ರಾಮನಗರದ ಮಹತ್ವದ ನೀರಾವರಿ ಯೋಜನೆಗೆ ವರ್ಷದ ಟಾರ್ಗೆಟ್ ನೀಡಿದ ಡಿಸಿಎಂ
ರಾಮನಗರ, ಜೂನ್ 06: ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಯಾದ ಶ್ರೀರಂಗ ಏತ ನೀರಾವರಿ ಯೋಜನೆಯನ್ನು ವರ್ಷದೊಳಗೆ ಪೂರ್ಣಗೊಳಿಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.
Recommended Video
ನಿನ್ನೆ ತಮ್ಮ ಕಚೇರಿಯಲ್ಲಿ ಶ್ರೀರಂಗ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳೊಂದಿಗೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕುಗಳ 277 ಹಳ್ಳಿಗಳಿಗೆ ಕುಡಿಯುವ ನೀರೊದಗಿಸುವ ಶ್ರೀರಂಗ ಏತ ನೀರಾವರಿ ಯೋಜನೆಯ 324.67 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.
ಬೆಂಗಳೂರು-ಮಾಗಡಿ ನಾಲ್ಕು ಪಥದ ರಸ್ತೆ ಕಾಮಗಾರಿಗೆ ಜುಲೈನಲ್ಲಿ ಚಾಲನೆ
ಶ್ರೀರಂಗ ಏತ ನೀರಾವರಿ ಯೋಜನೆ 2014 ರಿಂದಲೂ ಕುಂಟುತ್ತಾ ಸಾಗಿದೆ. ಈ ಯೋಜನೆಯ ಕಾಮಗಾರಿಯನ್ನು ಚುರುಕುಗೊಳಿಸಬೇಕು. ಅದಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನಪಡಿಸಿಕೊಂಡು ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ಸುಮಾರು 324.67 ಕೋಟಿ ರೂ. ವೆಚ್ಚದ ಈ ಯೋಜನೆ ಇದುವರೆಗೆ 163.38 ಕೋಟಿ ರೂ. ವೆಚ್ಚದ ಕಾಮಗಾರಿ ಮಾತ್ರ ನಡೆದಿದೆ. ಇರುವ ತೊಡಕುಗಳನ್ನು ತಕ್ಷಣ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶ್ರೀರಂಗ ಯೋಜನೆ ತ್ವರಿತವಾಗಿ ಅನುಷ್ಠಾನವಾದರೆ ಮಾಗಡಿ ತಾಲೂಕಿನ 211 ಹಳ್ಳಿಗಳು ಮತ್ತು ಕುಣಿಗಲ್ ತಾಲೂಕಿನ 66 ಹಳ್ಳಿಗಳು ಹಾಗೂ ಎರಡು ತಾಲ್ಲೂಕಿನ ಸುಮಾರು 83 ಕೆರೆಗಳಿಗೆ ನೀರು ತುಂಬಿಸುವ ಹೇಮಾವತಿ ನದಿಯಿಂದ ಏತ ನೀರಾವರಿ ಮೂಲಕ ಹರಿಸುವ 277.5 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ.
"ಭೂಸ್ವಾಧೀನ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗುವುದನ್ನು ತಪ್ಪಿಸಲು 277 ಕಿ.ಮೀ. ಉದ್ದದ ರಸ್ತೆ ಬದಿ ಗ್ರ್ಯಾವಿಟಿ ಮೈನ್ ಪೈಪ್ ಅಳವಡಿಸಲು ನಿರ್ಧರಿಸಿದ್ದರಿಂದ ಯೋಜನೆಗೆ 53.42 ಕೋಟಿ ರೂ. ಹೆಚ್ಚುವರಿ ಅನುದಾನ ಬೇಕಾಗಿದ್ದು, ಯೋಜನಾ ವೆಚ್ಚ 324.67 ಕೋಟಿ ರೂ.ಗೆ ಏರಿಕೆಯಾಗಿದೆ. ಈಗಾಗಲೇ ಪರಿಷ್ಕೃತ ಅಂದಾಜು ಸಿದ್ಧವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು" ಎಂದು ತಿಳಿಸಿದರು.