ವೈದ್ಯರ ನೇಮಕಕ್ಕೆ ಆಗ್ರಹಿಸಿ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು
ರಾಮನಗರ, ಆಗಸ್ಟ್ 20: ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆದಿದೆ. ಆದರೆ ರಾಮನಗರ ತಾಲೂಕಿನ ಅಕ್ಕೂರು ಗ್ರಾಮದಲ್ಲಿರುವ ಆರೋಗ್ಯ ಕೇಂದ್ರ ವೈದ್ಯರು ಹಾಗೂ ಸಿಬ್ಬಂದಿಗಳೇ ಇಲ್ಲದೇ ಹಾಳು ಕೊಂಪೆಯಾಗಿದೆ ಎಂದು ಗ್ರಾಮಸ್ಥರು ಆರೋಗ್ಯ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಈ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿ ಎರಡು ವರ್ಷಗಳು ಕಳೆದಿವೆ. ಆದರೆ ಇನ್ನೂ ಸೂಕ್ತ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಇಲ್ಲಿಗೆ ವೈದ್ಯರು ಯಾರೂ ಬರುತ್ತಿಲ್ಲ, ಸಿಬ್ಬಂದಿ ಕಾಟಾಚಾರಕ್ಕೆ ಬಂದು ಹೋಗುತ್ತಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಕೊಡಗಿನಲ್ಲಿ ತುರ್ತು ಆಸ್ಪತ್ರೆಗೆ ಸಂಸದ ಪ್ರತಾಪ್ ಸಿಂಹ ಮನವಿ
ಎರಡು ವರ್ಷಗಳಿಂದ ಡಾ.ರಾಜೇಂದ್ರ ಎನ್ನುವವರು ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ಆದರೆ ಅವರು ಕೆಲಸ ಮಾಡಿರುವುದು ಕೆಲವೇ ತಿಂಗಳು ಮಾತ್ರ. ಇದರ ಬಗ್ಗೆ ಉನ್ನತ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ದೂರು ನೀಡಿರುವ ವಿಚಾರ ತಿಳಿಯುತ್ತಿದ್ದಂತೆ ರಾಜೇಂದ್ರ ಅವರು ಬೇರೆಡೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ವರ್ಗಾವಣೆ ಆಗಿ ಒಂದು ವಾರ ಕಳೆದಿದ್ದರೂ ಆಸ್ಪತ್ರೆಗೆ ವೈದ್ಯರನ್ನು ಇದುವರೆಗೂ ನೇಮಕ ಮಾಡಿಲ್ಲ.
ಸುತ್ತಮುತ್ತಲಿನ ನಾಲ್ಕೈದು ಗ್ರಾಮಗಳ ಜನರಿಗೆ ಪ್ರಯೋಜನವಾಗಲಿ ಎಂದು ಈ ಆರೋಗ್ಯ ಕೇಂದ್ರವನ್ನು ತೆರೆಯಲಾಗಿತ್ತು. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಈ ಆರೋಗ್ಯ ಕೇಂದ್ರ ಇದ್ದರೂ ಇಲ್ಲದಂತಾಗಿದೆ. ರೋಗಿಗಳಿಗೆ ನೀಡುವ ಮಾತ್ರೆಗಳು ಕೂಡ ಅವಧಿ ಮುಗಿದು ಹೋಗಿದ್ದು, ಅಂತಹ ಮಾತ್ರೆಗಳನ್ನು ಇನ್ನೂ ಇಟ್ಟುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮಿಂಟೋ ಆಸ್ಪತ್ರೆ ವೈದ್ಯರ ಎಡವಟ್ಟು: ದೃಷ್ಟಿ ಕಳೆದುಕೊಂಡ 13 ಮಂದಿ
ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ತಾಲೂಕು ವೈದ್ಯಾಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಅಂತಿಮವಾಗಿ ತಾಲೂಕು ವೈದ್ಯಾಧಿಕಾರಿಗಳ ಭರವಸೆ ಮೇರೆಗೆ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.