ಚಿತ್ರಗಳು : ಜೋಗಕ್ಕೆ ಜಿಲ್ಲಾಧಿಕಾರಿ ಭೇಟಿ, ಸೌಲಭ್ಯಗಳ ಪರಿಶೀಲನೆ
ಶಿವಮೊಗ್ಗ, ಜೂನ್ 19 : ವಿಶ್ವಪ್ರಸಿದ್ಧ ಜೋಗದಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ಹಾಗೂ ನಿರ್ವಹಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಎಂ.ಲೋಕೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಸೋಮವಾರ ಜೋಗ ಜಲಪಾತ ತಾಣಕ್ಕೆ ಭೇಟಿ ನೀಡಿ, ಪ್ರವಾಸಿಗರಿಗೆ ಲಭ್ಯವಿರುವ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಜೋಗ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು.
ಮೈದುಂಬಿ ಧುಮ್ಮಿಕ್ಕುತ್ತಿದೆ ಜೋಗದ ಜಲಪಾತ
ಇನ್ನೂ ಮೂರು ತಿಂಗಳ ಕಾಲ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಆಗಮಿಸಲಿದ್ದಾರೆ. ಆದ್ದರಿಂದ, ಪ್ರವಾಸಿಗರ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಅವಘಡಗಳು ಸಂಭವಿಸಿದಂತೆ ಮುನ್ನಚ್ಚರಿಕೆ ಹಾಗೂ ಸೂಕ್ತ ಬಂದೋಸ್ತ್ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಜೋಗ ಜಲಪಾತ ವೀಕ್ಷಣೆಗೆ ಕೆಎಸ್ ಟಿಡಿಸಿಯಿಂದ ವಿಶೇಷ ಬಸ್
ಮಳೆಗಾಲದಲ್ಲಿ ಜೋಗಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಅದರಲ್ಲೂ ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಟ್ಟರೆ ಧುಮ್ಮಿಕ್ಕುವ ಜಲಪಾತವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. 1819 ಅಡಿಯ ಜಲಾಶಯದಲ್ಲಿ ಸದ್ಯ, 1764.75ರಷ್ಟು ನೀರಿನ ಸಂಗ್ರಹವಿದೆ.
ವಾಹನದ ಪಾರ್ಕಿಂಗ್ ವ್ಯವಸ್ಥೆ
ಜೋಗಕ್ಕೆ ಆಗಮಿಸುವ ಪ್ರವಾಸಿಗರ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡುವಂತೆ ಸೂಚಿಸಿದರು. ಈಗಾಗಲೇ ನಿರ್ಮಿಸಿರುವ ಪಾರ್ಕಿಂಗ್ ಲಾಟ್ ಅನ್ನು ಸೂಕ್ತವಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.
ದ್ವಿಚಕ್ರ ವಾಹನ ಹಾಗೂ ಲಘು ವಾಹನಗಳನ್ನು ಪ್ರತ್ಯೇಕ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವಂತೆ ನೋಡಿಕೊಳ್ಳಬೇಕು ಹಾಗೂ ಈ ಸ್ಥಳವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಹೇಳಿದರು.
ಪ್ಲಾಸ್ಟಿಕ್ ಮುಕ್ತ
ಜೋಗದ ಪರಿಸರವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಹಲವು ಬಾರಿ ಸೂಚನೆಗಳನ್ನು ನೀಡಲಾಗಿದೆ. ಆದರೂ ಪ್ರವಾಸಿಗರು ಈಗಲೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕುತ್ತಿರುವುದು ಕಂಡು ಬಂದಿದೆ ಈ ಬಗ್ಗೆ ಸೂಕ್ತ ಕ್ರಮ, ಪ್ರಚಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ, ಶೌಚಾಲಯಗಳ ಬಳಿ, ತೂಗು ಸೇತುವೆಯ ಬಳಿ ಪ್ರವಾಸಿಗರ ಪಾದಚಾರಿ ಮಾರ್ಗ, ಜೋಗ ವೀಕ್ಷಣಾಲಯದ ರಸ್ತೆಯ ಅಕ್ಕಪಕ್ಕದಲ್ಲಿರುವ ಅನುಪಯುಕ್ತ ತ್ಯಾಜ್ಯಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.
ಪ್ರವಾಸಿಗರ ಸುರಕ್ಷತೆಗೆ ಆದ್ಯತೆ
ಮಳೆಗಾದಲ ಪ್ರಸ್ತುತ ಮೂರು ತಿಂಗಳ ಅವಧಿಯಲ್ಲಿ ಹೆಚ್ಚಿನ ಪ್ರವಾಸಿಗರು ಜೋಗಕ್ಕೆ ಆಗಮಿಸುತ್ತಾರೆ. ಆದ್ದರಿಂದ, ಪ್ರವಾಸಿಗರ ಸುರಕ್ಷತೆ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಅವಘಡಗಳು ಸಂಭವಿಸಿದಂತೆ ಮುನ್ನಚ್ಚರಿಕೆ ವಹಿಸುವ ಜೊತೆಗೆ ಸೂಕ್ತ ಬಂದೋಬಸ್ತ್ ಮಾಡಬೇಕು ಎಂದು ನಿರ್ದೇಶ ನೀಡಿದರು.
ಮದ್ಯಪಾನ ಹಾಗೂ ಧೂಮಪಾನ ವಿರುದ್ಧ ಎಚ್ಚರಿಕೆ ಹಾಗೂ ಪ್ಲಾಸ್ಟಿಕ್ ಮುಕ್ತ ವಲಯದ ಕುರಿತು ಸೂಕ್ತ ಪ್ರಚಾರ ಫಲಕಗಳನ್ನು ಅಳವಡಿಸಿ ಜನರಿಗೆ ಮಾಹಿತಿ ನೀಡಬೇಕು. ಪ್ರವಾಸಿಗರು ತಿಂಡಿ ತಿನಿಸುಗಳನ್ನು ಎಲ್ಲೆಂದರಲ್ಲಿ ಬಿಸಾಡಿ ಪರಿಸರವನ್ನು ಹಾಳು ಮಾಡದಂತೆ ನೋಡಿಕೊಳ್ಳಬೇಕು. ಪ್ರವಾಸಿಗರಿಗೆ ಜಿಲ್ಲೆಯ ಇತರ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆಗೆ ಸೂಚನೆ
ಜೋಗದ ಕೆಳಭಾಗಕ್ಕೆ ತೆರಳಲು ಇರುವ ಮೆಟ್ಟಿಲುಗಳನ್ನು ಸ್ವಚ್ಚವಾಗಿಡಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗೆ ಸೂಚಿಸಿದರು. ಜೋಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮಳೆಗೆ ಗುಡ್ಡದ ಮಣ್ಣು ಕುಸಿದು ಬಿದ್ದು, ಕೆಲವು ಮರಗಳು ಸಹ ಬಿದ್ದಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಣ್ಣು ಕುಸಿತ ಸಾಧ್ಯತೆ ಇದೆ.
ರಸ್ತೆಗೆ ಬಿದ್ದ ಮಣ್ಣನ್ನು ಹಾಗೂ ಮರಗಳನ್ನು ತೆರವುಗೊಳಿಸಬೇಕು. ರಸ್ತೆಗೆ ಬೀಳುವಂತಹ ಮರಗನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.