ಶಿವಮೊಗ್ಗ : ತೀರ್ಥಹಳ್ಳಿಯಲ್ಲಿ ಹಂದಿ ಜ್ವರ, 14 ಪ್ರಕರಣ ಪತ್ತೆ
ಶಿವಮೊಗ್ಗ, ಸೆಪ್ಟೆಂಬರ್ 26 : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಹಂದಿ ಜ್ವರ ಕಾಣಿಸಿಕೊಂಡಿದೆ. ತಾಲೂಕಿನಲ್ಲಿ 14 ಪ್ರಕರಣಗಳು ಪತ್ತೆಯಾಗಿವೆ.
ತಾಲೂಕಿನ ಮೇಲಿನಕುರುವಳ್ಳಿ, ಮಹಿಷಿ, ದಬ್ಬಣಗದ್ದೆ, ಮೇಗರವಳ್ಳಿ ಮುಂತಾದ ಪ್ರದೇಶಗಳಲ್ಲಿ ಹಂದಿ ಜ್ವರ ಕಾಣಿಸಿಕೊಂಡಿದೆ. ಜ್ವರ ಪೀಡಿತರಿಗೆ ಚಿಕಿತ್ಸೆ ನೀಡಲು ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ವಿಶೇಷ ಘಟಕ ತೆರೆಯಲಾಗಿದೆ.
ಪ್ರತಿನಿತ್ಯ 20 ರಿಂದ 30 ಜನರು ಆಸ್ಪತ್ರೆಗೆ ಬರುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ. ಹಂದಿ ಜ್ವರದ ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನರ್ಸ್ಗಳ ಕೊರತೆ ಇತ್ತು. ಆದ್ದರಿಂದ, ಶಿವಮೊಗ್ಗದಿಂದ 25 ಜನರನ್ನು ಆಸ್ಪತ್ರೆಗೆ ಕರೆಸಿಕೊಳ್ಳಲಾಗಿದ್ದು, ಹಂದಿನ ಜ್ವರದಿಂದ ದಾಖಲಾದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
15 ರಿಂದ 20 ರೋಗಿಗಳ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಮಣಿಪಾಲ ಮತ್ತು ಶಿವಮೊಗ್ಗದ ಪ್ರಯೋಗಾಲಯಗಳಿಗೆ ಕಳಿಹಿಸಲಾಗಿದೆ. ಜಿಲ್ಲೆಯ ಹೊಸನಗರ, ಭದ್ರಾವತಿ, ಶಿಕಾರಿಪುರ ತಾಲೂಕಿನಲ್ಲಿಯೂ ಒಂದೊಂದು ಹಂದಿ ಜ್ವರದ ಪ್ರಕರಣ ದಾಖಲಾಗಿದೆ.
ಕೆಮ್ಮು ಮತ್ತು ನೆಗಡಿಯಿಂದಾಗಿ ಹಂದಿ ಜ್ವರದ ವೈರಸ್ ಹರಡುತ್ತದೆ. ಆದ್ದರಿಂದ, ಈ ಬಗ್ಗೆ ಜನರು ಎಚ್ಚರ ವಹಿಸಬೇಕು. ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಎಂದು ವೈದ್ಯರು ಜನರಿಗೆ ಕರೆ ನೀಡಿದ್ದಾರೆ.
ಹಂದಿ ಜ್ವರಕ್ಕೆ ಅಗತ್ಯವಿರುವ ಚಿಕಿತ್ಸೆ ತಾಲೂಕು ಆಸ್ಪತ್ರೆಯಲ್ಲಿ ಲಭ್ಯವಿದೆ. ವೃದ್ಧರು, ಗರ್ಭಿಣಿಯರು ಮತ್ತು ಮಕ್ಕಳು ಜ್ವರದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ವೈದ್ಯರು ತಿಳಿಸಿದ್ದಾರೆ.












Click it and Unblock the Notifications