ಸರ್ಕಾರದ ಶಕ್ತಿ ಯೋಜನೆಯಿಂದ ತೊಂದರೆ: ರಸ್ತೆಗಿಳಿದು ವಿದ್ಯಾರ್ಥಿಗಳ ಪ್ರತಿಭಟನೆ
ರಾಮನಗರ ಆಗಸ್ಟ್ 03: ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಬಸ್ಗಳಲ್ಲಿ ವಿದ್ಯಾರ್ಥಿಗಳು ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಬಸ್ ಕೊರತೆ ನೀಗಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ಬಸ್ ತಡೆಯಲು ಮುಂದಾದ ವೇಳೆ ಪೋಲಿಸರು ಹಾಗೂ ವಿದ್ಯಾರ್ಥಿಗಳ ನಡುವೆ ಕೆಲ ಕಾಲ ಮಾತಿನ ಚಕಮಕಿ ನಡೆದ ಘಟನೆ ಕೂಡ ರೇಷ್ಮೆ ನಗರಿ ರಾಮನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸರ್ಕಾರದ 'ಶಕ್ತಿ ಯೋಜನೆ' ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದ ನಂತರ ಸರ್ಕಾರಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಜೂನ್ ತಿಂಗಳಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಬರುತ್ತಾರೆ. ಸಮಯಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಅಳಲು ತೊಡಿಕೊಂಡರು.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ಮಾಡುವ ಸರ್ಕಾರಿ ಬಸ್ಗಳ ಕೊರತೆ ಹೆಚ್ಚಾಗಿರುವ ಕಾರಣ ಬೇರೆ ಬೇರೆ ತಾಲೂಕುಗಳಿಂದ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಬರಲು ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ಕಷ್ಟವಾಗುತ್ತಿದೆ.

ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ನ ಸಂಖ್ಯೆಯನ್ನು ಹೆಚ್ಚಿಸಿಕೊಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಪ್ರತಿಭಟನೆ ನಿರತ ವಿಧ್ಯಾರ್ಥಿಗಳು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಎಬಿವಿಪಿ ಮುಖಂಡ ವಿಘ್ನೇಶ್, 'ಸರ್ಕಾರದ ಶಕ್ತಿ ಯೋಜನೆ ಜಾರಿಗೂ ಮೊದಲು ರಾಮನಗರ ಮತ್ತು ಚನ್ನಪಟ್ಟಣ ನಡುವೆ ಕೆಂಗಲ್ ಸಾರಿಗೆ ಹೆಸರಿನ ಬಸ್ಗಳು ಸಂಚಾರ ಮಾಡುತ್ತಿದ್ದವು. ಆದರೆ ಶಕ್ತಿ ಯೋಜನೆ ಅನುಷ್ಠಾನಗೊಂಡ ಬಳಿಕ ಕೆಂಗಲ್ ಸಾರಿಗೆ ಬಸ್ಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ' ಎಂದು ಆರೋಪಿಸಿದ್ದರು.
'ಈಗಾಗಲೇ ಬಸ್ ವ್ಯವಸ್ಥೆ ಸರಿಪಡಿಸುವಂತೆ ಸುಮಾರು 9 ಬಾರಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಆದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಪ್ರತಿಭಟನೆ ನಡೆಸಿದಾಗ ಮಾತ್ರ 5-6 ದಿನ ಮಾತ್ರ ಬಸ್ ವ್ಯವಸ್ಥೆ ಮಾಡುತ್ತಾರೆ. ನಂತರ ಯಾಥಪ್ರಕಾರ ಬಸ್ ವ್ಯವಸ್ಥೆಗೆ ಪರದಾಡಬೇಕು' ಎಂದು ಜ್ಞಾನೇಶ್ ಆರೋಪಿಸಿದರು.












Click it and Unblock the Notifications