ಬಿಎಸ್ವೈಗೆ ಪೈಪೋಟಿ ನೀಡಲಿದ್ದಾರೆ ಆಮ್ ಆದ್ಮಿ ಅಭ್ಯರ್ಥಿ
ಶಿವಮೊಗ್ಗ, ಫೆ.21 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹ ಶಿವಮೊಗ್ಗದಲ್ಲಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ಸುರೇಶ್ ಕೋಟೇಕರ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಮ್ ಆದ್ಮಿ ಪಕ್ಷದ ನಗರ ಸಂಚಾಲಕ ಸುರೇಶ್ ಕೋಟೇಕರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಪಕ್ಷದ ಕೇಂದ್ರೀಯ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದೆ ಎಂದು ಹೇಳಿದ್ದಾರೆ.[ಆಮ್ ಆದ್ಮಿ ಭ್ರಷ್ಟರ ಪಟ್ಟಿಯಲ್ಲಿ ಯಡಿಯೂರಪ್ಪ]

ಆಮ್ ಆದ್ಮಿ ಪಕ್ಷ ಭ್ರಷ್ಟ ರಾಜಕಾರಣಿಗಳು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಅವರ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆಮ್ ಆದ್ಮಿ ಪಕ್ಷ ಬಿಡುಗಡೆ ಮಾಡಿದ ಕರ್ನಾಟಕದ ಭ್ರಷ್ಟ ರಾಜಕಾರಣಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಅವರು ಸಹವೊಬ್ಬರು ಆದ್ದರಿಂದ ಅವರ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. [ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು]
ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪ ಸ್ಪರ್ಧಿಸುವ ಅಭ್ಯರ್ಥಿಗಾಗಿ ಹುಡುಕಾಟ ಆರಂಭಿಸಿದ್ದೇವೆ. ಹಿರಿಯ ರೈತ ಮುಖಂಡ ಕಡಿದಾಳು ಶಾಮಣ್ಣ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದೆವು. ಆದರೆ, ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ. ಸೂಕ್ತ ಅಭ್ಯರ್ಥಿಗಾಗಿ ಪಕ್ಷ ಹುಡುಕಾಟ ಮುಂದುವರೆಸಿದೆ ಎಂದು ಸುರೇಶ್ ಹೇಳಿದ್ದಾರೆ.
ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಬರುವಂತೆ ಆಹ್ವಾನ ನೀಡಿದ್ದೇವೆ. ಒಂದು ಅಥವ ಎರಡು ದಿನ ಅರವಿಂದ್ ಕೇಜ್ರಿವಾಲ್ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಸುರೇಶ್ ತಿಳಿಸಿದರು. [ಗೀತಾ ಶಿವರಾಜ್ ಕುಮಾರ್ ಜೆಡಿಎಸ್ ಅಭ್ಯರ್ಥಿ]
ಈಗಾಗಲೇ ಯಡಿಯೂರಪ್ಪ ಅವರ ಸ್ಪರ್ಧೆಯಿಂದ ಶಿವಮೊಗ್ಗ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ ದಿ.ಬಂಗಾರಪ್ಪ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡುವುದಾಗಿ ಹೇಳಿದೆ, ಆದರೆ, ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ. ಕಾಂಗ್ರೆಸ್ ಸಹ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಈಗ ಆಮ್ ಆದ್ಮಿ ಅಭ್ಯರ್ಥಿ ಸಹ ಯಡಿಯೂರಪ್ಪ ಅವರಿಗೆ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.











Click it and Unblock the Notifications