ಬೆಂಗಳೂರು-ಮೈಸೂರು ರಸ್ತೆ ಮಾಡಿದ್ದು ನಾವು ಎನ್ನುವವರೇ ಸಾವುಗಳಿಗೂ ಹೊಣೆ-ಸಚಿವ ರಾಮಲಿಂಗಾರೆಡ್ಡಿ
ರಾಮನಗರ, ಜೂನ್ 26: ಅವೈಜ್ಞಾನಿಕ ಹೆದ್ದಾರಿ ನಿರ್ಮಾಣದಿಂದ ನೂರಾರು ಅಪಘಾತ ನಡೆದು, ಹಲವು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇ ಮರಣದ ಹೆದ್ದಾರಿಯಾಗಿದೆ ಎಂದು ಸಾರಿಗೆ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಮಲಿಂಗಾರೆಡ್ಡಿ ನೇಮಕಗೊಂಡ ನಂತರ ಮೂದಲ ಬಾರಿಗೆ ಅಧಿಕಾರಿಗಳೊಂದಿಗೆ ತ್ರೈಮಾಸಿಕ ಕೆಡಿಪಿ ಸಭೆಯ ನಡೆಸಿದ ಸಚಿವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎಕ್ಸ್ಪ್ರೆಸ್ ಹೈವೇ ಸಾವಿನ ರಸ್ತೆಯಾಗಿ ಪರಿವರ್ತನೆಯಾಗಿದೆ. ಹೆದ್ದಾರಿಯಲ್ಲಿ 150ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲಾ ಯಾರು ಕಾರಣ..? ಕೆಲವರು ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೈವೇ ನಾವೇ ಮಾಡಿಸಿದ್ದು , ನಮ್ಮಿಂದಲೇ ಹೆದ್ದಾರಿ ನಿರ್ಮಾಣವಾಗಿದ್ದು ಎಂದು ಬೆನ್ನುತಟ್ಟಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಪರೋಕ್ಷವಾಗಿ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.
ಬೆಂಗಳೂರು ಮೈಸೂರು ದಶಪಥ ಹೆದ್ದಾರಿ ನಿರ್ಮಾಣ ಮಾಡಿ ವಾಹನ ಸಂಚಾರಕ್ಕೆ ಮುಕ್ತ ಮಾಡಿದ್ದರು. ಇನ್ನು ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಗಳು ಆಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಎಲ್ಲವೂ ಸರಿ ಮಾಡಬೇಕು. ಜನರ ಹಣದಿಂದ ರಸ್ತೆ ಮಾಡಿರುವುದು. ಕೆಲವರು ರಸ್ತೆ ಮಾಡಿದ್ದು ನಾವೇ ಅಂತ ಜಂಭ ಕೊಚ್ಚಿಕೊಳ್ಳುತ್ತಾರೆ. ಈ ಸಾವುಗಳಿಗೂ ಅವರೇ ಹೊಣೆ. ಹೆದ್ದಾರಿಯ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬೇಕು ಎಂದು ರಾಮಲಿಂಗಾರೆಡ್ಡಿ ಖಡಕ್ ಸೂಚನೆ ನೀಡಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳಾಗಿ ಅಮಾಯಕರು ಜೀವ ಕಳೆದುಕೊಳ್ಳುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಚೇರಿಯಲ್ಲಿ ಪ್ರತ್ಯೇಕ ಸಭೆ ಮಾಡುತ್ತೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ಬರಬೇಕು. ಅವೈಜ್ಞಾನಿಕ ಹೆದ್ದಾರಿ ಸರಿಪಡಿಸಬೇಕು ಎಂದು ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಎನ್.ಎಚ್.ಐ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.












Click it and Unblock the Notifications