ಭದ್ರಾವತಿಯಲ್ಲಿ ಬೀದಿ ನಾಯಿಗಳ ಹತ್ಯೆ; ದೂರು ದಾಖಲು
ಶಿವಮೊಗ್ಗ, ಸೆಪ್ಟೆಂಬರ್ 10; ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸುಮಾರು 100ಕ್ಕೂ ಅಧಿಕ ನಾಯಿಗಳನ್ನು ಹೂತು ಹಾಕಿರುವ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಗ್ರಾಮ ಪಂಚಾಯಿತಿಯ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಬೀದಿ ನಾಯಿಗಳಿಗೆ ವಿಷಹಾಕಿ ಅವುಗಳನ್ನು ಬಳಿಕ ಹೂತು ಹಾಕಿರುವ ಘಟನೆ ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ನಡೆದಿದೆ. ಕಂಬದಾಳು-ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಂಗಳೂರು; ಗುಂಡು ಹಾರಿಸಿ ಬೀದಿ ನಾಯಿ ಹತ್ಯೆ
ಗ್ರಾಮದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ತಮ್ಮಡಿಹಳ್ಳಿಯಲ್ಲಿ ನಾಯಿಗಳನ್ನು ಜೀವಂತ ಸಮಾಧಿ ಮಾಡಲಾಗಿದೆ. ಗ್ರಾಮದಲ್ಲಿದ್ದ ಬೀದಿನಾಯಿಗಳು ಏಕಾಏಕಿ ಕಣ್ಮರೆಯಾಗಿದ್ದವು. ಗ್ರಾಮಸ್ಥರು ಈ ಕುರಿತು ಶಿವಮೊಗ್ಗದ ಪ್ರಾಣಿ ರಕ್ಷಣಾ ಕ್ಲಬ್ಗೆ ಮಾಹಿತಿ ಕೊಟ್ಟಿದ್ದರು.
ಟಿಬೆಟಿಯನ್ ನಿರಾಶ್ರಿತರ ಶಿಬಿರದಲ್ಲಿ ಬೀದಿ ನಾಯಿಗಳ ಆರೈಕೆ ಕೇಂದ್ರ
ಕ್ಲಬ್ ಸದಸ್ಯರು ಪೊಲೀಸರು ಮತ್ತು ಪಶು ವೈದ್ಯಾಧಿಕಾರಿಗಳ ಜೊತೆಗೆ ಗ್ರಾಮಕ್ಕೆ ಮಂಗಳವಾರ ಸಂಜೆ ಆಗಮಿಸಿದ್ದರು. ಪರಿಶೀಲನೆ ನಡೆಸಿದಾಗ ಬೀದಿನಾಯಿಗಳನ್ನು ಹೂತುಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೆಲವು ನಾಯಿಗಳನ್ನು ಜೀವಂತವಾಗಿ ಹೂತು ಹಾಕಿರುವ ಬಗ್ಗೆಯೂ ಅನುಮಾನ ವ್ಯಕ್ತಪಡಿಸಲಾಗಿದೆ.
ವಿಡಿಯೋ; ಪುತ್ತೂರಿನಲ್ಲಿ ಮಾಸ್ಕ್ ಧರಿಸಿ ಪೇಟೆಗೆ ಬಂದ ನಾಯಿ!
ದೂರು ದಾಖಲು; ಪ್ರಾಣಿ ರಕ್ಷಣಾ ಕ್ಲಬ್ ಸದಸ್ಯರು ಬುಧವಾರ ಭದ್ರಾವತಿ ಗ್ರಾಮೀಣ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸುಮಾರು 100ಕ್ಕೂ ಅಧಿಕ ನಾಯಿಗಳನ್ನು ಹೂತು ಹಾಕಲಾಗಿದೆ ಎಂಬುದು ಆರೋಪವಾಗಿದೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, "ಗ್ರಾಮ ಪಂಚಾಯಿತಿ ಅಧಿಕಾರಿಗಳು ನಾಯಿಗಳನ್ನು ಕೊಂದು ಅವುಗಳನ್ನು ಹೂತು ಹಾಕಿದ್ದಾರೆ. ಗ್ರಾಮ ಪಂಚಾಯಿತಿಯ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ" ಎಂದು ಹೇಳಿದ್ದಾರೆ.
ಪಶು ವೈದ್ಯಾಧಿಕಾರಿಗಳ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಒಟ್ಟು ಎಷ್ಟು ನಾಯಿಗಳನ್ನು ಕೊಂದು ಹಾಕಲಾಗಿದೆ ಎಂದು ಪೊಲೀಸರಿಗೆ ವರದಿ ನೀಡಲಿದ್ದಾರೆ. ಘಟನೆಗೆ ಬಗ್ಗೆ ಜನರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಮಂಗಗಳ ಹತ್ಯೆ; ಜುಲೈ ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಮಂಗಗಳನ್ನು ಕೊಲ್ಲಲಾಗಿತ್ತು. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕರ್ನಾಟಕ ಹೈಕೋರ್ಟ್ನಲ್ಲಿ ಸಹ ಈ ಕುರಿತು ಅರ್ಜಿ ಸಲ್ಲಿಕೆಯಾಗಿದೆ.
ಮಂಗಗಳು ಬೆಳೆಗಳನ್ನು ಹಾನಿ ಮಾಡುತ್ತಿವೆ ಎಂದು ದಂಪತಿಗಳು 40 ಸಾವಿರ ರೂ. ನೀಡಿ ಮಂಗಳನ್ನು ಹಿಡಿಯಲು ಸೂಚಿಸಿದ್ದರು. ಚೀಲದಲ್ಲಿ ಮಂಗಗಳನ್ನು ತುಂಬಿ ತಂದು ರಸ್ತೆ ಬದಿಯಲ್ಲಿ ಎಸೆಯಲಾಗಿತ್ತು. ಕೆಲವು ಮಂಗಗಳು ಜೀವಂತವಾಗಿದ್ದವು.
ಮಂಗ ಹಿಡಿಯಲು ಗುತ್ತಿಗೆ ನೀಡಿದ ದಂಪತಿಗಳು ಮತ್ತು ಮಂಗ ಹಿಡಿದಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದರು. ಕರ್ನಾಟಕ ಹೈಕೋರ್ಟ್ ಘಟನೆ ಬಗ್ಗೆ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿತ್ತು.
ಮಂಗಗಳನ್ನು ಹತ್ಯೆ ಮಾಡಿರುವವರ ವಿರುದ್ದ ಅ.ಕ್ರ.ನಂ. 93/21 ರಲ್ಲಿ ಕಲಂ 429 ಐಪಿಸಿ ಜೊತೆಗೆ 11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ ರೀತ್ಯಾ ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಜಾಮೀನು ನಿರಾಕರಿಸಲಾಗಿತ್ತು; ಹಾಸನ ಜಿಲ್ಲೆಯ ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಗ ಮಾರಣ ಹೋಮ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಾಸನದ ಘನ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದ್ದರು.
ಜುಲೈ 29 ರಂದು ಬೇಲೂರು ತಾಲ್ಲೂಕು ಬಿಕ್ಕೋಡು ಹೋಬಳಿ ಚೌಡನಹಳ್ಳಿ ಗ್ರಾಮದ ಸರ್ಕಾರಿ ರಸ್ತೆಯಲ್ಲಿ ಯಾರೋ ಮಂಗಗಳ ಶವಗಳನ್ನು ಎಸೆದಿರುವ ಬಗ್ಗೆ ಮಾಹಿತಿ ಬಂದಿತ್ತು. ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ 20 ಗಂಡು ಮತ್ತು 18 ಹೆಣ್ಣು ಮಂಗಗಳ ಶವ ಪತ್ತೆಯಾಗಿತ್ತು.
ಈ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಇರುವಾಗಲೇ ಭದ್ರಾವತಿಯಲ್ಲಿ ಬೀದಿ ನಾಯಿಗಳನ್ನು ಹೂತು ಹಾಕಲಾಗಿದೆ. ಈ ಘಟನೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಪ್ರಕರಣದ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ.