸಚಿವರು, ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ನಡೆಸಿ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಬೇಕು" ಎಂದು ಸಮಯದ ಗಡುವು ನೀಡಿದರು.

ಕುಡಿಯುವ ನೀರು ತಕ್ಷಣ ಪೂರೈಸಿ

ರಾಮನಗರ ಭಾಗದಲ್ಲಿ ಎಲ್ಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದರೂ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಈ ವರ್ಷ ಬರಗಾಲ ಎದುರಾಗಿದೆ. ಮುಂದಿನ ಬೇಸಿಗೆ ಅಥವಾ ಅದಕ್ಕೂ ಮುನ್ನವೇ ರಾಮನಗರ ಭಾಗದ ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ. ಅಧಿಕಾರಿಗಳು ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಎಂದು ಸರ್ವೆ ನಡೆಸಿ ನೀರಿನ ಸಮಸ್ಯೆ ಕಂಡುಬರುವ ಕಡೆಗಳಲ್ಲಿ ಖಾಸಗಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಿ. ಯಾವ ಭಾಗದಲ್ಲೂ ಸಾರ್ವಜನಿಕರು ನೀರಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಿ, ಈ ಖರ್ಚಿಗೆ ಜಿಲ್ಲಾಧಿಕಾರಿಗಳ ಖಾತೆಯಿಂದ ಎಸ್ ಡಿ ಆರ್ ಎಫ್ ಹಣವನ್ನು ಬಳಸಿಕೊಳ್ಳಿ ಎಂದು ಸಲಹೆ ನೀಡಿದರು.

Ramanagara: Krishna Byre Gowda warned to complete the crop survey within a week

ನರೇಗಾ ಕೆಲಸದ ದಿನ 150 ದಿನಕ್ಕೆ ಏರಿಕೆ!

ಸಭೆಯಲ್ಲಿ ನರೇಗಾ ಕೆಲಸದ ದಿನದ ಏರಿಕೆಯ ಬಗ್ಗೆಯೂ ಚರ್ಚೆ ನಡೆಯಿತು. ಈ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, "ರಾಜ್ಯದಲ್ಲಿ ಈಗಾಗಲೇ ಬರ ಘೋಷಿಸಲಾಗಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಬರ ಘೋಷಿಸಿದ ತಕ್ಷಣ ನರೇಗಾ ಕೆಲಸದ ದಿನ 100 ರಿಂದ 150 ದಿನಕ್ಕೆ ಏರಿಕೆಯಾಗುತ್ತದೆ. ಈಗಾಗಲೇ ಈ ಬಗ್ಗೆ ಕೇಂದ್ರಕ್ಕೆ ಪತ್ರವನ್ನೂ ಬರೆಯಲಾಗಿದೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ" ಎಂದರು.

ಮುಂದುವರೆದು, "ರಾಜ್ಯದಲ್ಲಿ 3 ಲಕ್ಷ ನರೇಗಾ ಕಾರ್ಡುದಾರರ ಕೆಲಸದ ಅವಧಿ ಈಗಾಗಲೇ 80 ದಿನ ದಾಟಿದೆ. ಒಂದು ವೇಳೆ 100 ದಿನ ದಾಟಿದ್ದರೆ ಅಂತವರಿಗೆ ಮತ್ತೆ ಕೆಲಸದ ದಿನ ವಿಸ್ತರಿಸುವುದು ಸಾಧ್ಯವಿಲ್ಲ. ಹೀಗಾಗಿ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು, ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು" ಎಂದು ಸೂಚಿಸಿದರು.

ಬಗರ್ ಹುಕುಂ ಅರ್ಜಿ ವಿಲೇಗೆ ಆರು ತಿಂಗಳ ಗಡುವು

ವಿಲೇವಾರಿಯಾಗದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, "ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ರಾಮನಗರದಲ್ಲಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ನಮೂನೆ 57ರ ಅಡಿಯಲ್ಲೇ ಸುಮಾರು 27,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಈವರೆಗೆ 10,000 ಅರ್ಜಿಗಳು ಮಾತ್ರ ವಿಲೇವಾರಿಯಾಗಿದೆ. ಹೀಗಾಗಿ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಇದು ಸರಿಯಲ್ಲ. ಹೀಗಾಗಿ ಈ ಎಲ್ಲಾ ಅರ್ಜಿಗಳನ್ನು ಮುಂದಿನ 6 ತಿಂಗಳಲ್ಲಿ ಬಾಕಿ ಉಳಿಸದಂತೆ ವಿಲೇವಾರಿಗೊಳಿಸಬೇಕು, ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು" ಎಂದು ತಿಳಿಸಿದರು.

ಮುಂದುವರೆದು, "ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ನಿಜಕ್ಕೂ ಉಳುಮೆಯಲ್ಲಿ ತೊಡಗಿರುವ ರೈತರಿಗೆ ಮಾತ್ರ ಸಾಗುವಳಿ ಚೀಟಿ ನೀಡಬೇಕು. ಆದರೆ, ಬಗರ್ ಹುಕುಂ ಅಡಿಯಲ್ಲಿ ಗೋಮಾಳ ಜಮೀನನ್ನು ನೀಡಲು ಸಾಧ್ಯವಿಲ್ಲದ ಕಾರಣ ಅಧಿಕಾರಿಗಳು ಈಬಗ್ಗೆಯೂ ಎಚ್ಚರಿಕೆವಹಿಸಬೇಕು" ಎಂದು ಅವರು ತಾಕೀತು ಮಾಡಿದರು.

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ. ಶೀಘ್ರದಲ್ಲೇ ಈ ಆ್ಯಪ್ ಅಧಿಕಾರಿಗಳ ಕೈಸೇರಲಿದೆ. ಈ ಆ್ಯಪ್ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಕಾವೇರಿ 2.0 ಮೂಲಕ ನೋಂದಣಿ ಮಾಡಿಸಿಕೊಟ್ಟರೆ ಜನರಿಗೂ ಅನುಕೂಲವಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಕಂದಾಯ ಗ್ರಾಮ ಘೋಷಿಸಿ, ಬಡವರಿಗೆ ನ್ಯಾಯ ಸಲ್ಲಿಸಿ:

ರಾಮನಗರ ಜಿಲ್ಲೆಯಲ್ಲಿ ಒಟ್ಟು 44 ಕಂದಾಯ ಗ್ರಾಮಗಳು ರಚನೆಯಾಗಬೇಕಿತ್ತು. ಆದರೆ, ಈವರೆಗೆ 16 ಗ್ರಾಮಗಳಿಗೆ ಮಾತ್ರ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಐದು ವರ್ಷಗಳ ಅವಧಿ ಇದ್ದರೂ ಎಲ್ಲಾ ಗ್ರಾಮಗಳನ್ನೂ ಈವರೆಗೆ ಏಕೆ ಕಂದಾಯ ಗ್ರಾಮಗಳನ್ನಾಗಿ ಘೋಷಿಸಿಲ್ಲ? ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

ಅಲ್ಲದೆ, ಕಂದಾಯ ಗ್ರಾಮ ಎಂದು ಘೋಷಿಸಲಾದ ಗ್ರಾಮಗಳ ಪೈಕಿಯೂ 9 ಗ್ರಾಮಗಳಲ್ಲಿ ಮಾತ್ರ 435 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗಿದೆ. ಉಳಿದ 7 ಗ್ರಾಮಗಳಿಗೆ ಈವರೆಗೆ ಏಕೆ ಹಕ್ಕು ಪತ್ರ ಕೊಟ್ಟಿಲ್ಲ? ಎಂದು ಅಸಮಾಧಾನ ಹೊರಹಾಕಿದ ಸಚಿವರು, ಕಂದಾಯ ಇಲಾಖೆಗೆ ಸೇರದ ಕಾರಣ ಕಂದಾಯೇತರ ಜನವಸತಿ ನಿವಾಸಿಗಳು ಅಭಿವೃದ್ಧಿ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಕರ್ನಾಟಕ ಭೂ ಕಂದಾಯ ಕಾಯಿದೆಗೆ ತಿದ್ದುಪಡಿ ತಂದು ತಾಂಡ-ಗೊಲ್ಲರಹಟ್ಟಿ ಸೇರಿದಂತೆ ಪ್ರದೇಶಗಳನ್ನು ಕಂದಾಯ ಗ್ರಾಮ ಎಂದು ಘೋಷಿಸಲು ಅನುವುಮಾಡಿಕೊಡಲಾಗಿತ್ತು.

ಸಾರ್ವಜನಿಕರ 30 ವರ್ಷಗಳ ಬೇಡಿಕೆಗೆ ಅನುಗುಣವಾಗಿ 2013ರ ಕಾಂಗ್ರೆಸ್ ಸರ್ಕಾರ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ನಿರ್ಧಾರ ತೆಗದುಕೊಂಡಿದ್ದರು. ಆದರೆ, ರಾಮನಗರದಲ್ಲಿ ಈ ಸಂಬಂಧ ಸಮಾಧಾನಕರ ಕೆಲಸ ಆಗದಿರುವುದು ವಿಷಾಧನೀಯ. ಹೀಗಾಗಿ ಶೀಘ್ರದಲ್ಲಿ ಕಾನೂನು ಪ್ರಕಾರ ಕಂದಾಯ ಗ್ರಾಮ ಘೋಷಿಸಿ ಹಕ್ಕುಪತ್ರ ನೀಡಿ ಎಂದರು ಸೂಚಿಸಿದರು.

ಇ-ಆಫೀಸ್ ನಾಮಕಾವಸ್ತೆಯಾ? : ಸಚಿವರ ಕಿಡಿ

ರಾಮನಗರ ಜಿಲ್ಲಾ ಕಚೇರಿ ಹೊರತುಪಡಿಸಿ ಬೇರೆ ಯಾವ ಸರ್ಕಾರಿ ಕಚೇರಿಗಳಲ್ಲೂ ಇ-ಆಫೀಸ್ ಏಕೆ ಬಳಸುತ್ತಿಲ್ಲ? ಇ-ಆಫೀಸ್ ಎಂದರೆ ನಾಮಕಾವಸ್ತೆಯಾ? ಎಂದು ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

"ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಮುಂದಾದರೆ, ಎಲ್ಲಾ ಕೆಲಸಗಳೂ ವೇಗ ಪಡೆಯುತ್ತದೆ. ಅಧಿಕಾರಿಗಳ-ಜನರ ಸಮಯವೂ ಉಳಿಯುತ್ತದೆ. ಇದೇ ಕಾರಣಕ್ಕಾಗಿ ನಾನು ಕಂದಾಯ ಇಲಾಖೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇ-ಆಫೀಸ್ ಬಳಸುವಂತೆ ಎಲ್ಲರಿಗೂ ಸಂದೇಶ ರವಾನಿಸಿದ್ದೇನೆ. ಈವರೆಗೆ 19 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಇ-ಆಫೀಸ್ ಬಳಸುವಂತೆ ತಾಕೀತು ಮಾಡುತ್ತಿದ್ದೇನೆ. ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲೂ ಇ-ಆಫೀಸ್ ಬಳಸುತ್ತಿದ್ದಾರೆ. ಆದರೂ, ರಾಮನಗರ ತಾಲೂಕು ಕಚೇರಿ ಹಾಗೂ ಉಪ ವಿಭಾಗಾಧಿಕಾರಿ ಕಚೇರಿಗಳಲ್ಲಿ ಇ-ಆಫೀಸ್ ಬಳಸುತ್ತಿಲ್ಲ. ಹಾಗಾದ್ರೆ ಸಚಿವರ ಮಾತಿಗೆ ಬೆಲೆ ಇಲ್ವ? ನಮ್ಮ ಸೂಚನೆಗಳನ್ನು ಯಾರೂ ಪಾಲಿಸೋದಿಲ್ವ?" ಎಂದು ಸಚಿವರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಪ್ರಾಯೋಗಿಕ ಮರು ಭೂ ಮಾಪನಕ್ಕೆ (ರೀ ಸರ್ವೇ) ಚಾಲನೆ:

ರಾಜ್ಯದಲ್ಲಿ 1920ರ ನಂತರ ಸರ್ವೇ ನಡೆದಿಲ್ಲ. ಪ್ರತಿ ಹಳ್ಳಿಯ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳಿಗೆ ಸಂಬಂಧಿಸಿದಂತೆ ಈಗ ಸರ್ಕಾರದ ಬಳಿ ಇರುವುದು ನೂರು ವರ್ಷಗಳ ಹಳೆಯ ಬ್ರಿಟೀಷರ ಕಾಲದಲ್ಲಿ ನಡೆದ ಸರ್ವೇ ದಾಖಲೆಯೇ ಆಗಿದೆ. ಆದರೆ, ಈ ನೂರು ವರ್ಷದಲ್ಲಿ ಕೃಷಿ ಮತ್ತು ಜನವಸತಿ ಪ್ರದೇಶಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ಪ್ರತಿಯೊಂದು ಗ್ರಾಮಠಾಣಾ ಗಡಿ ಹಾಗೂ ಸರ್ವೇ ನಂಬರ್ ಗಡಿಯಲ್ಲೂ ವ್ಯತ್ಯಾಸಗಳಾಗಿವೆ. ಆದರೆ, ಈ ಬಗ್ಗೆ ಸರ್ಕಾರಿ ದಾಖಲೆಗಳಲ್ಲಿ ನಿಖರ ವಿವರಣೆ ಇಲ್ಲ.

ಪರಿಣಾಮ ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ಸಮಸ್ಯೆಗೆ ಒಳಗಾಗುತ್ತಿದ್ದಾರೆ. "ಸರ್ವೇ ನಂಬರ್ ಡಿಸ್ಪ್ಯೂಟ್" ಎಂಬುದು ರೈತರ ಪಾಲಿಗೆ ಸಾಮಾನ್ಯ ಸಮಸ್ಯೆ ಎಂಬಂತಾಗಿದೆ. ಸರ್ಕಾರಿ ಜಮೀನನ್ನು ಗುರುತಿಸಿ ರಕ್ಷಿಸುವುದೂ ದೊಡ್ಡ ಸವಾಲಾಗಿದೆ. ಹೀಗಾಗಿ ಈ ಎಲ್ಲಾ ಸಮಸ್ಯೆಗೆ ಇತಿಶ್ರೀ ಹಾಡುವ ಸಲುವಾಗಿ ಇಂದು ಕನಕಪುರ ತಾಲೂಕು ಉಯ್ಯಂಬಳ್ಳಿ ಹೋಬಳಿಯಲ್ಲಿ ಡ್ರೋನ್ ಚಾಲಿತ ಭೂ ಮರು ಮಾಪನ ಕ್ಕೆ (ರೀ ಸರ್ವೇ) ಚಾಲನೆ ನೀಡಲಾಯಿತು.

ಹೊಸ ತಂತ್ರಜ್ಞಾನದಲ್ಲಿ ಡ್ರೋನ್ ಪ್ರತಿ ಚ.ಕಿಲೊಮೀಟರ್ ಗೆ 4000 ಕ್ಕೂ ಅಧಿಕ ಫೋಟೊ ತೆಗೆಯುತ್ತದೆ. ಈ ಫೋಟೊಗಳ ಆಧಾರದಲ್ಲಿ ವೈಜ್ಞಾನಿಕವಾಗಿ ಹಿಡುವಳಿ ಭೂಮಿ, ಗೋಮಾಳ, ಹುಲ್ ಬನ್ನಿ, ಸರ್ಕಾರಿ ಖರಾಬು, ಇನಾಮು ಮತ್ತು ಕೆರೆ ಭೂಮಿಗಳನ್ನು ಗುರುತಿಸಲಾಗುವುದು. ಈ ಮೂಲಕ ರೈತರ ಸರ್ವೇ ಡಿಸ್ಪ್ಯೂಟ್ ಗಳಿಗೆ ಶಾಶ್ವತ ಪರಿಹಾರ ಹಾಗೂ ಸರ್ಕಾರಿ ಭೂಮಿ ಗುರುತಿಸಿ ಒತ್ತುವರಿ ತೆರವು ಮಾಡಲು ಸಹಕಾರಿಯಾಗುವುದು. ಈ ಪ್ರಾಯೋಗಿಕ ರೀ ಸರ್ವೇ ಯಶಸ್ವಿಯಾದರೆ ರಾಜ್ಯಾದ್ಯಂತ ಎಲ್ಲಾ ಕೃಷಿ ಜಮೀನುಗಳನ್ನೂ ಡ್ರೋನ್ ಮೂಲಕ ರೀ ಸರ್ವೇ ಮಾಡುವ ಚಿಂತನೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+