ಶಿವಮೊಗ್ಗ : ಬಿಜೆಪಿ, ಕಾಂಗ್ರೆಸ್ಗೆ ಬಂಡಾಯದ ಬಿಸಿ!
ಶಿವಮೊಗ್ಗ, ಏಪ್ರಿಲ್ 25 : ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಬಂಡಾಯದ ಬಿಸಿ ತಟ್ಟಿದೆ. ಶಿವಮೊಗ್ಗ ಗ್ರಾಮಾಂತರದಲ್ಲಿ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಯಗಳು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಇದರಿಂದಾಗಿ ಅಧಿಕೃತ ಅಭ್ಯರ್ಥಿಗಳಿಗೆ ಹಿನ್ನಡೆ ಉಂಟಾಗುವ ಆತಂಕ ಎದುರಾಗಿದೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಕೆ.ಶ್ರೀನಿವಾಸ್ ಕರಿಯಣ್ಣ, ಬಿಜೆಪಿ ಅಭ್ಯರ್ಥಿ ಅಶೋಕ ನಾಯ್ಕ್, ಜೆಡಿಎಸ್ನಿಂದ ಹಾಲಿ ಶಾಸಕಿಯಾಗಿರುವ ಶಾರದಾ ಪೂರ್ಯನಾಯ್ಕ್ ಕಣದಲ್ಲಿದ್ದಾರೆ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದೆ.
ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳು
ಕಾಂಗ್ರೆಸ್ ಬಂಡಾಯ : ಮಾಜಿ ಶಾಸಕ ಕರಿಯಣ್ಣ ಪುತ್ರ ಎಸ್.ಕೆ.ಶ್ರೀನಿವಾಸ್ ಕರಿಯಣ್ಣಗೆ ಕಾಂಗ್ರೆಸ್ ಅಭ್ಯರ್ಥಿ. ಆದರೆ, ಶಿವಮೊಗ್ಗ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಂಗ್ ಅಧ್ಯಕ್ಷೆ ಪಲ್ಲವಿ, ನಿವೃತ್ತ ಸರ್ಕಾರಿ ಅಧಿಕಾರಿ ಬಲದೇವಕೃಷ್ಣ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು.
ಪಕ್ಷದ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ರವಿಕುಮಾರ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಹೊಳೆಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ರವಿಕುಮಾರ್ ಪ್ರಸಿದ್ಧಿ ಪಡೆದಿದ್ದಾರೆ. ಆದ್ದರಿಂದ, ಕಾಂಗ್ರೆಸ್ ಮತ ಬ್ಯಾಂಕ್ಗೆ ವಿಭಜನೆ ಭೀತಿ ಇದೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಬಿಜೆಪಿ ಕಥೆ ಏನು? : ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಬಿ.ಅಶೋಕ್ ಅವರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಆದರೆ, ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಬಿಜೆಪಿ ಸದಸ್ಯ ಧೀರಜ್ ಹೊನ್ನವಿಲೆ, ನಾರಾಯಣಸ್ವಾಮಿ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಎಲ್ಲರೂ ಬೋವಿ ಸಮುದಾಯಕ್ಕೆ ಸೇರಿದ ನಾಯಕರು.
ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಬೋವಿ ಸಮಯದಾಯ ಪ್ರಬಲವಾಗಿದೆ. ಬೋವಿ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು ಎಂದು ಸ್ಥಳೀಯ ನಾಯಕರು ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು.
ಧೀರಜ್ ಹೊನ್ನವಿಲೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಬೋವಿ ಜನಾಂಗಕ್ಕೆ ಸೇರಿದ ನಾಯಕರು. ಆದ್ದರಿಂದ, ಬಿಜೆಪಿಗೆ ಮತ ವಿಭಜನೆ ಭೀತಿ ಎದುರಾಗಿದೆ.