ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟಿಸಿದ ಟೊಯೊಟಾ ಕಾರ್ಮಿಕರು
ರಾಮನಗರ, ಜನವರಿ 5: ಬಿಡದಿ ಕೈಗಾರಿಕಾ ವಲಯದಲ್ಲಿರುವ ಏಷ್ಯಾದ ಅತಿ ದೊಡ್ಡ ಕಾರು ತಯಾರಿಕಾ ಕಾರ್ಖಾನೆ ಟೊಯೊಟಾ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವಿ ಬಿಕ್ಕಟ್ಟು 57ನೇ ದಿನಕ್ಕೆ ಕಾಲಿಟ್ಟಿದೆ.
ಟೊಯೊಟಾ ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಸರ್ಕಾರ ಕಾರ್ಮಿಕರ ಹೋರಾಟಕ್ಕೆ ಮನ್ನಣೆ ನೀಡದೆ, ಕಣ್ಣುಮುಚ್ಚಿ ಕುಳಿತಿರುವುದನ್ನು ಖಂಡಿಸಿ ಕಾರ್ಮಿಕರು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.
ಟೊಯೊಟಾ ಕಾರ್ಖಾನೆಯ ಆಡಳಿತ ಮಂಡಳಿ ಕಾರ್ಮಿಕ ವಿರೋಧಿ ನಡೆಯನ್ನು ಖಂಡಿಸಿ ಕಳೆದ 57 ದಿನಗಳಿಂದ ಪ್ರತಿದಿನ ಒಂದಲ್ಲ ಒಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ಮೂಲಕ ಸರ್ಕಾರದ ಗಮನ ಸೆಳೆಯಲು ನಿರಂತರ ಪ್ರತಿಭಟನೆ ನಡೆಸುತ್ತಿದ್ದು, ಶೀಘ್ರವಾಗಿ ಸಮಸ್ಯೆ ಬಗೆಹರಿಸದಿದ್ದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೂಡ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಮುಖಂಡರು ತಿಳಿಸಿದರು.

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕಂಡೂ ಕಾಣದಂತೆ ವರ್ತಿಸುತ್ತಿರುವ ಧೋರಣೆಯನ್ನು ಖಂಡಿಸಿ, ಸರ್ಕಾರದ ಜಾಣ ಕುರುಡುತನವನ್ನು ಖಂಡಿಸಿ ಕಾರ್ಮಿಕರು ಕಣ್ಣಿಗೆ ಕಪ್ಪುಬಟ್ಟೆ ಕಟ್ಟಿಕೊಂಡು ಒಂದು ಗಂಟೆಗೂ ಹೆಚ್ಚು ಕಾಲ ತಮ್ಮ ಆಕ್ರೋಶ ಹೊರಹಾಕಿದರು.

ಸೋಮವಾರವಷ್ಟೇ ಟೊಯೊಟಾ ಕಾರ್ಮಿಕರ ಹೋರಾಟ ಬೆಂಬಲಿಸಿ ತಮಿಳುನಾಡಿನಲ್ಲೂ ಕೂಡ CITU ಸಹಯೋಗದೊಂದಿದೆ ಹತ್ತಾರು ಕಂಪನಿ ಕಾರ್ಮಿಕರು ಒಟ್ಟಾಗಿ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ನಮ್ಮ ಪ್ರತಿಭಟನೆಗೆ ನೈತಿಕ ಶಕ್ತಿ ತುಂಬಿದ್ದಾರೆ ಎಂದು ಕಾರ್ಮಿಕರು ಮುಖಂಡರು ಸಂತಸ ವ್ಯಕ್ತಪಡಿಸಿದರು.












Click it and Unblock the Notifications