Breaking; ರಾಮನಗರ, ಕಾರಿನ ಮೇಲೆ ಬಿದ್ದ ಮರ, ಇಬ್ಬರು ಸಾವು
ರಾಮನಗರ, ಏಪ್ರಿಲ್ 25; ಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಮುಂಜಾನೆ ರಾಮನಗರದ ಕುಂಭಾಪುರ ಗೇಟ್ ಬಳಿ ಬೆಂಗಳೂರಿನ ಕಡೆ ಹೋಗುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದಿದೆ. ಸುಂದರೇಶ್ (49), ತನ್ಮಯ್ (9) ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶೀಲ, ಗಾನವಿ, ಸಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಳಿಯ ಅಗಸನಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಹೋಗುವಾಗ ಈ ದುರ್ಘಟನೆ ನಡೆದಿದೆ.

ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾರಿನಲ್ಲಿ ಸಿಲುಕಿದ್ದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡಿದರು. ಈ ಅಪಘಾತದಿಂದಾಗಿ ಕೆಲವು ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.

ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications