ಕೊರೊನಾ ಸ್ವ್ಯಾಬ್ ಸಂಗ್ರಹಣೆಗೆ ಬಿ.ಎಸ್ಸಿ ವಿದ್ಯಾರ್ಥಿಗಳ ಬಳಕೆ: ಡಿಸಿಎಂ ಅಶ್ವಥ್ ನಾರಾಯಣ್
ರಾಮನಗರ, ಆಗಸ್ಟ್ 04: ಕೋವಿಡ್-19 ಪರೀಕ್ಷೆಯನ್ನು ತ್ವರಿತವಾಗಿ ನಡೆಸುವ ನಿಟ್ಟಿನಲ್ಲಿ ಸ್ವ್ಯಾಬ್ ಸಂಗ್ರಹಣೆಗೆ ವಿಜ್ಞಾನ ವಿಷಯ ಹಿನ್ನೆಲೆಯುಳ್ಳ ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡಿ ಜಿಲ್ಲೆಯಲ್ಲಿ ನಿಯೋಜಿಸಿಕೊಳ್ಳಿ ಎಂದು ಡಿಸಿಎಂ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
Recommended Video
ಡಿಸಿಎಂ ಸಿ.ಎನ್ ಅಶ್ವಥ್ ನಾರಾಯಣ್ ಅವರು ಬೆಂಗಳೂರಿನ ತಮ್ಮ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್-19 ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ 69 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಪರೀಕ್ಷೆಯ ಸ್ವ್ಯಾಬ್ ಸಂಗ್ರಹಣೆ ಕೇಂದ್ರಗಳನ್ನು ತೆರೆದು ತರಬೇತಿ ನೀಡಲಾಗುವ ವಿದ್ಯಾರ್ಥಿಗಳನ್ನು ನಿಯೋಜಿಸಿಕೊಳ್ಳಿ. ಜಿಲ್ಲೆಯಲ್ಲಿ ಕೋವಿಡ್-19 ಲಕ್ಷಣವುಳ್ಳ ರೋಗಿ ಪರೀಕ್ಷೆಗೆ ಒಳಪಡಬೇಕು ಎಂದರೆ ಯಾವುದೇ ಕಾರಣಕ್ಕೂ ಅವರು ಪರೀಕ್ಷೆ ತಡವಾಗಬಾರದು ಹಾಗೂ ಕೊರೊನಾ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು.

24 ಗಂಟೆಯೊಳಗೆ ವರದಿಗೆ ಕ್ರಮ
ರಾಮನಗರ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಟ್ಟವರಿಗೆ 24 ಗಂಟೆಯೊಳಗೆ ಪರೀಕ್ಷೆಯ ವರದಿ ನೀಡಬೇಕು. ಪರೀಕ್ಷೆಯ ವರದಿ ಬ್ಯಾಕ್ಲಾಗ್ ಆಗದಂತೆ ನೋಡಿಕೊಳ್ಳಿ. ಕೋವಿಡ್-19 ಪರೀಕ್ಷೆಗೆ ರೋಗಿಗಳನ್ನು ಒಳಪಡಿಸುವಾಗ ಸರಿಯಾದ ವಿಳಾಸ ಪಡೆದುಕೊಳ್ಳಿ. ಇಲ್ಲವಾದಲ್ಲಿ ಪಾಸಿಟಿವ್ ಬಂದ ಸಂದರ್ಭದಲ್ಲಿ ಪತ್ತೆ ಹಚ್ಚುವುದು ಕಷ್ಟಕರವಾಗುತ್ತದೆ ಹಾಗೂ ರೋಗ ಕೂಡ ಹರಡುತ್ತದೆ. ಐಎಲ್ಐ ಮತ್ತು ಎಸ್.ಎ.ಆರ್.ಐ ಪ್ರಕರಣಗಳಲ್ಲಿ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಿ ಎಂದರು.

ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡಕ್ಕೆ ಪ್ರಸ್ತಾವನೆ
ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ ಕಟ್ಟಡದ ಅವಶ್ಯಕತೆಯಿದ್ದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಿ. ಮಂಡ್ಯ ಜಿಲ್ಲೆಯ ನಂತರ ಬೆಂಗಳೂರಿಗೆ ತಲುಪವವರೆಗೂ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಯಾವುದೇ ಟ್ರಾಮಾ ಸೆಂಟರ್ ಇಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ ಸೇರಿದಂತೆ ಆಸ್ಪತ್ರೆಗೆ ಬೇಕಿರುವ ಸಿಬ್ಬಂದಿ, ಸಲಕರಣೆಗಳ ವಿವರದ ಮಾಹಿತಿಯನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕೆರೆ ಒತ್ತುವರಿ ತೆರವುಗೊಳಿಸಿ
ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ಸರ್ವೇ ನಡೆಸಿ ಒತ್ತುವರಿಯನ್ನು ಶೀಘ್ರವಾಗಿ ತೆರವುಗೊಳಿಸಬೇಕು. ಗ್ರಾಮಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರು ತಮ್ಮ ವ್ಯಾಪ್ತಿಗೆ ಬರುವ ಕೆರೆಗಳ ಬಗ್ಗೆ ನಿಗಾವಹಿಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು. ಒತ್ತುವರಿ ಪ್ರಕರಣಗಳಿದ್ದಲ್ಲಿ ನೋಟಿಸ್ ನೀಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಸಿಎಸ್ಆರ್ ಅನುದಾನ
ರಾಮನಗರ ಜಿಲ್ಲೆಯಲ್ಲಿ ಬಿಡದಿ ಮತ್ತು ಆರೋಹಳ್ಳಿ ಕೈಗಾರಿಕಾ ವಲಯದಲ್ಲಿ ಬಹಳಷ್ಟು ಕೈಗಾರಿಕೆಗಳು ತಮ್ಮ ಸಿಎಸ್ಆರ್ ಅನುದಾನವನ್ನು ಬೇರೆ ಜಿಲ್ಲೆಗಳಿಗೆ ನೀಡಿ ಅಭಿವೃದ್ಧಿ ಕೆಲಸ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಸರಿಯಾದ ರೀತಿಯಲ್ಲಿ ಯೋಜನೆ ರೂಪಿಸಿ ಕೈಗಾರಿಕೆಗಳ ಸಿಎಸ್ಆರ್ ಅನುದಾನವನ್ನು ಪಡೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications