ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್: ಇಂದು ರಾಮನಗರ ಬಂದ್
ರಾಮನಗರ, ಸೆಪ್ಟೆಂಬರ್ 08: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ವಿರೋಧಿಸಿ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿರುವ ರಾಮನಗರ ಬಂದ್ಗೆ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಸ್ವಯಂಪ್ರೇರಿತರಾಗಿ ವ್ಯಾಪಾರಿಗಳು ರಾಮನಗರ ಬಂದ್ಗೆ ಬೆಂಬಲ ಸೂಚಿಸಿದ್ದು, ರಾಮನಗರ ನಗರ ಭಾಗದಲ್ಲಿ ಎಲ್ಲಾ ಅಂಗಡಿಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ಸದಾ ಜನಜಂಗುಳಿಯಿಂದ ತುಂಬಿದ್ದ ಎಪಿಎಂಸಿ ಮಾರುಕಟ್ಟೆ ಇಂದು ಖಾಲಿ..ಖಾಲಿಯಾಗಿದೆ. ಮೆಡಿಕಲ್ ಕಾಲೇಜು ಹೋರಾಟ ಸಮಿತಿಗೆ ಎಪಿಎಂಸಿ ವರ್ತಕರು, ವ್ಯಾಪಾರಿ, ರೈತರು ಬೆಂಬಲ ಸೂಚಿಸಿದ್ದು, ಮಾರುಕಟ್ಟೆ ಗೇಟ್ ಬಳಿ ಬ್ಯಾನರ್ ಅಳವಡಿಸಿ ತಮ್ಮ ಬೆಂಬಲ ಸೂಚಿಸಿದ್ದಾರೆ.

ಮೆಡಿಕಲ್ ಕಾಲೇಜು ಹೋರಾಟ ಸಮಿತಿಯೊಂದಿಗೆ ಹಲವಾರು ಸಂಘಟನೆಗಳ ಸದಸ್ಯರು ಇಂದು ಮುಂಜಾನೆ 6 ಗಂಟೆಯಿಂದಲೇ ನಗರದ ಪ್ರಮುಖ ವೃತ್ತವಾದ ಐಜೂರು ವೃತ್ತದ ಹೆದ್ದಾರಿ ಮಧ್ಯೆ ಕುಳಿತು ಪ್ರತಿಭಟನೆ ಆರಂಭಿಸಿದ್ದು, ಕನಕಪುರಕ್ಕೆ ಸ್ಥಳಾಂತರ ಮಾಡುತ್ತಿರುವ ಮೆಡಿಕಲ್ ಕಾಲೇಜು ರಾಮನಗರದಲ್ಲೇ ಇರಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಪ್ರತಿಭಟನಾಕಾರರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಗೂ ಸಂಸದ ಡಿ.ಕೆ. ಸುರೇಶ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಹೋರಾಟಗಾರರಿಂದ ರಸ್ತೆ ತಡೆಗೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.

ಇನ್ನು ಬೆಂಗಳೂರು-ಹಳೇ ಮೈಸೂರು ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳ ಪರದಾಡುವಂತಾಗಿದೆ. ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಹೋರಾಟಗಾರರ ಸಮಿತಿಗೆ ಜೆಡಿಎಸ್, ಬಿಜೆಪಿ, ವಿವಿಧ ಕನ್ನಡ ಪರ ಸಂಘಟನೆಗಳು, ರೈತಪರ ಸಂಘಟನೆಗಳು ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದ್ದಾರೆ.












Click it and Unblock the Notifications