ರಾಮನಗರ; ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ ಸ್ಥಾಪನೆ
ರಾಮನಗರ, ಜುಲೈ 20; "ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಮಾವು ಸಂಸ್ಕರಣಾ ಘಟಕ ಹಾಗೂ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣ ಯೋಜನೆಗಳಿಗೆ ಅಕ್ಟೋಬರ್ನಲ್ಲಿ ಸಮಗ್ರ ಯೋಜನಾ ವರದಿ ಅಂತಿಮಗೊಳಿಸಿ ಡಿಸೆಂಬರ್ನಲ್ಲಿ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗುವುದು" ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದರು.
ಮಂಗಳವಾರ ಈ ಎರಡೂ ಯೋಜನೆಗಳಿಗೆ ಸಂಬಂಧಿಸಿದಂತೆ ರೇಷ್ಮೆ ಖಾತೆ ಸಚಿವ ಆರ್. ಶಂಕರ್, ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್, ಮಾಗಡಿ ಶಾಸಕ ಮಂಜುನಾಥ್ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಚಿವರು ಸಭೆ ನಡೆಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಅಶ್ವತ್ಥ ನಾರಾಯಣ, "ಜಿಲ್ಲೆಗೆ ಇವೆರಡೂ ಯೋಜನೆಗಳು ಬಹಳ ಉಪಯುಕ್ತವಾಗುತ್ತವೆ. ರೈತರಿಗೆ ಸಹಕಾರಿಯಾಗಲಿದೆ. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ" ಎಂದರು.

ಮಾವು ಸಂಸ್ಕರಣಾ ಘಟಕ; ಬೈರಾಪಟ್ಟಣದಲ್ಲಿ ಗುರುತಿಸಲಾಗಿರುವ ಒಟ್ಟು 40 ಎಕರೆ ಪ್ರದೇಶವಿದ್ದು, ಮೊದಲ ಹಂತದಲ್ಲಿ 15 ಎಕರೆಯಲ್ಲಿ 4 ಎಕರೆ ಪ್ರದೇಶದಲ್ಲಿ ಸಾಮಾನ್ಯ ಸೌಲಭ್ಯಗಳನ್ನು ಕಲ್ಪಿಸಿ ಉಳಿದ ಜಾಗದಲ್ಲಿ ಆಹಾರ ಸಂಸ್ಕರಣಾ ಕ್ಲಸ್ಟರ್ ಮಾಡಲಾಗುತ್ತದೆ. ಇದರಲ್ಲಿಯೇ ಮಾವು ಸಂಸ್ಕರಣಾ ಘಟಕ ಕೂಡ ಬರುತ್ತದೆ. ಸರಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಐದು ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತದೆ.
ರಫ್ತಾರ್ ಯೋಜನೆ ಅಡಿಯಲ್ಲಿ 10 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಈಗಾಗಲೇ ಯೋಜನೆಗೆ ಪ್ರಾಥಮಿಕ ಒಪ್ಪಿಗೆ ಪಡೆಯಲಾಗಿದೆ. ಅಂತಿಮ ಒಪ್ಪಿಗೆಯ ಪ್ರಕ್ರಿಯೆಗಳಷ್ಟೇ ಬಾಕಿ ಇದೆ. ಈ ಯೋಜನೆಗೆ ಖಾಸಗಿ ಕ್ಷೇತ್ರದಿಂದ 500 ಕೋಟಿ ರೂ. ಹೂಡಿಕೆ ಅಗತ್ಯವಿದ್ದು, ಹೂಡಿಕೆ ಮಾಡಿದವರಿಗೆ ಶೇ.40ರಷ್ಟು ಸಬ್ಸಿಡಿ ದೊರೆಯಲಿದೆ.
20 ಎಕರೆಯಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ; ಚನ್ನಪಟ್ಟಣ ಸಮೀಪದ ರೇಷ್ಮೆ ತರಬೇತಿ ಕೇಂದ್ರದಲ್ಲಿರುವ 20 ಎಕರೆ ಜಾಗದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗಲಿದೆ. ನಬಾರ್ಡ್ನಿಂದ 75 ಕೋಟಿ ರೂ. ಆರ್ಥಿಕ ನೆರವು ಇದಕ್ಕೆ ಸಿಗುತ್ತಿದೆ. ಮುಂಗಡ ಪತ್ರದಲ್ಲಿ ಯೋಜನೆಯನ್ನು ಘೋಷಣೆ ಮಾಡಲಾಗಿದೆ.
ಈ ಸಭೆಯಲ್ಲಿ ಶಾಸಕ ಸಾ. ರಾ. ಮಹೇಶ್, ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮೂಲಸೌಕರ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications