ಕಾಂಗ್ರೆಸ್ ನಮ್ಮ ಸಮುದಾಯಕ್ಕೆ ವಂಚನೆ ಮಾಡಿದೆ-ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಬಿ.ಉಮೇಶ್
ರಾಮನಗರ, ಏಪ್ರಿಲ್ 17: ರಾಜ್ಯದಲ್ಲಿ ಸುಮಾರು 30 ಲಕ್ಷ ಜನ ಸಂಖ್ಯೆ ಇರುವ ವಿಶ್ವಕರ್ಮ ಸಮುದಾಯಕ್ಕೆ ಕೇವಲ ಒಂದು ಕ್ಷೇತ್ರದಲ್ಲಿ ಟಿಕೆಟ್ ನೀಡದೆ ಕಾಂಗ್ರೆಸ್ ಪಕ್ಷ ವಂಚನೆ ಮಾಡಿದೆ ಎಂದು ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಬಿ.ಉಮೇಶ್ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡಿದರು.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದ ಮುಖಂಡ ರಘು ಆಚಾರ್ ಅವರಿಗೆ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ನೀಡುವುದಾಗಿ ನಂಬಿಸಿ ಅಂತಿಮ ಕ್ಷಣದಲ್ಲಿ ಹಿಂದುಳಿದ ವರ್ಗದ ನಾಯಕರು ಎಂದು ಬಿಂಬಿಸಿಕೊಂಡಿರುವ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಹಾಗೂ ಡಿ.ಕೆ.ಶಿವಕುಮಾರ್ ಅವರು ಟಿಕೆಟ್ ನೀಡದೇ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದರು.

ರಾಜ್ಯದ 224 ಕ್ಷೇತ್ರಗಳಲ್ಲಿ ವಿಶ್ವಕರ್ಮ ಸಮುದಾಯದ ಜನರು ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಪಕ್ಷದಲ್ಲಿ ಬೇಡಿಕೆ ಇಟ್ಟಿದ್ದೆವು ರಘು ಆಚಾರ್ ಕಾಂಗ್ರೆಸ್ ಪಕ್ಷದಲ್ಲಿ ಹಲವು ವರ್ಷ ದುಡಿಮೆ ಮಾಡಿದ್ದರು, ವಿಶ್ವಕರ್ಮ ಜನಾಂಗದ ರಘು ಆಚಾರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ವಿಫಲವಾದ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರುಗಳ ಹಿಂದುಳಿದ ವರ್ಗದ ಬಗ್ಗೆ ಕಾಳಜಿ ಎಲ್ಲೋಯ್ತು ಎಂದು ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷ ಬಿ.ಉಮೇಶ್ ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಪಕ್ಷ ಸಂಘಟನೆಗೆ ತನ್ನದೇ ಆದ ಕೊಡುಗೆ ನೀಡಿದ್ದರು ಟಿಕೆಟ್ ನೀಡದ ಕಾಂಗ್ರೆಸ್ ನಾಯಕರ ವರ್ತನೆಯಿಂದ ಬೇಸತ್ತ ರಘು ಆಚಾರ್ ಅವರು ಕಾಂಗ್ರೆಸ್ ಪಕ್ಷ ತೊರೆದು ನಾಳೆ ಬೆಂಗಳೂರಿನ ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತರೆ ಎಂದು ಹೇಳಿದರು.

ಇಡೀ ರಾಜ್ಯದಲ್ಲಿ ಯಾವ ಪಕ್ಷವು ಇದುವರೆಗೆ ವಿಶ್ವಕರ್ಮ ಸಮುದಾಯಕ್ಕೆ ಟಿಕಟ್ ನೀಡಿರಲಿಲ್ಲ ಅದರೆ ಈ ಬಾರಿ ಜೆಡಿಎಸ್ ಸೇರ್ಪಡೆ ಯಾಗುತ್ತಿರುವ ರಘು ಆಚಾರ್ ಅವರಿಗೆ ಜೆಡಿಎಸ್ ವರಿಷ್ಠರು ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದಾರೆ. ನಾಳೆ ಜೆಡಿಎಸ್ ಪಕ್ಷ ಸೇರ್ಪಡೆಯಾದ ಬಳಿಕ ರಘು ಆಚಾರ್ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಉಮೇಶ್ ತಿಳಿಸಿದರು.
ರಾಷ್ಟ್ರೀಯ ಪಕ್ಷ ವಿಶ್ವಕರ್ಮ ಜನಾಂಗಕ್ಕೆ ಟಿಕೆಟ್ ನೀಡದೆ ವಂಚನೆ ಮಾಡಿದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಮ್ಮ ಜನಾಂಗದ ಮುಖಂಡ ರಘು ಆಚಾರ್ ಅವರನ್ನ ಜೆಡಿಎಸ್ ಪಕ್ಷಕ್ಕೆ ಸ್ವಾಗತಿಸಿ ಟಿಕೆಟ್ ಕೂಡ ಘೋಷಣೆ ಮಾಡಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಟಿಕೆಟ್ ನೀಡುತ್ತಿದ್ದಾರೆ ಹಾಗಾಗಿ ಇಡೀ ವಿಶ್ವಕರ್ಮ ಸಮುದಾಯದ ಪರವಾಗಿ ಬಿ.ಉಮೇಶ್, ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಿದರು.
ಹಿಂದುಳಿದ ವರ್ಗಗಳಿಗೆ ಹಿಂದೆ ರಾಜಕೀಯ ಸ್ಥಾನಮಾನ ನೀಡುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮೀಸಲಾತಿ ನೀಡಿದರು. ಇದೀಗ ವಿಶ್ವಕರ್ಮ ಸಮುದಾಯಕ್ಕೆ ರಾಜ್ಯದಲ್ಲಿ ಒಂದು ಟಿಕೆಟ್ ದೊರೆಯದಿದ್ದ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ರಘು ಆಚಾರ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ನಮ್ಮ ಜನಾಂಗದ ಮೇಲೆ ಜೆಡಿಎಸ್ ಪಕ್ಷಕ್ಕೆ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯದ ವಿಶ್ವಕರ್ಮ ಸಮುದಾಯ ಬೆಂಬಲಿಸಬೇಕು ಎಂದು ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಉಮೇಶ್ ಮನವಿ ಮಾಡಿದರು.












Click it and Unblock the Notifications