ರಾಮನಗರದಿಂದ ನನ್ನನ್ನು ಖಾಲಿ ಮಾಡಿಸಲು ಆಗುವುದಿಲ್ಲ; ಎಚ್ಡಿಕೆ
ರಾಮನಗರ, ಜನವರಿ 28; "ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಎಚ್. ಡಿ. ಕುಮಾರಸ್ವಾಮಿ ಡಿಕೆಶಿ ಸಹೋದರರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಶುಕ್ರವಾರ ಚನ್ನಪಟ್ಟಣದ ರಾಜ ಕೆಂಪೇಗೌಡ ಬಡವಾಣೆ ಹಾಗೂ ತಿಟ್ಟಮಾರನಹಳ್ಳಿಯಲ್ಲಿ ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. "ನಾನು ಅವರನ್ನಾಗಲಿ ಅಥವಾ ಮತ್ತೆ ಯಾರನ್ನೇ ಆಗಲಿ ಟಾರ್ಗೆಟ್ ಮಾಡುತ್ತಿಲ್ಲ. ನನಗೂ ಅವರಿಗೂ ಸಂಬಂಧ ಇಲ್ಲ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಆದರೆ ನನ್ನನ್ನ ಅವರು ಟಾರ್ಗೆಟ್ ಮಾಡಿದ್ದಾರೆ" ಎಂದರು.
"ಅವರು ಕುಮಾರಸ್ವಾಮಿಯನ್ನು ರಾಮನಗರದಿಂದ ಖಾಲಿ ಮಾಡಿಸಬೇಕಂತೆ. ನನ್ನನ್ನು ಖಾಲಿ ಮಾಡಿಸಲು ಆಗುತ್ತದೆಯೇ? ಎನ್ನುವುದು ಅವರಿಗೆ ಗೊತ್ತಿಲ್ಲ. ರಾಮನಗರ ಜಿಲ್ಲೆಗೂ ನನಗೂ ಇರುವ ಸಂಬಂಧ ಸಾವಿರಾರು ಬಾರಿ ಹೇಳಿದ್ದೇನೆ. ನನಗೂ ಈ ಜಿಲ್ಲೆಗೂ ತಾಯಿ ಮಗನ ಸಂಬಂಧ ಇದೆ" ಎಂದು ಕುಮಾರಸ್ವಾಮಿ ತಿಳಿಸಿದರು.
"ಅವರು ಹಣದ ಮೂಲಕ, ದಬ್ಬಾಳಿಕೆ ಮೂಲಕ ಕುಮಾರಸ್ವಾಮಿಯನ್ನು ಬಗ್ಗುಬಡಿಯಲು ಇನ್ನು ಹತ್ತು ಜನ್ಮ ಎತ್ತಿ ಬರಬೇಕು. ಈ ಜಿಲ್ಲೆಯ ಜನರಿಗೂ ದೇವೇಗೌಡರ ಕುಟುಂಬಕ್ಕೆ ಪೂರ್ವ ಜನ್ಮದ ಸಂಬಂಧ ಇದೆ" ಎಂದು ಕುಮಾರಸ್ವಾಮಿ ರಾಮನಗರದ ಮೇಲಿರುವ ಪ್ರೀತಿಯ ಬಗ್ಗೆ ಮಾತನಾಡಿದರು.

ಜೆಡಿಎಸ್ ಭದ್ರಕೋಟೆ ಛಿದ್ರವಾಗುತ್ತದೆ
"ಮೇಕೆದಾಟು ಪಾದಯಾತ್ರೆ ಬಳಿಕ ಜೆಡಿಎಸ್ ಭದ್ರಕೋಟೆ ಛಿದ್ರವಾಗುತ್ತದೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಇಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭ ಮಾಡುತ್ತೇವೆ ಎಂದಿದ್ದಾರೆ. ಅವರು ಒಂದಲ್ಲ ಇನ್ನು ಹತ್ತು ಪಾದಯಾತ್ರೆ ಮಾಡಲಿ, ಇದು ದುರಂಕಾರದ ಮಾತಲ್ಲ. ಈ ಜಿಲ್ಲೆಯ ಜನರನ್ನು ಗೆಲ್ಲೋದು ಅಷ್ಟು ಸುಲಭವಲ್ಲ. ಪ್ರೀತಿ, ವಿಶ್ವಾಸ, ದುಡಿಮೆ ಇದ್ದರಷ್ಟೇ ಜಿಲ್ಲೆಯಲ್ಲಿ ಉಳಿಯಲು ಸಾಧ್ಯ. ಹಣಕ್ಕೆ ಇಲ್ಲಿ ಬೆಲೆ ಸಿಗಲ್ಲ" ಎಂದು ಕುಮಾರಸ್ವಾಮಿ ಹೇಳಿದರು.
ಸಿ. ಎಸ್. ಪುಟ್ಟರಾಜು ಹಾಗೂ ಇತರೆ ಜೆಡಿಎಸ್ ನಾಯಕರು ಸಿದ್ದರಾಮಯ್ಯ ಭೇಟಿ ಮಾಡಿರುವ ವಿಚಾರ ನನಗೆ ಗೊತ್ತಿಲ್ಲ. "ಸಿದ್ದರಾಮಯ್ಯ ಯಾರನ್ನು ಭೇಟಿ ಮಾಡುತ್ತರೋ ಅದನ್ನು ಕಟ್ಟಿಕೊಂಡು ನನಗೇನು?. ಯಾರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು, ಚರ್ಚೆ ಮಾಡಬಹುದು. ನನಗೆ ನನ್ನ ಪಕ್ಷದ ಕಾರ್ಯಕರ್ತರು, ಜನ ಮುಖ್ಯ. ಕಾರ್ಯಕರ್ತರಿದ್ದರೆ ಅಷ್ಟೇ ಪಕ್ಷ ಮತ್ತು ಮುಖಂಡರು ಬೆಳೆಯೋದು" ಎಂದರು.

ಸಿ. ಎಂ. ಇಬ್ರಾಹಿಂ ನಮ್ಮವರು
"ಸಿ. ಎಂ. ಇಬ್ರಾಹಿಂ ನಮಗೆ ಹಳಬರು, ದೇವೇಗೌಡರ ಗರಡಿಯಲ್ಲಿ ಬೆಳೆದವರು. ನಾನು ಸಿದ್ದರಾಮಯ್ಯ ಜತೆ ಹೋಗಿ ದೇವೇಗೌಡರನ್ನು ದೂರ ಮಾಡಿಕೊಂಡೆ. ಅವರ ಕೊನೆ ಆಸೆಯಂತೆ ಮುಂದಿನ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ಹಾಗಾಗಿ ನಾನು ಜೆಡಿಎಸ್ ಸೇರುತ್ತೇನೆಂದು ಸ್ವತಃ ಅವರೇ ಹೇಳಿದ್ದಾರೆ. ಅವರಿಗೆ ನಾನು ಸ್ವಾಗತ ಮಾಡುತ್ತೇನೆ" ಎಂದು ಕುಮಾರಸ್ವಾಮಿ ಹೇಳಿದರು.

ಸರ್ಕಾರಕ್ಕೆ 6 ತಿಂಗಳು ಜನ ತೀರ್ಮಾನ ಮಾಡುತ್ತಾರೆ
"ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 6 ತಿಂಗಳು ಪೂರೈಸಿದೆ. ಆ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ಇನ್ನೂ ಒಂದು ವರ್ಷ ಇದೆ. ಅದರ ಬಗ್ಗೆ ನಾನೇಕೆ ಹೇಳಲಿ. ಅವರು ಈಗಾಗಲೇ ದೊಡ್ಡ ದೊಡ್ಡ ಜಾಹೀರಾತುಗಳ ಮೂಲಕ ಅವರ ಪ್ರಚಾರ ಪಡೆಯುತ್ತಿದ್ದಾರೆ. ಜನ ಸಾಮಾನ್ಯರ ಪರಿಸ್ಥಿತಿ ಬಗ್ಗೆ ಯಾರೂ ನೋಡುತ್ತಿಲ್ಲ. 6 ತಿಂಗಳು ಸರ್ಕಾರ ಇತ್ತು ಅನ್ನುವ ಭಾವನೆ ಜನರಲ್ಲಿ ಇಲ್ಲ" ಎಂದು ಸರ್ಕಾರದ ವೈಖರಿ ಟೀಕಿಸಿದರು.

2023 ಕ್ಕೆ ಯಾರ ಜೊತೆಗೂ ಮೈತ್ರಿ ಇಲ್ಲ
"2023ರ ವಿಧಾನಸಭಾ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಯಾವ ಪಕ್ಷದೊಂದಿಗೂ ಮೈತ್ರಿ ಇಲ್ಲ .ಕೋವಿಡ್ ವಾತವರಣ ಮುಗಿದ ನಂತರ ಮುಂದಿನ ಒಂದು ವರ್ಷ ಪಕ್ಷ ಸಂಘಟನೆ ಮಾಡುತ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಜೆಡಿಎಸ್ ಮುಗಿದೇ ಹೋಯ್ತು ಅನ್ನುವವರಿಗೆ ಜನ ಉತ್ತರ ಕೊಡುತ್ತಾರೆ" ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications