ನೆರೆ ಪರಿಹಾರಕ್ಕೆ ಆಗ್ರಹಿಸಿ ರಾಮನಗರ ಹೆದ್ದಾರಿ ತಡೆದು ವಾಟಾಳ್ ಪ್ರತಿಭಟನೆ
ರಾಮನಗರ, ಆಗಸ್ಟ್ 28: ನೆರೆ ಹಾವಳಿಗೆ ತತ್ತರಿಸಿರುವ ಜನರ ನೋವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರಾಮನಗರದ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. "ರಾಜ್ಯದಲ್ಲಿ ನೆರೆ ಬಂದು ಹಲವರು ಸಾವನ್ನಪ್ಪಿದ್ದಾರೆ. ಆದರೂ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿಲ್ಲ. ರಾಜ್ಯ ಸರ್ಕಾರ ನೆರೆಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಟ್ಟಿಲ್ಲ. ಮೂವರು ಉಪ ಮುಖ್ಯಮಂತ್ರಿಗಳನ್ನು ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ" ಎಂದು ಸರ್ಕಾರದ ನಡೆಯನ್ನು ಟೀಕಿಸಿದರು.
ತಕ್ಷಣವೇ ಪ್ರಧಾನಿ ಮೋದಿಯವರು ನೆರೆ ಹಾವಳಿ ಪ್ರದೇಶಕ್ಕೆ ಭೇಟಿ ನೀಡಬೇಕು ಮತ್ತು ವಿಪತ್ತು ನಿರ್ವಣೆಗೆ 50 ಸಾವಿರ ಕೋಟಿ ನೆರವು ಘೋಷಿಸಿಬೇಕು ಎಂದು ಆಗ್ರಹಿಸಿದರು.

"ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷ್ಯ ಎಂಬಂತೆ ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚುವ ಹುನ್ನಾರ ಮಾಡಿದ್ದಾರೆ" ಎಂದು ಆರೋಪಿಸಿದ ವಾಟಳ್ ನಾಗರಾಜ್, ಸಿಎಂ ತಮ್ಮ ದ್ವೇಷ ಬಿಟ್ಟು ಇಂದಿರಾ ಕ್ಯಾಂಟೀನ್ ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು. ಒಂದು ವೇಳೆ ಕ್ಯಾಂಟೀನ್ ಮುಚ್ಚಿದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.












Click it and Unblock the Notifications