ಒಂದು ವರ್ಷದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭ; ಸಿಎಂ ಭರವಸೆ
ಶಿವಮೊಗ್ಗ, ಅಕ್ಟೋಬರ್ 19: ಜಿಲ್ಲೆಯ ಸೋಗಾನೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯು ಮುಂದಿನ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ತೀರ್ಮಾನಿಸಿ, ಅದಕ್ಕೆ ಅನುಮೋದನೆ ನೀಡಲಾಯಿತು. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
ಶಿಕಾರಿಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ ಚಾಲನೆ
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರದ ಉಡಾನ್ ಯೋಜನೆ ವ್ಯಾಪ್ತಿಗೆ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ವಿಮಾನ ಯಾನ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. ಜೊತೆಗೆ, ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಇದರಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕ ಪರಿಹಾರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕಲಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲೂ ಇದು ಅನುಕೂಲವಾಗಲಿದೆ ಎಂದು ಹೇಳಿದರು. ಈ ಸಂದರ್ಭ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾದಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು ಇತರರು ಇದ್ದರು.