Breaking: ಹಣದ ಜೊತೆ ಸಿಕ್ಕಿಬಿದ್ದ ಕಾಂಗ್ರೆಸ್ ಶಾಸಕರ ಬಂಧನ
ರಾಂಚಿ, ಜುಲೈ 31: ಶನಿವಾರ ಪಶ್ಚಿಮ ಬಂಗಾಳದಲ್ಲಿ ನಗದು ರಾಶಿಯೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರನ್ನು ಬಂಧಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ವಹಿಸಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಮೂವರು ಶಾಸಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾನುವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ. ರಾಜ್ಯ ಸರ್ಕಾರವನ್ನು ಪತನಗೊಳಿಸಲು ಈ ಮೂವರು ನಾಯಕರಿಗೆ ಹಣ ನೀಡಲಾಗಿದೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿಯನ್ನು ದೋಷಿಸಿತ್ತು. ಆದರೆ ಈ ಹಣ ಜಾರ್ಖಂಡ್ ಮುಕ್ತಿ ಮೋರ್ಚಾ-ಕಾಂಗ್ರೆಸ್ ಮೈತ್ರಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳಿದೆ.
ಪ್ರತಿ ಶಾಸಕರಿಗೆ 10 ಕೋಟಿ ನೀಡುವ ಮೂಲಕ ಜಾರ್ಖಂಡ್ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ಬಂಧಿಸಲಾದ ತನ್ನ ಮೂವರು ಶಾಸಕರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಚಿವ ಅಲಂಗೀರ್ ಆಲಂ,' ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ತಲಾ 10 ಕೋಟಿ ಮತ್ತು ಸಚಿವ ಸ್ಥಾನ ನೀಡುತ್ತೇವೆ ಎಂದು ಇತರ ಶಾಸಕರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ಮೂವರು ಶಾಸಕರ ವಿರುದ್ಧ, ಪಕ್ಷದ ಬರ್ಮೊ ಶಾಸಕ ಕುಮಾರ್ ಜಯಮಂಗಲ್ ಪೊಲೀಸ್ ದೂರು ದಾಖಲಿಸಿದ್ದಾರೆ' ಎಂದರು.
ಹಣದೊಂದಿಗೆ ಸಿಕ್ಕಿಬಿದ್ದಿದ್ದ ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, ಖಿಜ್ರಿ ಶಾಸಕ ರಾಜೇಶ್ ಕಚ್ಚಪ್ ಮತ್ತು ಕೊಲೆಬೀರಾ ಶಾಸಕ ನಮನ್ ಬಿಕ್ಸಲ್ ಕೊಂಗರಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಮೂವರನ್ನು ಹೌರಾ ಗ್ರಾಮಾಂತರ ಪೊಲೀಸರು ಹಣದ ಮೂಲದ ಬಗ್ಗೆ ವಿಚಾರಣೆ ನಡೆಸುತ್ತಿದ್ದರು. ಬಳಿಕ ಅವರನ್ನು ಬಂಧಿಸಲಾಗಿದೆ.
ಮೂವರು ಶಾಸಕರು ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಎಲ್ಲಾ ಐದು ಜನರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೌರಾ ಗ್ರಾಮಾಂತರ ಠಾಣೆಯ ಎಸ್ಪಿ ಸ್ವಾತಿ ಭಂಗಾಲಿಯಾ ತಿಳಿಸಿದರು.












Click it and Unblock the Notifications