ಕೊರೊನಾ ತಪಾಸಣೆ ಪ್ರಮಾಣ ಹೆಚ್ಚಳಕ್ಕೆ ಕ್ರಮ: ಶಿವಮೊಗ್ಗ ಜಿಲ್ಲಾಧಿಕಾರಿ
ಶಿವಮೊಗ್ಗ, ಆಗಸ್ಟ್ 19: ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳನ್ನು ಪತ್ತೆ ಹಚ್ಚಲು ತಪಾಸಣೆ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಸೂಚನೆ ನೀಡಿದರು.
Recommended Video
ಬುಧವಾರ ಜಿಲ್ಲಾ ಭವನ ಸಭಾಂಗಣದಲ್ಲಿ ಜಿಲ್ಲಾ ಸರ್ವೇಕ್ಷಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಗಂಟಲ ದ್ರವ ಸಂಗ್ರಹಿಸುವ ಕಾರ್ಯಕ್ಕೆ 19 ಸಂಚಾರಿ ತಂಡಗಳಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಂತದಲ್ಲಿ 63 ತಪಾಸಣಾ ತಂಡಗಳಿವೆ. ಶಿವಮೊಗ್ಗ ನಗರ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳಲ್ಲಿ ಸಹ ಗಂಟಲ ದ್ರವ ಸಂಗ್ರಹಿಸುವ ಕಾರ್ಯವನ್ನು ಆರಂಭಿಸಬೇಕು. ಇದಕ್ಕಾಗಿ ಐದು ಸಂಚಾರಿ ತಂಡಗಳನ್ನು ಸಜ್ಜುಗೊಳಿಸುವಂತೆ ತಿಳಿಸಿದರು.
ಒಂದೆರಡು ದಿನಗಳಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಗಂಟಲ ದ್ರವ ಪರೀಕ್ಷೆ ಆರಂಭವಾಗಲಿದ್ದು, ಅಲ್ಲಿಯೂ ಪ್ರತಿ ದಿನ 500 ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.

ಪ್ರಾಯೋಗಿಕವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಹೋಂ ಕ್ವಾರಂಟೈನ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಹೋಂ ಕ್ವಾರಂಟೈನ್ ನಲ್ಲಿರುವವರಿಗೆ ಅಗತ್ಯವಿರುವ ಸಾಧನಗಳನ್ನು ಖಾತ್ರಿಪಡಿಸಿ, ಅವರ ನಿರಂತರ ಮೇಲ್ವಿಚಾರಣೆಗೆ ವ್ಯವಸ್ಥೆ ಮಾಡಬೇಕು.
ಗ್ರಾಮೀಣ ಪ್ರದೇಶದಲ್ಲಿ ಕನಿಷ್ಟ 6 ಮಂದಿ ಹಾಗೂ ನಗರ ಪ್ರದೇಶದಲ್ಲಿ ಕನಿಷ್ಟ 10 ಮಂದಿ ಪ್ರಾಥಮಿಕ ಸೋಂಕಿತರನ್ನು ಗುರುತಿಸಿ ಅವರ ಮೇಲೆ ನಿಗಾ ಇರಿಸಬೇಕು. ಕೋವಿಡ್ ಕೇರ್ ಸೆಂಟರ್ ನಲ್ಲಿ ನಿಯೋಜಿಸಲಾಗಿರುವ ಆಯುರ್ವೇದಿಕ್ ವೈದ್ಯರು ಕರ್ತವ್ಯಕ್ಕೆ ತೆರಳಲು ಹಿಂದೇಟು ಹಾಕಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅನಧಿಕೃತವಾಗಿ ರಜೆ ಹಾಕಿರುವ ವೈದ್ಯರಿಗೆ ನೋಟಿಸು ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications