Breaking; ಶಿವಮೊಗ್ಗದಲ್ಲಿ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್
ಶಿವಮೊಗ್ಗ, ಡಿಸೆಂಬರ್ 02; ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಸೋಂಕಿನ ಭೀತಿ ಎದುರಾಗಿದೆ. ಕೇರಳದಿಂದ ವಾಪಸ್ ಆಗಿದ್ದ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗದ ಗಾಡಿಕೊಪ್ಪ ಸಮೀಪದ ನಂಜಪ್ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದಾರೆ.
ಕೊರೊನಾ ಲಸಿಕೆಯ 2 ಡೋಸ್ ಪಡೆಯದಿದ್ದರೆ, ಮಾಲ್, ಪಾರ್ಕ್ಗಳಿಗೆ ಎಂಟ್ರಿ ಇಲ್ಲ
ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಒಪಿಡಿ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ಬಂದ್ ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಎಲ್ಲಾ ಸೇವೆಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೈಫ್ ಕೇರ್ ಆಸ್ಪತ್ರೆ ಆವರಣದೊಳಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
ಕೊರೊನಾ ಹೊಸ ರೂಪಾಂತರಿ ಆತಂಕ: ರಾಜ್ಯ ಸರ್ಕಾರದಿಂದ ಸುತ್ತೋಲೆ ಪ್ರಕಟ
ವಾಪಸ್ ಆಗಿದ್ದ ವಿದ್ಯಾರ್ಥಿಗಳು; ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಕೇರಳ ರಾಜ್ಯಕ್ಕೆ ತೆರಳಿದ್ದರು. ರಜೆ ಅವಧಿ ಮುಗಿದಿದ್ದು, ಪರೀಕ್ಷೆ ಇದ್ದುದ್ದರಿಂದ ಕಾಲೇಜಿಗೆ ಮರಳಿದ್ದರು. ಈ ವೇಳೆ ಅವರಿಗೆ ಕೊರೊನಾ ತಪಸಾಣೆಗೆ ಮಾಡಲಾಗಿತ್ತು. ಆಗ 23 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋವಿಡ್ ಸೋಂಕಿತರ ಸಂಖ್ಯೆ 306; ಎಸ್ಡಿಎಂನಲ್ಲಿ ನಿಯಂತ್ರಣಕ್ಕೆ ಕ್ರಮ
ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢವಾಗುತ್ತಿದ್ದಂತೆ ಅವರ ಪ್ರಾಥಮಿಕ ಸಂಪರ್ಕದಲ್ಲಿರುವವರ ಪತ್ತೆ ಕಾರ್ಯ ಆರಂಭವಾಗಿದೆ. ಅಲ್ಲದೆ ಇನ್ನಷ್ಟು ಮಂದಿಗೆ ಸೋಂಕು ತಗುಲಿರುವ ಆತಂಕವಿದೆ. ಹಾಗಾಗಿ ನಂಜಪ್ಪ ಲೈಫ್ ಕೇರ್ ಆಸ್ಪತ್ರೆ, ನರ್ಸಿಂಗ್ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಸುಮಾರು 700 ಮಂದಿಯನ್ನು ತಪಾಸಣೆ ಒಳಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಏನಂತಾರೆ ಜಿಲ್ಲಾಧಿಕಾರಿ?; ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. "ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಹಲವರ ಸ್ಯಾಂಪಲ್ ಸಂಗ್ರಹಿಸಿದ್ದೇವೆ. ಅದರ ಪರೀಕ್ಷಾ ವರದಿ ಬಂದ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ" ಎಂದು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಶೂನ್ಯಕ್ಕೆ ತಲುಪಿದ್ದವು. ಕಳೆದ ಮೂರ್ನಾಲ್ಕು ದಿನದಿಂದ ಮತ್ತೆ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 46 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ ಎಂಟು ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಮಂದಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 25 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ.
ಸಾವಿರದಾಚೆಗೆ ಸಾವಿನ ಸಂಖ್ಯೆ; ಕೊರೊನಾ ಎರಡು ಅಲೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿಗೆ ತುತ್ತಾಗಿ, ಮೃತರಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚಿದೆ. ಈವರೆಗೂ ಜಿಲ್ಲೆಯಲ್ಲಿ 1072 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದೆ ಕಾರಣಕ್ಕೆ ಜನರಲ್ಲಿ ಭೀತಿ ಉಂಟಾಗಿತ್ತು.
ಈಗ ಕೇರಳದಿಂದ ಹಿಂತಿರುಗಿದವರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಜನರಲ್ಲಿ ಭೀತಿ ಹೆಚ್ಚಿಸಿದೆ. ಸಮುದಾಯದ ಹಂತದಲ್ಲಿ ಕೊರೊನಾ ಹರಡದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಆದರೆ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಗೆ ನಿತ್ಯ ಸಾವಿರಾರು ಜನರು ಬಂದು ಹೋಗುತ್ತಾರೆ.