ಸಿಎಂ ಹುದ್ದೆಗೆ ಅಡ್ಡಿಯಾದ ನಾಯಕರ ಸೋಲಿಗೆ ಕಾರಣ ಯಾರು?; ಡಿಕೆಶಿಗೆ ಖಡಕ್ ಪ್ರಶ್ನೆ ಹಾಕಿದ ಎಚ್ಡಿಕೆ
ರಾಮನಗರ, ಅಕ್ಟೋಬರ್ 4: "ಜೆಡಿಎಸ್ ಕೇವಲ ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ ಮಾತ್ರ ಆದ್ಯತೆ ನೀಡುತ್ತದೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯ ತೋಟದಲ್ಲಿ ನಡೆದಿರುವ ಜನತಾ ಪರ್ವ 1.0 ಹಾಗೂ ಮಿಷನ್- 123ರ ಆರನೇ ದಿನದ ಕಾರ್ಯಾಗಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಎಚ್ಡಿಕೆ, ಕೆಪಿಸಿಸಿ ಅಧ್ಯಕ್ಷರಿಗೆ ಟಾಂಗ್ ನೀಡಿದರು.
ಡಿ.ಕೆ. ಶಿವಕುಮಾರ್ಗೆ ನೇರವಾಗಿ ಕೆಲ ಪ್ರಶ್ನೆಗಳನ್ನು ಕೇಳಿದ ಮಾಜಿ ಸಿಎಂ ಎಚ್ಡಿಕೆ, "ನೀವು ಎಷ್ಟು ಸಮುದಾಯಗಳಿಗೆ ಗೌರವ ಕೊಟ್ಟಿದ್ದೀರಿ? ನಿಮ್ಮ ಪಕ್ಷದ ದಲಿತ ಸಮಾಜದ ನಾಯಕರನ್ನು ಚುನಾವಣೆಯಲ್ಲಿ ಸೋಲಿಸಿದವರು ಯಾರು? ಪಟ್ಟಿ ದೊಡ್ಡದಾಗಿದೆ, ಒಮ್ಮೆ ನೋಡಿಕೊಳ್ಳಿ," ಎಂದು ಹೇಳಿದರು.

"ಮುಖ್ಯಮಂತ್ರಿ ಸ್ಥಾನಕ್ಕೆ ಅಡ್ಡಿ ಬರುತ್ತಾರೆಂದು ಜಿ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಸೋಲಿಗೆ ಕಾರಣ ಯಾರು? ಧರ್ಮಸಿಂಗ್ ಸೋಲಿಗೆ ಕಾರಣ ಯಾರು? ಕೋಲಾರದಲ್ಲಿ ಕೆ.ಎಚ್. ಮುನಿಯಪ್ಪರನ್ನು ಸೋಲಿಸಿದವರು ಯಾರು? ಬಿಜೆಪಿಗೆ ಶಕ್ತಿಯೇ ಇಲ್ಲದ ಹಾಗೂ ಕಾರ್ಪೊರೇಟರ್ ಕೂಡ ಆಗಲು ಆಗದಂತಹ ವ್ಯಕ್ತಿಯನ್ನು ಕರೆತಂದು ಕೋಲಾರದಲ್ಲಿ ನಿಲ್ಲಿಸಿ ಪ್ರತ್ಯಕ್ಷವಾಗಿ, ಬೆಂಬಲ ನೀಡಿದವರು ಯಾರು? ರಮೇಶ್ ಕುಮಾರ್ ಯಾರ ಪರ ಕೆಲಸ ಮಾಡಿದರು. ಅಲ್ಲಿನ ಬಿಜೆಪಿ ಸಂಸದರ ಆಯ್ಕೆ ಹಿಂದೆ ಯಾರಿದ್ದಾರೆ?," ಎಂದು ಕುಮಾರಸ್ವಾಮಿ ಡಿಕೆಶಿಗೆ ಪ್ರಶ್ನೆ ಮಾಡಿದರು.
"ಕಾಂಗ್ರೆಸ್ ಪಕ್ಷದ ದಲಿತ ನಾಯಕರ ಸೋಲಿಗೆ ಅವರೇ ಕಾರಣವಲ್ಲವೇ? ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ," ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಅ.16ರಿಂದ ಜೆಡಿಎಸ್ ಜನತಾ ಸಂಗಮ
"ಜೆಡಿಎಸ್ ಪಕ್ಷದ ಜನತಾ ಪರ್ವ 1.0 ಕಾರ್ಯಾಗಾರದ ಎರಡನೇ ಹಂತವಾಗಿ ಜನತಾ ಸಂಗಮ ಅಕ್ಟೋಬರ್ 16ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
"ಬಿಡದಿ ತೋಟದಲ್ಲಿ ನಡೆಯುತ್ತಿರುವ ಕಾರ್ಯಗಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಪ್ರತಿ ತಾಲೂಕಿನಲ್ಲಿ ಎಲ್ಲರ ಜೊತೆಗೂಡಿ ನಡೆಯುವ ಕಾರ್ಯಕ್ರಮ. ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗುವ ಹಾಗೂ ತಳಹದಿಯಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶ ಇದಕ್ಕಿದೆ," ಎಂದರು.

"ಜನತಾ ಸಂಗಮದ ಮೂಲಕ ಪ್ರತಿ ಹಳ್ಳಿಗಳಿಗೆ ಭೇಟಿ ನೀಡುವ ತೀರ್ಮಾನ ಮಾಡಲಾಗಿದೆ. ಜೊತೆಗೆ, ಕಾರ್ಯಾಗಾರಕ್ಕೆ ಹಾಜರಾಗಿರುವ ಪ್ರತಿಯೊಬ್ಬರ ಮಾಹಿತಿಯನ್ನೂ ಕಚೇರಿಗೆ ತೆಗೆದುಕೊಳ್ಳಲಾಗುತ್ತದೆ. ಪ್ರತಿ ಅಂಶವನ್ನು ನಮ್ಮ ತಂಡಗಳು ಪರಿಶೀಲನೆ ಮಾಡುತ್ತಿವೆ," ಎಂದು ಹೇಳಿದರು.
"ಪಕ್ಷದ ಕಚೇರಿ ಹಾಗೂ ಕಾರ್ಯಕರ್ತರ ನಡುವೆ ಯಾವುದೇ ಸಂವಹನ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಿದ್ದೇವೆ. ಆ ನಿಟ್ಟಿನಲ್ಲಿ ತಂತ್ರಜ್ಞಾನ ಬಳಸಿಕೊಂಡು ಉತ್ತಮ ವ್ಯವಸ್ಥೆ ರೂಪಿಸಲಾಗಿದೆ," ಎಂದು ಮಾಹಿತಿ ನೀಡಿದರು.
ನಾಳೆ ಕ್ರಿಶ್ಚಿಯನ್ ಪ್ರತಿನಿಧಿಗಳ ಕಾರ್ಯಗಾರ
"ಸೋಮವಾರ ಎಸ್ಸಿ, ಎಸ್ಟಿ ವಿಭಾಗದ ಜೆಡಿಎಸ್ ಕಾರ್ಯಗಾರ ನಡೆಯಿತು. ಚಿಂತಕ ಪ್ರೊ. ಮುಕುಂದ ರಾಜು ಮಾತನಾಡಿದರು. ಭಾನುವಾರ ಮುಸ್ಲಿಂ ಬಾಂಧವರ ಜೊತೆ ಕಾರ್ಯಗಾರ ಮಾಡಲಾಗಿತ್ತು. ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಪ್ರಧಾನ ಭಾಷಣ ಮಾಡಿದ್ದರು. ಮಂಗಳವಾರ ಅಂತಿಮವಾಗಿ ಕ್ರಿಶ್ಚಿಯನ್ ಬಾಂಧವರ ಜೊತೆ ಕಾರ್ಯಗಾರ ಇದೆ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.












Click it and Unblock the Notifications