ಭದ್ರಾ ಜಲಾಶಯದಿಂದ 8 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
ಶಿವಮೊಗ್ಗ, ಅಕ್ಟೋಬರ್ 15: ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯ ಭರ್ತಿಯಾಗಿದ್ದು, ಇಂದು ಮುಂಜಾನೆ ನದಿಗೆ 8251 ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ.
186 ಅಡಿಗಳ ಪೂರ್ಣ ಮಟ್ಟದಲ್ಲಿ ಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಇಂದು ಮುಂಜಾನೆ 6 ಗಂಟೆಗೆ ಕ್ರಸ್ಟ್ ಗೇಟ್ ಮೂಲಕ ನದಿಗೆ 8251 ಕ್ಯೂಸೆಕ್ಸ್ ನೀರನ್ನು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ.
ಇಂದು ಮುಂಜಾನೆಯ ಮಾಹಿತಿಯಂತೆ 14,304 ಕ್ಯೂಸೆಕ್ಸ್ ನೀರು ಒಳಹರಿವಿದ್ದು, ಮಳೆ ಮತ್ತೆ ಮುಂದುವರೆದರೆ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ.
ಇನ್ನು ಬಾಳೆಹೊನ್ನೂರು ವ್ಯಾಪ್ತಿಯಿಂದ 15,092 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಇದೂ ಸಹ ಭದ್ರಾ ಮುಖ್ಯ ಜಲಾಶಯಕ್ಕೆ ಹರಿದುಬರುವ ಹಿನ್ನೆಲೆಯಲ್ಲಿ ಆಣೆಕಟ್ಟೆಯಿಂದ ಮತ್ತಷ್ಟು ನೀರನ್ನು ಹರಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ಎರಡು ದಿನಗಳಿಂದ ಸಂಜೆ ಹಾಗೂ ರಾತ್ರಿ ಸುರಿಯುತ್ತಿರುವ ಮಳೆಗೆ ಜನ ಕಂಗಾಲಾಗಿದ್ದು, ಮಳೆ ಜಿಲ್ಲೆಯಲ್ಲಿ ಹಲವು ಅವಾಂತರಗಳನ್ನು ಸೃಷ್ಟಿಸಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಹಾಗೂ ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಜಿಟಿ-ಜಿಟಿ ಮಳೆಯಾಗುತ್ತಿದ್ದು, ಮಳೆಗೆ ಜನ ಹೈರಾಣಾಗಿದ್ದಾರೆ. ಮಳೆ ಜೊತೆ ಮೈಕೊರೆವ ಚಳಿ ಸಹ ಇದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.