ಉಕ್ಕಿನ ನಗರಿ ಭದ್ರಾವತಿಯಲ್ಲಿ RAF ಘಟಕಕ್ಕೆ ಶಂಕುಸ್ಥಾಪನೆ ಮಾಡಿದ ಅಮಿತ್ ಶಾ
ಶಿವಮೊಗ್ಗ, ಜನವರಿ 16: ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ(Rapid Action Force)ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಭದ್ರಾವತಿ ತಾಲ್ಲೂಕಿನ ಬುಳ್ಳಾಪುರದ ಮಿಲಿಟರಿ ಕ್ಯಾಂಪ್'ನಲ್ಲಿ ಶನಿವಾರ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಆರ್'ಎಎಫ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಶಂಕುಸ್ಥಾಪನೆ ಮಾಡಿದರು.
ನಂತರ ವೇದಿಕೆ ಕಾರ್ಯಕ್ರಮದ ಬಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅಮಿತ್ ಶಾ ಆರ್'ಎಎಫ್ ಘಟಕ ನಿರ್ಮಾಣಕ್ಕೆ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ಸಲ್ಲಿಸಿದರು. ಶೃಂಗೇರಿ ಶ್ರೀ ಶಂಕರ ಮಠದ ಋತ್ವಿಜರ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು.

ಮಧ್ಯಾಹ್ನ 3.45ಕ್ಕೆ ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್'ಗೆ ಬಂದಿಳಿದ ಗೃಹ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮಿಸಿದರು.

ಭೂಮಿ ಪೂಜೆ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಿ.ಕೆ. ಸಂಗಮೇಶ್ವರ್ ಪಾಲ್ಗೊಂಡಿದ್ದರು.












Click it and Unblock the Notifications