ಅಪ್ರಾಪ್ತೆ ಮೇಲಿನ ಅತ್ಯಾಚಾರಿಗೆ 14 ವರ್ಷ ಜೈಲು ಶಿಕ್ಷೆ: ಶಿವಮೊಗ್ಗ ಕೋರ್ಟ್ ತೀರ್ಪು
ಶಿವಮೊಗ್ಗ, ಅಕ್ಟೋಬರ್ 7: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿ ಅರ್ಚಕನಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗ ನಗರದ ಜೈಲು ರಸ್ತೆಯ ದುರ್ಗಾ ಪರಮೇಶ್ವರಿ ದೇವಾಲಯದ ಅರ್ಚಕನಾಗಿದ್ದ ಶಿವಕುಮಾರ್, ಕಳೆದ 2016ರಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತೆ ಬಾಲಕಿಯ ಮೇಲೆ ಆತ್ಯಾಚಾರವೆಸಗಿದ್ದ. ನೀನು ಬುದ್ದಿಯಲ್ಲಿ ಮಂಕಾಗಿದ್ದೀಯ, ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆಯುವ ತರ ಪೂಜೆ ಮಾಡುತ್ತೇನೆಂದು ಆಮಿಷ ತೋರಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದನು.
ಅಪ್ರಾಪ್ತೆ ಹಾಗೂ ಆಕೆಯ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆಯನ್ನು ಮುಂದುವರೆಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಪೊಲೀಸರು ನ್ಯಾಯಾಲಕ್ಕೆ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪ್ರಸಾದ್ ಅವರು ಆರೋಪಿ ಶಿವಕುಮಾರ್ ಗೆ 14 ವರ್ಷ ಕಠಿಣ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಅಲ್ಲದೇ ದಂಡದ ರೂಪದಲ್ಲಿ ಬಂದ ಹಣವನ್ನು ಸಂತ್ರಸ್ತೆ ಬಾಲಕಿಗೆ ನೀಡುವಂತೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಕೆ.ಎಸ್.ಸತೀಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.