ಶಿವಮೊಗ್ಗದಲ್ಲಿ ಹೆಚ್ಚಾದ ಕೊರೊನಾ ಪ್ರಕರಣ; ಪರೀಕ್ಷೆ ಪ್ರಮಾಣವೂ ಹೆಚ್ಚಳ
ಶಿವಮೊಗ್ಗ, ಆಗಸ್ಟ್ 01: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬೆಡ್ ಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸಿದೆ. ಹೀಗಾಗಿ ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಇದುವರೆಗೆ 27029 ಜನರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. 24899 ನೆಗೆಟಿವ್ ವರದಿ ಬಂದಿದ್ದು 1727 ಪಾಸಿಟಿವ್ ಕಂಡು ಬಂದಿದೆ. ಇವರ ಪೈಕಿ 925 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 771 ಮಂದಿ ಮಾತ್ರ ವಿವಿಧ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದ್ದು, ಪ್ರತಿ ದಿನ 950 ಜನರ ಪರೀಕ್ಷೆ ನಡೆಸಬಹುದಾಗಿದೆ. ಇದರಿಂದಾಗಿ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾಗಿದೆ" ಎಂದು ತಿಳಿಸಿದರು.
ವೃದ್ಧನ ಅಂತ್ಯಕ್ರಿಯೆ ವಿಚಾರದಲ್ಲಿ ಮಹಾ ಎಡವಟ್ಟು ಮಾಡಿಕೊಂಡಿತಾ ಮೆಗ್ಗಾನ್ ಆಸ್ಪತ್ರೆ!
ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗ ಲಕ್ಷಣವಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಸ್ತುತ 233 ಮಂದಿ ಇದ್ದಾರೆ. ವಿವಿಧ ಕಡೆಗಳಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ 436ಮಂದಿ ಇದ್ದಾರೆ. ಇನ್ನೂ 550 ಬೆಡ್ ಉಪಯೋಗಕ್ಕೆ ಸಿದ್ಧವಾಗಿದ್ದು, 400 ಬೆಡ್ ಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಪ್ರಸ್ತುತ 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಪ್ರಸ್ತುತ 28 ವೆಂಟಿಲೇಟರ್ ಗಳು ಮೆಗ್ಗಾನ್ ನಲ್ಲಿ ಲಭ್ಯವಿದ್ದು, ಅಧಿಕ 37ವೆಂಟಿಲೇಟರ್ ಗಳು ಒಂದು ವಾರದ ಒಳಗಾಗಿ ಲಭ್ಯವಾಗಲಿವೆ. ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ತಕ್ಕಂತೆ ಮೂಲ ಸೌಲಭ್ಯಗಳನ್ನು ಕೂಡ ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು.
ಸಹಾಯವಾಣಿ: ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆಗಾಗಿ ದಾಖಲಾದವರು ತಮ್ಮ ಸಮಸ್ಯೆ ಅಹವಾಲುಗಳನ್ನು ಸಹಾಯವಾಣಿ ಸಂಖ್ಯೆ 08182-221010, 08182-220082 ಕರೆ ಮಾಡಿ ಸಲ್ಲಿಸಬಹುದಾಗಿದೆ. ಅಹವಾಲುಗಳಿಗೆ ತಕ್ಷಣ ಪ್ರತಿಕ್ರಿಯಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.