ಮನೆಗೆ ನುಗ್ಗಿದ ದುಷ್ಕರ್ಮಿಗಳಿಂದ 16 ವರ್ಷದ ಯುವತಿಯ ಕತ್ತು ಕೊಯ್ದು ಹತ್ಯೆ
ಶಿವಮೊಗ್ಗ, ಆಗಸ್ಟ್ 4: ಮನೆಯೊಂದಕ್ಕೆ ಭಾನುವಾರ ಬೆಳಗ್ಗೆ ನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದ ಯುವತಿಯ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿ, ಆ ನಂತರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ನಡೆದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಳಿಂಗನಹಳ್ಳಿಯ ನಿವಾಸಿ ಬಿ.ಆರ್. ಇಂದಿರಾ (16) ಮೃತ ಯುವತಿ. ಮಾರಕಾಯುಧಗಳಿಂದ ಹಲ್ಲೆ ಮಾಡಿದ್ದಲ್ಲದೆ, ದುಷ್ಕರ್ಮಿಗಳು ಈಕೆಯ ಕತ್ತು ಕೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಗೆ ತಂದೆ ಇಲ್ಲ ಎನ್ನಲಾಗಿದ್ದು, ತಾಯಿ ಮಾತ್ರ ಇದ್ದಾರೆ.

ಈಕೆಯ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಇಬ್ಬರಿಗೂ ಮಾತು ಬರುತ್ತಿರಲಿಲ್ಲ. ಅವರ ಜತೆಗೆ ಯುವತಿ ವಾಸವಾಗಿದ್ದಳು. ಇತ್ತೀಚೆಗೆ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗಕ್ಕೆ ಕಾಲೇಜಿಗೆ ಸೇರಿಕೊಂಡಿದ್ದಳು. ಈಗ ಆಕೆಯ ಹತ್ಯೆಯಾಗಿದೆ. ಇದಕ್ಕೆ ಏನು ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ.
ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಎಸ್ ಪಿ ಶಾಂತರಾಜು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications