ಲೋಕಸಭೆ ಚುನಾವಣೆ : ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅಂತಿಮ?
Recommended Video
ಶಿವಮೊಗ್ಗ, ಅಕ್ಟೋಬರ್ 04 : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ 2019ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರು?. ಸಂಸದ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ದಿನದಿಂದ ಎದ್ದಿರುವ ಪ್ರಶ್ನೆ ಇದು.
ಕರ್ನಾಟಕ ಬಿಜೆಪಿ 2019ರ ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಆದರೆ, ಶಿವಮೊಗ್ಗಕ್ಕೆ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.
ಲೋಕಸಭೆ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಶಿವಮೊಗ್ಗ ಕ್ಷೇತ್ರದ ಮಾಜಿ ಸಂಸದ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಮಾತನಾಡಿರುವ ಅವರು ಟಿಕೆಟ್ಗಾಗಿ ಬೇಡಿಕೆ ಇಟ್ಟಿದ್ದಾರೆ.
ಲೋಕಸಭೆ ಚುನಾವಣೆಗೆ ದೇವೇಗೌಡ ಕುಟುಂಬದಿಂದ ಮೂವರ ಸ್ಪರ್ಧೆ?
ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಮತ್ತು ಜೆಡಿಎಸ್ ಸಹ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಬೇಕಾಗಿದೆ. ಒಂದು ವೇಳೆ ಕಾಂಗ್ರೆಸ್-ಜೆಡಿಎಸ್ ಐತ್ರಿ ಮಾಡಿಕೊಂಡು ಚುನಾವಣೆಗೆ ಎದುರಿಸಿದರೆ ಒಮ್ಮತದ ಅಭ್ಯರ್ಥಿ ಯಾರು? ಎಂಬುದು ಸಹ ಇನ್ನೂ ಅಂತಿಮವಾಗಿಲ್ಲ.
ಖರ್ಗೆ ಸೋಲಿಸಲು ಕಾಂಗ್ರೆಸ್ ಶಾಸಕನನ್ನು ಕಣಕ್ಕಿಳಿಸಲಿದೆ ಬಿಜೆಪಿ?
ಉಪ ಚುನಾವಣೆಯೋ? ಚುನಾವಣೆಯೋ?
ಬಿ.ಎಸ್.ಯಡಿಯೂರಪ್ಪ ಅವರು 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿವಮೊಗ್ಗ ಸಂಸದರಾಗಿದ್ದ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಸದ್ಯ ಕ್ಷೇತ್ರದ ಸಂಸದ ಸ್ಥಾನ ಖಾಲಿ ಇದೆ. ಈಗ ಉಪ ಚುನಾವಣೆ ಎದುರಾಗಲಿದೆಯೋ? ಅಥವ 2019ರ ಚುನಾವಣೆ ಜೊತೆಗೆ ಒಮ್ಮೆಯೇ ಚುನಾವಣೆ ನಡೆಯಲಿದೆಯೋ ಎಂಬುದು ಇನ್ನೂ ತಿಳಿದುಬಂದಿಲ್ಲ.
ಟಿಕೆಟ್ ಕೇಳಿದ ರಾಘವೇಂದ್ರ
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ ಅವರು, 'ಲೋಕಸಭೆ ಉಪ ಚುನಾವಣೆ ಬರುತ್ತದೆಯೋ, ಇಲ್ಲ ಸಾರ್ವತ್ರಿಕ ಚುನಾವಣೆ ಬರುತ್ತದೆಯೋ ಗೊತ್ತಿಲ್ಲ. ಎರಡಕ್ಕೂ ನನಗೆ ಸ್ಪರ್ಧೆ ಮಾಡಲು ಅವಕಾಶವನ್ನು ಮಾಡಿಕೊಡಿ' ಎಂದು ಪಕ್ಷದ ಮುಖಂಡರಲ್ಲಿ ಮನವಿ ಮಾಡಿದ್ದಾರೆ.
ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ
2009ರ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ, 2014ರ ಚುನಾವಣೆಯಲ್ಲಿ ತಂದೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಥಾನ ಬಿಟ್ಟುಕೊಟ್ಟಿದ್ದರು.
'ಸಂಸದನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಕಾರ್ಯಕರ್ತನಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಮತ್ತೊಮ್ಮೆ ಅವಕಾಶ ಮಾಡಿಕೊಡಿ' ಎಂದು ಪಕ್ಷದ ನಾಯಕರಲ್ಲಿ ಅವರು ಮನವಿ ಮಾಡಿದ್ದಾರೆ.
ಟಿಕೆಟ್ಗೆ ಹಲವು ಆಕಾಂಕ್ಷಿಗಳು
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಸ್.ದತ್ತಾತ್ರಿ, ಡಿ.ಎಚ್.ಶಂಕರಮೂರ್ತಿ ಪುತ್ರ ಡಿ.ಎಸ್.ಅರುಣ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವರ ಹೆಸರು ಕೇಳಿಬರುತ್ತಿದೆ. ಆದರೆ, ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ.
ವರಿಷ್ಠರು ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ : ಈಶ್ವರಪ್ಪ
ಕುಟುಂಬ ರಾಜಕಾರಣದ ಆರೋಪ
ಬಿಜೆಪಿ ಜೆಡಿಎಸ್ ಪಕ್ಷವನ್ನು ಅಪ್ಪ ಮಕ್ಕಳ ಪಕ್ಷ ಎಂದು ಹೇಳುತ್ತದೆ. ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದರೆ ಯಡಿಯೂರಪ್ಪ ಅವರು ಅದೇ ಆರೋಪ ಎದುರಿಸಬೇಕಾಗುತ್ತದೆ.
2009ರ ಲೋಕಸಭೆ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಗೆದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಯಡಿಯೂರಪ್ಪಗೆ ಕ್ಷೇತ್ರ ಬಿಟ್ಟುಕೊಟ್ಟರು. ಯಡಿಯೂರಪ್ಪ ಲೋಕಸಭೆಗೆ ಸ್ಪರ್ಧೆ ಮಾಡಿದ್ದರಿಂದ ಶಿಕಾರಿಪುರಕ್ಕೆ ಉಪ ಚುನಾವಣೆ ನಡೆಯಿತು. ಆಗ ಕ್ಷೇತ್ರದಲ್ಲಿ ರಾಘವೇಂದ್ರ ನಿಂತು ಗೆದ್ದರು. 2018ರ ಚುನಾವಣೆಯಲ್ಲಿ ಶಿಕಾರಿಪುರವನ್ನು ಅಪ್ಪನಿಗೆ ಬಿಟ್ಟುಕೊಟ್ಟಿದ್ದಾರೆ.