ವಿಧಾನಪರಿಷತ್ ಚುನಾವಣೆ: ಬಿಜೆಪಿಯಿಂದ ಆಯನೂರು ಮಂಜುನಾಥ್ ಕಣಕ್ಕೆ?
ಶಿವಮೊಗ್ಗ, ನವೆಂಬರ್ 11: ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಲು ಬಿಜೆಪಿ ಮುಂದಾಗಿದೆ.ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಾದಿದೆ.
ನೈರುತ್ಯ ಪದವೀಧರರ ಕ್ಷೇತ್ರದಿಂದ ಮಾಜಿ ಸಂಸದ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ.
ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿದ್ದರೆ, ಕ್ಯಾ. ಗಣೇಶ್ ಕಾರ್ಣಿಕ್ ಹಾಲಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇವರಿಬ್ಬರ ಸದಸ್ಯತ್ವದ ಅವಧಿ 21 ಜೂನ್ 2018ಕ್ಕೆ ಅಂತ್ಯಗೊಳ್ಳಲಿದೆ.
ಹಲವು ಆಕಾಂಕ್ಷಿಗಳು: ಆದರೆ, ಈ ಬಾರಿ ಡಿ.ಎಚ್ ಶಂಕರಮೂರ್ತಿ ಬದಲಿಗೆ ಮಾಜಿ ಸಂಸದ ಆಯನೂರು ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಬಿ.ಜೆ.ಪಿ. ಮುಂದಾಗಿದೆ.
1988ರಿಂದ ಈ ಕ್ಷೇತ್ರದಿಂದ ಶಂಕರಮೂರ್ತಿ ಅವರು ಆಯ್ಕೆಯಾಗುತ್ತಾ ಬಂದಿದ್ದಾರೆ. ಶಂಕರಮೂರ್ತಿ ಅವರು ತಮಿಳುನಾಡಿನ ರಾಜ್ಯಪಾಲರಾಗುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ನೈರುತ್ಯ ಕ್ಷೇತ್ರದಲ್ಲಿ ಶಿವಮೊಗ್ಗ, ಉಡುಪಿ,ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹೊನ್ನಾಳಿ, ಚನ್ನಗಿರಿ ಕ್ಷೇತ್ರಗಳು ಸೇರಿವೆ.