Dhruva Narayan : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ: ರಾಮನಗರ ಪ್ರಜಾಧ್ವನಿ ಯಾತ್ರೆ ರದ್ದು
ರಾಮನಗರ, ಮಾರ್ಚ್ 11: ಹಳೇ ಮೈಸೂರು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆಯಬೇಕಿದ್ದ ಪ್ರಜಾಧ್ವನಿ ಬಸ್ ಯಾತ್ರೆ ಕಾರ್ಯಕ್ರಮ ರದ್ದು ಮಾಡಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಕೈಗೊಂಡಿದೆ. ಶನಿವಾರ ರಾಮನಗರ ಜಿಲ್ಲೆಯ ಮೂರು ಕಡೆ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರಜಾಧ್ವನಿ ಯಾತ್ರೆಯ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಸಕಲ ಸಿದ್ಧತೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಬೇಕಾದ ಕಾರ್ಯಕ್ರಯಗಳನ್ನು ಮುಂದೂಡಲಾಗಿದೆ. ರಾಮನಗರ ಜಿಲ್ಲೆಯನ್ನು ನಿನ್ನೆ ಪ್ರವೇಶ ಮಾಡಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಬಸ್ ಯಾತ್ರೆ ಬಿಡದಿಯ ಹೆಜ್ಜಾಲ ಮೂಲಕ ಪ್ರವೇಶ ಮಾಡಿ ಬಿಡದಿ, ಜಾಲಮಂಗಲ, ಮಾಗಡಿ ಪಟ್ಟಣದ ಕೆಂಪೇಗೌಡ ಬಯಲುರಂಗಮಂದಿರಲ್ಲಿ ಸಭೆ ಹಾಗೂ ಕುದೂರಿನ ರಾಮಲೀಲಾ ಮೈದಾನದಲ್ಲಿ ಸಮಾರೋಪ ಸಭೆ ಯಶಸ್ವಿಯಾಗಿ ಜರುಗಿತ್ತು.
ತೀವ್ರ ರಕ್ತಸ್ರಾವದಿಂದ ಆರ್.ಧ್ರುವನಾರಾಯಣ ನಿಧನ
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶನಿವಾರ ಬೆಳಗ್ಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರ್.ಧ್ರುವನಾರಾಯಣ ಅವರು ತೀವ್ರ ರಕ್ತಸ್ರಾವ ಆಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.











Click it and Unblock the Notifications