'ಮಹದಾಯಿ ಬಿಕ್ಕಟ್ಟು ಪರಿಹಾರ ಕಾಣದಿರುವುದಕ್ಕೆ ಕಾಂಗ್ರೆಸ್ ಕಾರಣ'
ಶಿವಮೊಗ್ಗ, ಡಿಸೆಂಬರ್ 30: "ಮಹದಾಯಿ ಬಿಕ್ಕಟ್ಟು ಪರಿಹಾರ ಕಾಣದಿರುವುದಕ್ಕೆ ಕಾಂಗ್ರೆಸ್ ಕಾರಣ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಡಿಯುವ ನೀರಿನ ವಿಚಾರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ" ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಮಹದಾಯಿ ವಿಚಾರ ನ್ಯಾಯಾಧೀಕರಣ ಮೆಟ್ಟಿಲೇರಲು ಕಾಂಗ್ರೆಸ್ ಕಾರಣ. ಆದರೆ, ಇದೀಗ ಕೇಂದ್ರ ಸರ್ಕಾರದತ್ತ ಬೆಟ್ಟು ಮಾಡುತ್ತಿರುವ ಕಾಂಗ್ರೆಸ್ಸಿಗರು, ಪ್ರಧಾನಿ ನರೇಂದ್ರ ಮೋದಿಯನ್ನು ದೂರುವುದರಲ್ಲಿ ಅರ್ಥವಿಲ್ಲ ಎಂದು ಗುಡುಗಿದರು.
ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮಣ್ಣು ಮುಕ್ಕಲಿದೆ : ಈಶ್ವರಪ್ಪ
ಸಮಸ್ಯೆ ಇತ್ಯರ್ಥಪಡಿಸಲು ಬಿಜೆಪಿ ಪ್ರಾಮಾಣಿಕವಾಗಿ ಪ್ರಯತ್ನಪಟ್ಟಿದೆ. ಗೋವಾ ರಾಜ್ಯದ ಮುಖ್ಯಮಂತ್ರಿಗಳನ್ನು ಒಪ್ಪಿಸಲು ಸಿದ್ದರಿದ್ದೇವೆ. ಆದರೆ ಅಲ್ಲಿನ ಕಾಂಗ್ರೆಸ್ ನಾಯಕರನ್ನು ಒಪ್ಪಿಸುವಲ್ಲಿ ರಾಜಕಾರಣ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ನಾಳೆ (ಭಾನುವಾರ) ಬೆಂಗಳೂರಿಗೆ ಆಗಮಿಸುವ ಬಗ್ಗೆ ಮಾಹಿತಿ ನೀಡಿದ ಈಶ್ವರಪ್ಪ, ಡಿ.31 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಭೇಟಿ ನೀಡುವರು. ಅಂದು ಬೆಳಿಗ್ಗೆ 11.30 ರಿಂದ 12.30 ರವರೆಗೆ ಎಂಎಲ್ಎ, ಎಂಎಲ್ಸಿ ಹಾಗೂ ಸಂಸದರೊಂದಿಗೆ ವಿಶೇಷ ಸಭೆ ನಡೆಸುವರು.
ನಂತರ ವಿಧಾನಸಭಾ ಕ್ಷೇತ್ರಗಳ ಪ್ರಭಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ರಾಜ್ಯದ ಬಿಜೆಪಿ ಪದಾಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಲಿದ್ದಾರೆ. ಇದಾದ ನಂತರ ಸಂಜೆ 5 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದೆ.
ಮುಂದಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಭ್ಯರ್ಥಿ ಆಯ್ಕೆ ಕುರಿತಂತೆ ಸರ್ವೇ ಕಾರ್ಯ ನಡೆಸಲಾಗುತ್ತಿದೆ.
ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ಪೂರ್ಣಗೊಂಡ ಬಳಿಕ ವರದಿ ವರಿಷ್ಠರ ಕೈಸೇರಲಿದೆ. ಬಳಿಕವಷ್ಟೆ ಅಭ್ಯರ್ಥಿಗಳನ್ನು ಪಕ್ಷದ ರಾಷ್ಟ್ರೀಯ ನಾಯಕರು ಅಂತಿಮಗೊಳಿಸಲಿದ್ದಾರೆ ಎಂದರು.