ಖಾಸಗಿ ಆಸ್ಪತ್ರೆಗಳು ಸೇವೆ ನೀಡದಿದ್ದರೆ ಶಿಸ್ತು ಕ್ರಮ: ರಾಮನಗರ ಡಿಸಿ
ರಾಮನಗರ, ಏಪ್ರಿಲ್ 03: ರಾಮನಗರ ಜಿಲ್ಲೆಯಲ್ಲಿರುವ ಖಾಸಗಿ ಅಸ್ಪತ್ರೆಗಳು ಮತ್ತು ಕ್ಲಿನಿಕ್ ಗಳು ಎಂದಿನಂತೆ ಸಾರ್ವಜನಿಕರಿಗೆ ಸೇವೆ ನೀಡಬೇಕು, ಇಲ್ಲವಾದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ವೈರಸ್ ಸೋಂಕು (ಕೋವಿಡ್-19) ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶದಾದ್ಯಂತ ಲಾಕ್ಡೌನ್ ಜಾರಿಯಾಗಿದ್ದರೂ, ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳು ಸೇರಿದಂತೆ ಅವಶ್ಯಕ ಸೇವೆಗಳನ್ನು ಹೊರಗಿಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಸಾರ್ವಜನಿಕರಿಗೆ ಸೇವೆ ನೀಡುವಂತೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಸಾಮಾನ್ಯ ಕಾಯಿಲೆಗಳಿಗೆ ಚಿಕಿತ್ಸೆ ಬಯಸಿ ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಜಿಲ್ಲಾಧಿಕಾರಿಗಳು ಮನಗಂಡಿದ್ದರು.

ಇಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಖಾಸಗಿ ಆಸ್ಪತ್ರೆಗಳು ಇಲ್ಲವೆ ಕ್ಲಿನಿಕ್ಗಳು ಸೇವೆಯನ್ನು ನೀಡದಿದ್ದಲ್ಲಿ ನಿಯಮಾನುಸಾರ ಅವರುಗಳ ಮೇಲೆ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.












Click it and Unblock the Notifications