1 ವರ್ಷದಲ್ಲಿ ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ಅಭಿವೃದ್ಧಿ: ಸಿಎಂ
ಶಿವಮೊಗ್ಗ, ಅಕ್ಟೋಬರ್ 20: ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಈಗಾಗಲೇ 30 ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಶಿವಮೊಗ್ಗ ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಸಿಎಂ ಯಡಿಯೂರಪ್ಪ, ಶಿವಶರಣೆ ಅಕ್ಕಮಹಾದೇವಿ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ ದೇಶದಲ್ಲಿಯೇ ವಿಶಿಷ್ಟ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು. ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಯೂ ಅಕ್ಕಮಹಾದೇವಿಯವರ ದರ್ಶನ ಪಡೆದು ಪುನೀತರಾಗುವುದರ ಜೊತೆಗೆ ಇರುವಷ್ಟು ಸಮಯ ಇಲ್ಲಿನ ಸುಂದರ ತಾಣದಲ್ಲಿ ಕಳೆಯುವ ಸಮಯ ಸದಾ ನೆನಪಿನಲ್ಲಿ ಉಳಿಯುವಂತಾಗಲಿದೆ ಎಂದರು.
ಜೊತೆಗೆ ಅಕ್ಕನ ಆದರ್ಶಗಳನ್ನು ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಲಿದೆ. ಇದರಿಂದಾಗಿ ಸತ್ ಚಿಂತನೆಯ ಸುಂದರ ಸಮಾಜ ನಿರ್ಮಾಣಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.
ಮುಂದಿನ 10 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇಲ್ಲಿನ ಸುಂದರ ತಾಣದಲ್ಲಿ ಪಾದಚಾರಿ ಮಾರ್ಗ, ವಾಯುವಿಹಾರ, ಒಂದು ಕಿ.ಮೀಗೂ ಹೆಚ್ಚಿನ ದೂರದ ದೋಣಿ ವಿಹಾರ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಕ್ಕ ಮಹಾದೇವಿ ಟ್ರಸ್ಟ್ ಅಧ್ಯಕ್ಷೆ ಡಾ.ಲೀಲಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.