ರಾಂಚಿ ಗಲಭೆ; ಇಂಟರ್ನೆಟ್ ಸೇವೆ ಆರಂಭ, ಗಲಭೆ ಕುರಿತು ಎಸ್ಐಟಿ ತನಿಖೆ
ರಾಂಚಿ, ಜೂನ್ 12; ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧಿಸಬೇಕು ಎಂದು ಆಗ್ರಹಿಸಿ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ. ಪ್ರತಿಭಟನಾನಿರತರು, ಪೊಲೀಸರ ನಡುವಿನ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ಈ ಗಲಭೆಯಲ್ಲಿ 20 ಜನರು ಗಾಯಗೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದರು. ಮುಂಜಾಗ್ರತಾ ಕ್ರಮವಾಗಿ ಜಾರ್ಖಂಡ್ ಸರ್ಕಾರ ರಾಂಚಿಯಲ್ಲಿ ಶುಕ್ರವಾರ ಮಧ್ಯಾಹ್ನದಿಂದಲೇ ಇಂಟರ್ ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಭಾನುವಾರ ಮುಂಜಾನೆ ಇಂಟರ್ ನೆಟ್ ಸೇವೆ ಪುನಃ ಆರಂಭಿಸಲಾಗಿದೆ.
ರಾಂಚಿಯಲ್ಲಿ ನಡೆದ ಗಲಭೆ ಕುರಿತು ತನಿಖೆ ನಡೆಸಲು ಜಾರ್ಖಂಡ್ ಸರ್ಕಾರ ವಿಶೇಷ ತನಿಖಾ ದಳ (ಎಸ್ಐಟಿ) ರಚನೆ ಮಾಡಿದೆ. ರಾಂಚಿಯಲ್ಲಿ ನಡೆದ ಗಲಭೆ ಕುರಿತು ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಎಸ್ಐಟಿಯೇ ನಡೆಸಲಿದೆ.

ಹೆಚ್ಚುವರಿ ಭದ್ರತೆ ನೀಡಲಾಗಿದೆ
ರಾಂಚಿಯಲ್ಲಿ ಭಾನುವಾರ ಪರಿಸ್ಥಿತಿ ಹತೋಟಿಯಲ್ಲಿದೆ. ಆದರೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಸೇರಿದಂತೆ ವಿಶೇಷ ಪಡೆಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಪೊಲೀಸರು ನಗರದಲ್ಲಿ ಗಸ್ತು ತಿರುಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ. ರಾಂಚಿ ನಗರದಲ್ಲಿ ಶುಕ್ರವಾರದ ಗಲಭೆ ಬಳಿಕ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು ಭಾನುವಾರ ಅದನ್ನು ಪುನಃ ಆರಂಭಿಸಲಾಗಿದೆ.

12 ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಶನಿವಾರ ಮತ್ತು ಭಾನುವಾರ ಬೆಳಗ್ಗೆ ತನಕ ಪರಿಸ್ಥಿತಿ ಹತೋಟಿಯಲ್ಲಿದೆ. ಆದರೂ ಸಹ 12 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಭೆಯಲ್ಲಿ ಇದುವರೆಗೂ ಇಬ್ಬರು ಮುಸ್ಲಿಂ ಸಮುದಾಯದ ಜನರು ಸಾವನ್ನಪ್ಪಿದ್ದಾರೆ. 20 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಭೆ ನಡೆದ ದಿನದ ವಿಡಿಯೋಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಗಲಭೆ ನಡೆಸಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗಲಭೆ ಕುರಿತು ದಾಖಲಾದ ಎಲ್ಲಾ ಪ್ರಕರಣಗಳ ತನಿಖೆಯನ್ನು ಎಸ್ಐಟಿ ನಡೆಸಲಿದೆ.

ಬಿಜೆಪಿ ನಾಯಕರನ್ನು ಬಂಧಿಸಲು ಆಗ್ರಹ
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಇಬ್ಬರು ನಾಯಕರ ವಿರುದ್ಧ ಬಿಜೆಪಿ ಈಗಾಗಲೇ ಕ್ರಮ ಕೈಗೊಂಡಿದೆ. ಆದರೆ ರಾಂಚಿಯಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಮುಖ್ಯ ರಸ್ತೆಯಲ್ಲಿ ಗುಂಪು ಸೇರಿದ ನೂರಾರು ಜನರು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಬಂಧಿಸಬೇಕು ಎಂದು ಆಗ್ರಹಿಸಿದರು. ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಯಿತು, ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಲು ಗಾಳಿಯಲ್ಲಿ ಗುಂಡು ಹಾರಿಸಿದರು.

ಆಸ್ಪತ್ರೆಯಲ್ಲಿ ಇಬ್ಬರು ಸಾವು
ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ 20 ಜನರು ಗಾಯಗೊಂಡಿದ್ದರು. ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
"ಮೊದಲು ಗಲಭೆಯಲ್ಲಿ ಪಾಲ್ಗೊಂಡವರನ್ನು ಗುರುತಿಸುತ್ತೇವೆ. ನಂತರ ಅವರನ್ನು ಬಂಧಿಸುತ್ತೇವೆ. ಶುಕ್ರವಾರ ಸಂಜೆಯಿಂದಲೇ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ನಗರ ಪೊಲೀಸ್ ಆಯಕ್ತ ಅಂಶುಮನ್ ಕುಮಾರ್ ಹೇಳಿದ್ದಾರೆ.











Click it and Unblock the Notifications